ವಿಧಾನ ಪರಿಷತ್ ಚುನಾವಣೆ; ಉಸ್ತುವಾರಿ ನೇಮಿಸಿದ ಬಿಜೆಪಿ
ಬೆಂಗಳೂರು, ಆಗಸ್ಟ್ 27; ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ 66 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರ ಕಳೆದುಕೊಂಡಿರುವ ಕರ್ನಾಟಕ ಬಿಜೆಪಿ ವಿಧಾನ ಪರಿಷತ್ ಚುನಾವಣೆಯತ್ತ ಗಮನ ಹರಿಸಿದೆ. ಶಿಕ್ಷಕರು, ಪದವೀಧರ ಕ್ಷೇತ್ರದಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿ ಶನಿವಾರ ಪ್ರಕಟಣೆ ಹೊರಡಿಸಿದ್ದಾರೆ.

2024ರ ಜೂನ್ನಲ್ಲಿ ನಡೆಯಲಿರುವ ವಿಧಾನ ಪರಿಷತ್ ಪದವೀಧರ/ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ ಪ್ರಮುಖ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸೋತ ಸಿ. ಟಿ. ರವಿ, ಬಿ. ಶ್ರೀರಾಮುಲುಗೆ ಪರಿಷತ್ ಚುನಾವಣೆ ಉಸ್ತುವಾರಿ ನೀಡಲಾಗಿದೆ. ಅಲ್ಲದೇ ಚುನಾವಣೆಗೆ ಮೊದಲು ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪಗೂ ಜವಾವ್ದಾರಿ ನೀಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಿ. ಟಿ. ರವಿಗೆ ನೈಋತ್ಯ ಪಧವೀಧರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ಜವಾಬ್ದಾರಿಯನ್ನು ನೀಡಲಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದ ಸಂಸದ, ಕೇಂದ್ರದ ಮಾಜಿ ಸಚಿವ ಡಿ. ವಿ. ಸದಾನಂದ ಗೌಡರಿಗೆ ಸಹ ಚುನಾವಣೆ ಹೊಣೆ ನೀಡಲಾಗಿದೆ.
ಉಸ್ತುವಾರಿಗಳು ಯಾರು?
* ಈಶಾನ್ಯ ಪದವೀಧರ ಕ್ಷೇತ್ರ - ಬಿ. ಶ್ರೀರಾಮುಲು
* ನೈಋತ್ಯ ಪದವೀಧರ ಕ್ಷೇತ್ರ - ಸಿ. ಟಿ. ರವಿ
* ಬೆಂಗಳೂರು ಪದವೀಧರ ಕ್ಷೇತ್ರ- ಆರ್. ಅಶೋಕ
* ಆಗ್ನೇಯ ಶಿಕ್ಷಕರ ಕ್ಷೇತ್ರ - ಡಿ. ವಿ. ಸದಾನಂದ ಗೌಡ
* ನೈಋತ್ಯ ಶಿಕ್ಷಕ್ಷರ ಕ್ಷೇತ್ರ - ಸಿ. ಟಿ. ರವಿ
* ದಕ್ಷಿಣ ಶಿಕ್ಷಕರ ಕ್ಷೇತ್ರ - ಕೆ. ಎಸ್. ಈಶ್ವರಪ್ಪ
* ಬೆಂಗಳೂರು ಶಿಕ್ಷಕರ ಕ್ಷೇತ್ರ - ಡಾ. ಸಿ. ಎನ್. ಅಶ್ವತ್ಥ ನಾರಾಯಣ
ಕಳೆದ ವಾರ ಬಿಜೆಪಿ ರಾಜ್ಯ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿತ್ತು. ಸಭೆಯಲ್ಲಿ ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ಬಳಿಕ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಪದವೀಧರ/ ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆಗೆ ಚುನಾವಣೆ ನಡೆಯುವ ಮೊದಲು 2 ಸ್ಥಾನಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಚುನಾವಣಾ ಆಯೋಗ ಉಪ ಚುನಾವಣೆ ವೇಳಾಪಟ್ಟಿಯನ್ನು ಯಾವಾಗ ಬೇಕಾದರೂ ಘೋಷಣೆ ಮಾಡಬಹುದು.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಿಂದ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಪುಟ್ಟಣ್ಣ ವಿಧಾನ ಪರಿಷತ್ ಸದಸ್ಯತ್ವದ ಅವಧಿ ಇನ್ನೂ ಇರುವಾಗಲೇ ರಾಜೀನಾಮೆ ನೀಡಿದ್ದರು. ಬಳಿಕ ಅವರು ಕಾಂಗ್ರೆಸ್ ಸೇರಿದ್ದರು.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆ ಒಳಗೊಂಡಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಪರಿಷತ್ ಸದಸ್ಯರ ಅವಧಿ 2026ರ ನವೆಂಬರ್ 11ರ ತನಕಇದೆ. ಆದ್ದರಿಂದ ಈಗ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಜೊತೆ ಮಂಗಳೂರು, ಉಡುಪಿ, ತುಮಕೂರು, ಕೊಡಗು, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಒಳಗೊಂಡ ನೈಋತ್ಯ ಪದವೀಧರ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಬೇಕಿದೆ. ಈ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿಯ ಆಯನೂರು ಮಂಜುನಾಥ್ ವಿಧಾನಸಭೆ ಚುನಾವಣೆ ಸಮಯದಲ್ಲಿ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.












Click it and Unblock the Notifications