ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ
ಬೆಳಗಾವಿ, ಸೆ.26: ಮುಂದಿನ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನವೆಂಬರ್ 11ರಿಂದ ನಡೆಸಲು ನಿರ್ಧರಿಸಲಾಗಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಡಿಹೆಚ್ ಶಂಕರಮೂರ್ತಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಚಳಿಗಾಲದ ಅಧಿವೇಶನ ಕುರಿತು ಈಗಾಗಲೇ ಸದನದ ಕಲಾಪಗಳ ಸಮಿತಿಯು ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ನಡೆಸಿದೆ. ನ. 11 ರಿಂದ 10 ದಿನಗಳ ಕಾಲ ನಡೆಸಲು ತಾತ್ಕಾಲಿಕವಾಗಿ ನಿರ್ಧರಿಸಲಾಗಿದೆ ಎಂದರು.
ರಾಜ್ಯ ಸರ್ಕಾರ ಈ ಕುರಿತು ಅಂತಿಮ ನಿರ್ಣಯ ಕೈಗೊಂಡು ವಿಧಾನ ಮಂಡಲದ ಉಭಯ ಸದನಗಳ ಸಭಾಪತಿಗಳೊಂದಿಗೆ ಚರ್ಚಿಸಿದ ನಂತರ ಅಂತಿಮ ನಿರ್ಣಯ ಕೈಗೊಳ್ಳಲಿದೆ ಎಂದರು.
ಪ್ರತಿವರ್ಷ 60 ದಿನಗಳ ಕಾಲ ಸದನ ನಡೆಸಲು ಈಗಾಗಲೇ ಮಸೂದೆ ಅಂಗೀಕರಿಸಲಾಗಿದೆ. ಪ್ರಸಕ್ತ ವರ್ಷ 32 ದಿನ ಅಧಿವೇಶನ ನಡೆದಿದ್ದು, ಬರುವ ಡಿಸೆಂಬರ್ ಅಂತ್ಯದೊಳಗೆ ಇನ್ನೂ 28 ದಿನಗಳ ಕಾಲ ಅಧಿವೇಶನ ನಡೆಸಬೇಕಿದೆ ಎಂದರು. ಬಾಕಿ ಉಳಿದಿರುವ 28 ದಿನಗಳಲ್ಲಿ 10 ದಿನ ಬೆಳಗಾವಿಯಲ್ಲಿ , ಉಳಿದ 18 ದಿನ ಬೆಂಗಳೂರಿನಲ್ಲಿ ಅಧಿವೇಶನ ನಡೆಸುವ ಕುರಿತು ಚಿಂತನೆ ನಡೆದಿದೆ. ಈ ಕುರಿತು ಮುಖ್ಯಮಂತ್ರಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಶಂಕರಮೂರ್ತಿ ಹೇಳಿದರು.
ನವೆಂಬರಿನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಕುರಿತು ವಿಧಾನ ಪರಿಷತ್ ಸಭಾಪತಿ ಶಂಕರಮೂರ್ತಿ ಅವರು ಅಧಿಕಾರಿಗಳ ಜತೆ ಭಾವಿ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಅವರು, ಅಧಿವೇಶನ ಸುಗಮವಾಗಿ ನಡೆಸಲು ವಿಧಾನ ಮಂಡಲದ ಸಚಿವಾಲಯ ಹಾಗೂ ಜಿಲ್ಲಾ ಆಡಳಿತ ಸಮನ್ವಯದಿಂದ ಈಗಿಂದಲೇ ಸಿದ್ಧತಾ ಕಾರ್ಯಗಳನ್ನು ಪ್ರಾರಂಭಿಸಬೇಕು ಎಂದು ಸೂಚಿಸಿದರು.
ಈ ಅಧಿವೇಶನಕ್ಕೆ ಆಗಮಿಸುವ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳು, ಗಣ್ಯರು ಹಾಗೂ ಇತರರಿಗೆ ಸೂಕ್ತವಾದ ವಸತಿ, ಊಟ ಹಾಗೂ ಸಾರಿಗೆ ವ್ಯವಸ್ಥೆ ಮಾಡುವ ಕುರಿತು ಸಭೆಯಲ್ಲಿ ಚರ್ಚಿಸಿದ ಅವರು, ಅಧಿಕಾರಿಗಳಿಗೆ ಕೆಲ ಸೂಚನೆಗಳನ್ನು ನೀಡಿದರು. ಅಧಿವೇಶನದ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ, ನಗರದ ಸ್ವತ್ಛತೆ, ಅಧಿವೇಶನ ಕಾಲಕ್ಕೆ ನಿರಂತರ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎನ್ ಜಯರಾಂ, ವಿಧಾನ ಪರಿಷತ್ ಕಾರ್ಯದರ್ಶಿ ಶ್ರೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಚಂದ್ರಗುಪ್ತ, ಮಹಾನಗರಸಭೆಯ ಆಯುಕ್ತ ಪ್ರಿಯಾಂಕಾ ಫ್ರಾನ್ಸಿಸ್ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.