Get Updates
Get notified of breaking news, exclusive insights, and must-see stories!

ಫೆ.14ರಿಂದ ವಿಧಾನಮಂಡಲ ಜಂಟಿ ಅಧಿವೇಶನ; ಅಬ್ಬರಿಸಲಿದೆಯೇ ಹಿಜಾಬ್- ಕೇಸರಿಶಾಲು ವಿವಾದ?

ಬೆಂಗಳೂರು, ಫೆಬ್ರವರಿ 12: ಕರ್ನಾಟಕ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ಫೆಬ್ರವರಿ 14 (ಸೋಮವಾರ)ರಿಂದ ಆರಂಭವಾಗಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸ್ವಾಗತಕ್ಕೆ ಪೊಲೀಸ್ ಬ್ಯಾಂಡ್, ಅಶ್ವದಳದಿಂದ ತಾಲೀಮು ಸಹ ನಡೆದಿದೆ.

ಕರ್ನಾಟಕ ಸೇರಿದಂತೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡಿರುವ ಹಿಜಾಬ್ ಹಾಗೂ ಕೇಸರಿ ಸಂಘರ್ಷ ತಾರಕಕ್ಕೇರಿರುವ ಸಂದರ್ಭದಲ್ಲೇ ವಿಧಾನಮಂಡಲದ ಜಂಟಿ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ಯುದ್ಧಕ್ಕೆ ವೇದಿಕೆಯಾಗುವ ಸಾಧ್ಯತೆ ಇದೆ.

ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗದ ಮತಾಂತರ ಮಸೂದೆ: ಸರ್ಕಾರಕ್ಕೆ ಹಿನ್ನಡೆ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಫೆ.14ರ ಮಧ್ಯಾಹ್ನ 11 ಗಂಟೆಗೆ ವಿಧಾನಸಭೆಯ ಸಭಾಂಗಣದಲ್ಲಿ ವಿಧಾನಮಂಡಲದ ಎರಡೂ ಸದನಗಳ ಸದಸ್ಯರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮರುದಿನ ಅಂದರೆ ಮಂಗಳವಾರದಂದು ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯ ಮಂಡನೆ ಆಗಲಿದ್ದು, ಭಾಷಣದ ಮೇಲಿನ ಚರ್ಚೆ ಆರಂಭಗೊಳ್ಳಲಿದೆ.

Karnataka Legislature Joint Session Will Start From February 14

15ನೇ ವಿಧಾನಸಭೆ ಚಾಲ್ತಿಯಲ್ಲಿದ್ದು, ಸೋಮವಾರದಿಂದ 10 ದಿನಗಳ ಕಾಲ (ಫೆಬ್ರವರಿ 25ವರೆಗೂ) ನಡೆಯಲಿರುವ ಜಂಟಿ ಅಧಿವೇಶನದ ಅಂಗವಾಗಿ ವಿಧಾನಸೌಧದಲ್ಲಿ ಸಿದ್ಧತಾ ಕಾರ್ಯ ನಡೆದಿದೆ. ವಿಧಾನಸೌಧದ ಮೊಗಸಾಲೆಯನ್ನು ಸಿಬ್ಬಂದಿ ಸ್ವಚ್ಛಗೊಳಿಸುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಆದ್ಯತೆ ನೀಡಲಾಗಿದೆ.

ಅಧಿವೇಶನದಲ್ಲಿ ಎರಡು ವಿಧೇಯಕಗಳು ಮಂಡನೆಯಾಗಲಿವೆ. ಜೊತೆಗೆ ಇನ್ನೂ ಕೆಲ ವಿಧೇಯಕಗಳ ಮಂಡನೆಗೆ ಸರ್ಕಾರದ ವತಿಯಿಂದ ಸಿದ್ಧತೆ ನಡೆದಿದೆ. ಸುಮಾರು 2,000 ಕ್ಕೂ ಹೆಚ್ಚು ಪ್ರಶ್ನೆಗಳು ಸರ್ಕಾರದಿಂದ ಉತ್ತರ ಬಯಸಿ ಬಂದಿವೆ. ಅಧಿವೇಶನ ವೀಕ್ಷಿಸಲು ಈ ಬಾರಿ ಸಾರ್ವಜನಿಕರಿಗೂ ಅವಕಾಶ ಕಲ್ಪಿಸಲಾಗಿದೆ.

