ಪಟಾಕಿ ಗೋದಾಮು ದುರಂತ ಸೂಕ್ತ ತನಿಖೆಯಾಗಲಿ; ಬಿಜೆಪಿಯಿಂದ ತಲಾ 1 ಲಕ್ಷ ಲಕ್ಷ ಪರಿಹಾರ: ಬೊಮ್ಮಾಯಿ
ಬೆಂಗಳೂರು, ಆಗಸ್ಟ್ 30: ಹಾವೇರಿ ತಾಲೂಕಿನ ಆಲದಕಟ್ಟೆ ಗ್ರಾಮದ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಅತ್ಯಂತ ದುಖದ ಸಂಗತಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಬುಧವಾರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು, ರಾಜ್ಯ ಸರ್ಕಾರ ಈ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಈ ರೀತಿಯ ಅಪಾಯಕಾರಿ ಸ್ಥಳಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ರಕ್ಷಣೆಗೆ ಅಗತ್ಯವಿರುವ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳು ನಿಗಾವಹಿಸಬೇಕು. ಹಾವೇರಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಈ ರೀತಿಯ ಪಟಾಕಿ ಸಿಡಿಮದ್ದು ದಾಸ್ತಾನು ಕೇಂದ್ರಗಳ ಕುರಿತು ಪರಿಶೀಲನೆ ನಡೆಸಿ ಕಾರ್ಮಿಕರಿಗೆ ಸೂಕ್ತ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನೂ ಬೆಂಕಿ ಅವಘಡದಲ್ಲಿ ಸಜೀವ ದಹನವಾಗಿರುವ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣ ಸೂಕ್ತ ಪರಿಹಾರ ನೀಡಬೇಕು. ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಮಾಜಿ ಮುಖ್ಯ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.
ಬಿಜೆಪಿಯಿಂದ ತಲಾ ಒಂದು ಲಕ್ಷ ಪರಿಹಾರ
ಬೆಂಕಿ ಅವಘಡದಲ್ಲಿ ಸಜೀವ ದಹನವಾಗಿರುವ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಬಿಜೆಪಿ ವತಿಯಿಂದ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.












Click it and Unblock the Notifications