ಈಶಾನ್ಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಿ
ಬೆಂಗಳೂರು, ಅಕ್ಟೋಬರ್ 05; ಭಾರತ ಚುನಾವಣಾ ಆಯೋಗ ವಿಧಾನ ಪರಿಷತ್ ಚುನಾವಣೆಗೆ ಸಿದ್ಧತೆಯನ್ನು ಆರಂಭಿಸಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ ನೀಡಿದೆ. ಅರ್ಜಿಗಳನ್ನು ಸ್ವೀಕರಿಸಲು ನವೆಂಬರ್ 6 ಕೊನೆಯ ದಿನವಾಗಿದೆ.
ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ದಪಡಿಸಿಸುವ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಹಾಯಕ ಮತದಾರರ ನೋಂದಣಾಧಿಕಾರಿ ಆಗಿರುವ ಕೊಪ್ಪಳ ತಹಶೀಲ್ದಾರ್ ತಿಳಿಸಿದ್ದಾರೆ.

ಹೈದ್ರಾಬಾದ್-ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ಈಶಾನ್ಯ ಪದವೀಧರ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಅರ್ಹ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದಾಗಿದೆ.
ಹೆಸರು ಸೇರಿಸುವುದು ಹೇಗೆ?; ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯನ್ನು ನೂತನವಾಗಿ ಸಿದ್ದಪಡಿಸುವ ಕಾರ್ಯವು ಪ್ರಾರಂಭವಾಗುತ್ತದೆ. ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ದಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 18 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲು ಪ್ರಾದೇಶಿಕ ಆಯುಕ್ತರು, ಕಲಬುರಗಿ ಹಾಗೂ ಮತದಾರರ ನೋಂದಣಾಧಿಕಾರಿಗಳು ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ, ಕಲಬುರಗಿ ಇವರು ಸೂಚಿಸಿರುತ್ತಾರೆ. ಆಸಕ್ತರು ಹೆಸರು ಸೇರಿಸಬಹುದಾಗಿದೆ.
ಮತದಾರರ ಪಟ್ಟಿಯನ್ನು ಸಿದ್ದಪಡಿಸಿಕೊಳ್ಳಲು ಅರ್ಜಿ ನಮೂನೆ 18ರಲ್ಲಿ ಅರ್ಜಿಯನ್ನು ಸ್ವೀಕರಿಸಲು ನವೆಂಬರ್ 6 ಕೊನೆಯ ದಿನ, ನವೆಂಬರ್ 23ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ನವೆಂಬರ್ 23ರಿಂದ ಡಿಸೆಂಬರ್ 9ರ ವರೆಗೆ ಅವಧಿ ನಿಗದಿಪಡಿಸಿದೆ ಮತ್ತು ಡಿಸೆಂಬರ್ 30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ.
ಚುನಾವಣಾ ಆಯೋಗ ವಿಧಾನ ಪರಿಷತ್ ಚುನಾವಣೆಗೆ ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಹ ಹೊಸದಾಗಿ ಪರಿಷ್ಕರಣೆ ಮಾಡುತ್ತಿದೆ. ಅರ್ಹ ಮತದಾರರು ಹೆಸರು ಸೇರಿಸಲು ಅವಕಾಶ ನೀಡಲಾಗಿದೆ.
ಈ ಕ್ಷೇತ್ರಕ್ಕೆ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಮತ್ತು ದಾವಣಗೆರೆ ಜಿಲ್ಲೆಯ (ಹೊನ್ನಾಳಿ, ನ್ಯಾಮತಿ ಮತ್ತು ಚನ್ನಗಿರಿ ತಾಲೂಕು) ಸೇರಿದೆ.












Click it and Unblock the Notifications