12ನೇ ಅಧಿವೇಶನ ಮುಗಿದ ಬಳಿಕ ಬಜೆಟ್​ ಅಧಿವೇಶನ ಮಾರ್ಚ್ ಮೊದಲ ವಾರದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್​ ಅನ್ನು ಮಾರ್ಚ್​ ಮೊದಲ ವಾರದಲ್ಲಿ ಮಂಡಿಸಲಿದ್ದಾರೆ. 2023 ಸಾರ್ವತ್ರಿಕ ಚುನಾವಣೆಗೂ ಮುನ್ನ ಆಡಳಿತಾರೂಢ ಬಿಜೆಪಿ ಸರಕಾರದ ಕೊನೆಯ ಬಜೆಟ್​ ಇದಾಗಲಿದೆ.

Karnataka Legislature Joint Session Will Start From February 14

ಸಾಮಾನ್ಯವಾಗಿ ಈವರೆಗೂ ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಇಂಗ್ಲಿಷ್‌ನಲ್ಲಿ ಭಾಷಣ ಮಾಡುತ್ತಿದ್ದರು. ಆದರೆ ಹಿಂದಿನ ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ಹಿಂದಿಯಲ್ಲಿ ಭಾಷಣ ಮಾಡಿದ್ದರು.

ಇದನ್ನು ಈಗಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದುವರೆಸುವ‌ ಸಾಧ್ಯತೆ ಇದೆ. ಈಗಾಗಲೇ ರಾಜ್ಯಪಾಲರ ಭಾಷಣದ ಪ್ರತಿಗಳನ್ನು ಹಿಂದಿ ಮತ್ತು ಕನ್ನಡ ಭಾಷೆಯಲ್ಲಿ ಮುದ್ರಿಸಲಾಗಿದೆ ಎಂದು ಸಚಿವಾಲಯದ ಉನ್ನತ ಮೂಲಗಳು ತಿಳಿಸಿವೆ.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ನಿರೀಕ್ಷೆಯಂತೆ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ವಿಚಾರವಾಗಿ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಇದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ಗದ್ದಲ ಏರ್ಪಡಲಿದೆ.

ಹಿಜಾಬ್- ಕೇಸರಿ ಶಾಲು ಚರ್ಚೆಗೆ?
ಉಭಯ ಸದನದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದವನ್ನು ಪ್ರಸ್ತಾಪಿಸುವ ಸಾಧ್ಯತೆ ಇದ್ದು, ಇದಕ್ಕೆ ಎಲ್ಲ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ ಎಂದು ತಿಳಿದುಬಂದಿದೆ. ಜೊತೆಗೆ ಬಿಜೆಪಿ ಮುಖಂಡರು ನೀಡಿರುವ ವಿವಾದಾತ್ಮಕ ಹೇಳಿಕೆಗಳು ಸದನದಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ.

ಸದನದಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ವಿರೋಧ ಪಕ್ಷಗಳು ಸಜ್ಜಾಗಿದ್ದರೆ, ವಿರೋಧ ಪಕ್ಷಗಳ ಮಾತಿಗೆ ತಿರುಗೇಟು ನೀಡಲು ಆಡಳಿತ ಪಕ್ಷ ಬಿಜೆಪಿಯೂ ಸಜ್ಜಾಗುತ್ತಿದೆ. ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಸಾಕಷ್ಟು ಮಹತ್ವದ ವಿಷಯಗಳ ಕುರಿತಾಗಿ ಸದನದಲ್ಲಿ ಚರ್ಚೆ ನಡೆಯಲಿದೆ.

