ಪರಿಷತ್; ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಿ
ಬೆಂಗಳೂರು, ಅಕ್ಟೋಬರ್ 03; ಚುನಾವಣಾ ಆಯೋಗ ಕರ್ನಾಟಕದ ವಿಧಾನ ಪರಿಷತ್ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ ನೀಡಲಾಗಿದೆ. ಹೆಸರು ಸೇರಿಸಲು ಅರ್ಹತೆ, ಮಾನದಂಡಗಳ ಮಾಹಿತಿ ಇಲ್ಲಿದೆ.
ಭಾರತ ಚುನಾವಣಾ ಆಯೋಗ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯನ್ನಾಗಿ ನೇಮಕ ಮಾಡಿದೆ. ಈ ಕ್ಷೇತ್ರಕ್ಕೆ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಮತ್ತು ದಾವಣಗೆರೆ ಜಿಲ್ಲೆಯ (ಹೊನ್ನಾಳಿ, ನ್ಯಾಮತಿ ಮತ್ತು ಚನ್ನಗಿರಿ ತಾಲೂಕು) ಸೇರಿದೆ.

ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಮತ್ತು ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿಗಳು, ಆಯುಕ್ತರು ಮಂಗಳೂರು, ಶಿವಮೊಗ್ಗ ಮಹಾನಗರ ಪಾಲಿಕೆ ಮೈಸೂರು ವಿಭಾಗ ಹಾಗೂ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಆಯಾಯ ಉಪ ವಿಭಾಗಕ್ಕೆ ಸಂಬಂಧಪಟ್ಟ ಎಲ್ಲಾ ಉಪ ವಿಭಾಗ ಅಧಿಕಾರಿಗಳು ವಿಭಾಗದ ಎಲ್ಲಾ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರ್ ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿದ್ದಾರೆ.
ಹೆಸರು ಸೇರ್ಪಡೆ ಮಾಡುವುದು ಹೇಗೆ?; ದಿನಾಂಕ 1/11/2023ಕ್ಕೆ ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದೆ. ಚುನಾವಣಾ ಆಯೋಗವು ಆಗಸ್ಟ್ 9ರ ಪತ್ರದನ್ವಯ ಕರ್ನಾಟಕ ನೈರುತ್ಯ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ಧಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 19ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಿದೆ.
ಅರ್ಜಿ ನಮೂನೆ 19ರಲ್ಲಿ ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕ ನವೆಂಬರ್ 6. ಕರಡು ಮತದಾರ ಪಟ್ಟಿ ಪ್ರಕಟಣೆ ನವೆಂಬರ್ 23ರಂದು ಆಗಲಿದೆ. ನವೆಂಬರ್ 23 ರಿಂದ ಡಿಸೆಂಬರ್ 9 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ದಿನಾಂಕವನ್ನು ನಿಗದಿ ಮಾಡಲಾಗಿದೆ. ಡಿಸೆಂಬರ್ 30ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ.
ಅರ್ಹತೆಗಳು: ಭಾರತದ ಪ್ರಜೆಯಾಗಿರುವ ಮತ್ತು ಈ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಮತ್ತು 1ನೇ ನವೆಂಬರ್ 2023ಕ್ಕೆ ಮೊದಲು 6 ವರ್ಷದ ಅವಧಿಯಲ್ಲಿ ಕನಿಷ್ಠ ಒಟ್ಟು ಮೂರು ವರ್ಷಗಳಷ್ಟು ದರ್ಜೆಯಲ್ಲಿ ಪ್ರೌಢಶಾಲಾಗಿಂತ ಕಡಿಮೆ ಇಲ್ಲದ ನಿರ್ದಿಷ್ಟ ಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹರು.
ಯಾವುದೇ ವ್ಯಕ್ತಿಯು ನಮೂನೆ 19ರಲ್ಲಿ ಅರ್ಜಿಯನ್ನು ಸಲ್ಲಿಸಿ ಶಿಕ್ಷಕರ ಕ್ಷೇತ್ರದಲ್ಲಿ ಮತದಾರರನ್ನಾಗಿ ನೋಂದಾಯಿಸಿಕೊಳ್ಳಲು ತನ್ನ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಂದ ತಾನು ಹಿಂದಿನ 6 ವರ್ಷಗಳಲ್ಲಿ ಒಟ್ಟು ಮೂರು ವರ್ಷಗಳು ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಕುರಿತು ಅರ್ಜಿಯೊಂದಿಗೆ ಪ್ರಮಾಣಪತ್ರವನ್ನು ಲಗತ್ತಿಸಿ ಸಲ್ಲಿಸತಕ್ಕದ್ದು.