ಆಡಳಿತ ಪಕ್ಷದ ವಿರುದ್ಧ ಮುಗಿಬೀಳಲು ಕಾಂಗ್ರೆಸ್‌ ಹಲವಾರು ತಂತ್ರಗಳನ್ನು ತನ್ನ ಬತ್ತಳಿಕೆಯಲ್ಲಿ ಇಟ್ಟುಕೊಂಡಿದೆ. ಈ ಎಲ್ಲ ನಿಟ್ಟಿನಲ್ಲಿ ಚರ್ಚೆ ನಡೆಸಲು ಸೋಮವಾರ ಸಂಜೆ ಆರು ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಇನ್ನು ವಿರೋಧ ಪಕ್ಷಗಳ ಮಾತಿನ ಬಾಣ ಎದುರಿಸಲು ಆಡಳಿತ ಪಕ್ಷ ಸಜ್ಜಾಗುತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಆರೋಪಗಳಿಗೆ ದಾಖಲೆ ಮೂಲಕ ಉತ್ತರ ಕೊಡಲು ಬಿಜೆಪಿ ಸಜ್ಜಾಗುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿಯಾಗಿ ಇದು ಎರಡನೇ ಅಧಿವೇಶನವಾಗಿದೆ.

ಈ ನಿಟ್ಟಿನಲ್ಲಿ ಆಡಳಿತ ಪಕ್ಷವಾಗಿ ಸರ್ಕಾರದ ನಿಲುವುಗಳನ್ನು ಸಮರ್ಥನೆ ಮಾಡಿಕೊಳ್ಳಲು ಸಿಎಂ ಅವರು ಶಾಸಕರು ಹಾಗೂ ಸಚಿವರಿಗೆ ಸೂಚನೆ ನೀಡಿದ್ದು, ವಿಪಕ್ಷಗಳ ಆರೋಪಕ್ಕೆ ಸೂಕ್ತ ರೀತಿಯಲ್ಲಿ ಉತ್ತರ ನೀಡಲು ಹಾಗೂ ದಾಖಲೆಗಳ ಜೊತೆಗೆ ಉತ್ತರ ನೀಡಲು ಸಜ್ಜಾಗಿ ಬರುವಂತೆ ಸೂಚನೆ ನೀಡಲಾಗಿದೆ.

ಚಳಿಗಾಲದ ಬೆಳಗಾವಿ ಅಧಿವೇಶನದಲ್ಲಿ ಆಡಳಿತ ಪಕ್ಷಕ್ಕೆ ಬಿಸಿ ಮುಟ್ಟಿಸಲು ವಿರೋಧ ಪಕ್ಷವಾಗಿ ಕಾಂಗ್ರೆಸ್ ವಿಫಲವಾಗಿತ್ತು. ಬಿಟ್‌ ಕಾಯಿನ್, ಭ್ರಷ್ಟಾಚಾರ ಆರೋಪ ಅಸ್ತ್ರಗಳು ಕಾಂಗ್ರೆಸ್ ಬತ್ತಳಿಕೆಯಲ್ಲಿ ಇದ್ದರೂ ಅದನ್ನು ಪ್ರಯೋಗ ಮಾಡಲು ಸಾಧ್ಯವಾಗಿರಲಿಲ್ಲ. ಕೊನೆ ಗಳಿಗೆಯಲ್ಲಿ ಸಚಿವ ಬೈರತಿ ಬಸವರಾಜ ವಿರುದ್ಧದ ಭೂಹಗರಣದ ಆರೋಪವನ್ನು ಎತ್ತಿಕೊಂಡರೂ ಅದೂ ಸಫಲವಾಗಿರಲಿಲ್ಲ. ಈ ನಿಟ್ಟಿನಲ್ಲಿ ಈ ಬಾರಿಯ ಅಧಿವೇಶನದಲ್ಲಿ ಸರಕಾರಕ್ಕೆ ಮುಜುಗರ ಮಾಡುವ ವಿಚಾರವನ್ನು ಕೈಗೆತ್ತಿಕೊಂಡು ಚರ್ಚೆ ನಡೆಸಲು ಕಾಂಗ್ರೆಸ್ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.

ನೀರಾವರಿ ಯೋಜನೆಗಳ ವಿಳಂಬ, ಮೇಕೆದಾಟು, ಮಹಾದಾಯಿ ಯೋಜನೆಗಳು ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ವಿಪಕ್ಷ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸಿತ್ತು. ಆದರೆ ಕೋವಿಡ್ ಕಾರಣಕ್ಕಾಗಿ ಪಾದಯಾತ್ರೆ ಅರ್ಧಕ್ಕೆ ಮೊಟಕುಗೊಳಿಸಲಾಗಿದೆ. ಇದೀಗ ಮೇಕೆದಾಟು ಮಹದಾಯಿ ಸೇರಿದಂತೆ ನೀರಾವರಿ ಯೋಜನೆಗಳಲ್ಲಿ ವಿಳಂಬವಾಗುತ್ತಿದೆ ಎಂಬುವುದನ್ನು ಸದನದಲ್ಲಿ ಪ್ರಸ್ತಾಪ ಮಾಡುವುದು ಕಾಂಗ್ರೆಸ್ ತಂತ್ರಗಾರಿಕೆಯಾಗಿದೆ.

Recommended Video

      ಲಾಯರ್ ಜಗದೀಶ್ ಮಗನ‌;ಮೇಲೆ ಹಲ್ಲೆ ಮಾಡಿದ್ದು ಯಾರು? ಕೋರ್ಟ್ ಮುಂದೆ ಹೈಡ್ರಾಮಾ | Oneindia Kannada

      ​ಬಿಟ್‌ ಕಾಯಿನ್, 40 ಪರ್ಸೆಂಟ್ ಕಮಿಷನ್ ಆರೋಪ
      ಬಿಟ್‌ ಕಾಯಿನ್ ಹಾಗೂ ರಾಜ್ಯ ಸರಕಾರದ ವಿರುದ್ಧ ಕೇಳಿಬಂದ 40 ಪರ್ಸೆಂಟ್ ಕಮಿಷನ್ ಆರೋಪವೂ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ರಾಜ್ಯ ಸರಕಾರವನ್ನು ಮುಜುಗರಕ್ಕೆ ಸಿಲುಕಿಸಲು ಈ ವಿಚಾರವನ್ನು ಪ್ರಸ್ತಾಪ ಮಾಡುವ ಉದ್ದೇಶವನ್ನು ಕಾಂಗ್ರೆಸ್ ಮುಖಂಡರು ಹೊಂದಿದ್ದಾರೆ ಎನ್ನಲಾಗಿದೆ.

      ಇನ್ನು ರೈತರ ಸಮಸ್ಯೆಗಳು, ಮೇಕೆದಾಟು, ಮಹಾದಾಯಿ ಸೇರಿದಂತೆ ನೀರಾವರಿ ಯೋಜನೆಗಳ ಜಾರಿಯಲ್ಲಿನ ವಿಳಂಬ ವಿಚಾರಗಳನ್ನು ಮುಂದಿಟ್ಟುಕೊಂಡು ಹೋರಾಟ ರೂಪಿಸುವ ಸಾಧ್ಯತೆ ಇದೆ. ಈ ಎಲ್ಲಾ ವಿಚಾರವಾಗಿ ಫೆಬ್ರವರಿ 14ರಂದು ನಡೆಯಲಿರುವ ಕಾಂಗ್ರೆಸ್ ಸಿಎಲ್‌ಪಿ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆಯಲಿವೆ.

      ಒಟ್ಟಿನಲ್ಲಿ ಹತ್ತು ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಹಲವು ವಿಚಾರಗಳ ಕುರಿತಾಗಿ ಚರ್ಚೆ ನಡೆಯಲಿದೆ. ಅಷ್ಟೇ ಅಲ್ಲದೆ ಕೆಲವೊಂದು ಮಹತ್ವದ ಮಸೂದೆಗಳು ಅಧಿವೇಶನದಲ್ಲಿ ಅಂಗೀಕಾರಗೊಳ್ಳಲಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+