ಅರ್ಜಿಯನ್ನು ಸಲ್ಲಿಸುವ ದಿನಾಂಕದಂದು ಯಾವುದೇ ವ್ಯಕ್ತಿಯು ಬೋಧನಾ ವೃತ್ತಿಯಲ್ಲಿ ನಿರತನಾಗಿರದಿದ್ದಲ್ಲಿ ಪ್ರಮಾಣ ಪತ್ರವನ್ನು ಅಂತಹ ವ್ಯಕ್ತಿಯು ಕೊನೆಯದಾಗಿ ಸೇವೆ ಸಲ್ಲಿಸಿದ ಸಂಸ್ಥೆಯ ಮುಖ್ಯಸ್ಥರಿಂದ ಸಹಿ ಮಾಡಿರತಕ್ಕದ್ದು. ಖುದ್ದಾಗಿ ಅಥವಾ ಅಂಚೆ ಮುಖಾಂತರ ಒಟ್ಟಾಗಿ ಸಲ್ಲಿಸಿದ ಅರ್ಜಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗಾಗಿ ಪರಿಗಣಿಸಲಾಗುವುದಿಲ್ಲ.
ಆದರೆ ಸಂಸ್ಥೆಯ ಮುಖ್ಯಸ್ಥರು ಅವರ ಸಿಬ್ಬಂದಿಯ ಎಲ್ಲಾ ಅರ್ಜಿಗಳನ್ನು ಒಟ್ಟಾರೆಯಾಗಿ ಕಳಿಸಬಹುದು. ಒಂದೇ ಕುಟುಂಬದ ಇತರೆ ಸದಸ್ಯರ ನಮೂನೆ 19 ಅರ್ಜಿಗಳನ್ನು ಕುಟುಂಬದ ಒಬ್ಬ ಸದಸ್ಯರು ಸಲ್ಲಿಸಬಹುದು ಹಾಗೂ ಪ್ರತಿ ಸದಸ್ಯನಿಗೆ ಸಂಬಂಧಿಸಿದಂತೆ ಮೂಲ ಪ್ರಮಾಣ ಪತ್ರ ಒದಗಿಸಬೇಕು.
ಅರ್ಜಿಯಲ್ಲಿ ತಪ್ಪು ಅಥವಾ ತಪ್ಪೆಂದು ಅವನು ತಿಳಿದಿರುವ ಅಥವಾ ನಂಬುವಂತಹ ಅಥವಾ ಸತ್ಯವೆಂದು ನಂಬಲಾಗದಿರುವಂತಹ ಹೇಳಿಕೆಗಳನ್ನು ಅಥವಾ ಘೋಷಣೆಗಳನ್ನು ಮಾಡುವ ಯಾವುದೇ ವ್ಯಕ್ತಿಯನ್ನು ಪ್ರಜಾ ಪ್ರಾತಿನಿಧ್ಯ ಅಧಿನಿಯಮ 1950ರ 31ನೇ ಪ್ರಕರಣದ ಮೇರೆಗೆ ಶಿಕ್ಷೆಗೆ ಗುರಿಪಡಿಸಲಾಗುವುದು.
ನಮೂನೆ 19ರಲ್ಲಿ ಅರ್ಜಿಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿ ನಿಯೋಜಿತ ಅಧಿಕಾರಿಗಳವರ ಕಚೇರಿಯಿಂದ ಪಡೆಯಬಹುದು. ಕೈಬರಹದ ಬೆರಳಚ್ಚು ಮಾಡಿದ ಅಥವಾ ಖಾಸಗಿಯಾಗಿ ಮುದ್ರಿಸಿದ ನಮೂನೆಗಳನ್ನು ಕೂಡ ಅಂಗೀಕರಿಸಲಾಗುವುದು. ನಮೂನೆ 19ರ ಅರ್ಜಿಗಳನ್ನು ಬಲ್ಕ್ (ಒಟ್ಟಿಗೆ) ಅರ್ಜಿ ಸ್ವೀಕರಿಸಲಾಗುವುದಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.












Click it and Unblock the Notifications