ಸಿದ್ದರಾಮಯ್ಯನವರು ಗುಂಡುಕಲ್ಲು ಇದ್ದ ಹಾಗೆ ಇದ್ದಾರೆ: ಜಿ. ಪರಮೇಶ್ವರ್ ಹಿಂಗಂದಿದ್ಯಾಕೆ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಾತನಾಡಿದ್ದಾರೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವ ಪಾತ್ರವೂ ಇಲ್ಲ. ಸಿದ್ದರಾಮಯ್ಯ ಅವರು ಯಾವುದೇ ಒಂದು ಕಡತಕ್ಕೂ ಸಹಿಯನ್ನೇ ಮಾಡಿಲ್ಲ. ಅಧಿಕಾರ ದುರ್ಬಳಕೆಯನ್ನೂ ಅವರು ಮಾಡಿಲ್ಲ. ನ್ಯಾಯಕ್ಕಾಗಿ ಹೈಕೋರ್ಟ್ ಮೊರೆ ಹೋಗಿದ್ವಿ, ಅದಕ್ಕೆ ವಿರುದ್ಧವಾದ ತೀರ್ಪು ಪ್ರಕಟವಾಗಿದೆ. ಈ ತೀರ್ಪನ್ನು ಗೌರವಿಸುತ್ತೇವೆ ಎಂದು ಜಿ. ಪರಮೇಶ್ವರ್ ಅವರು ಹೇಳಿದ್ದಾರೆ. ಆದರೆ,
ಈ ತೀರ್ಪಿನಿಂದಾಗಿ ನಮಗೆ ನ್ಯಾಯ ಸಿಗಲಿಲ್ಲವೇನು ಅನಿಸಿದೆ. ಮುಂದೆ ಏನು ಮಾಡಬೇಕು ಹಾಗೂ ನ್ಯಾಯಾಂಗ ಹೋರಾಟದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕು, ಅಧಿಕಾರ ಬಿಟ್ಟು ಇಳಿಯಬೇಕು ಎಂದು ವಿರೋಧ ಪಕ್ಷಗಳು ಹೇಳುತ್ತಿವೆ. ಈ ರೀತಿ ಯಾವುದೂ ಆಗುವುದಿಲ್ಲ. ಮುಂದೆ ನ್ಯಾಯಾಂಗ ಹೋರಾಟ ಇರುವುದರಿಂದ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸುದೀರ್ಘ ನಲವತ್ತು ವರ್ಷದ ರಾಜಕೀಯ ಜೀವನದಲ್ಲಿ ಯಾವುದೇ ಒಂದೇ ಒಂದು ಆರೋಪವೂ ಬಂದಿಲ್ಲ. ರಾಜಕೀಯ ದುರುದ್ದೇಶದಿಂದ ಈ ರೀತಿ ಮಾಡಿದ್ದಾರೆ. ಯಾರಿಗಾದರೂ ಆರೋಪ ಬಂದರೆ ನೋವಾಗುವುದು ಸಹಜ. ಇದಕ್ಕೆ ಹೋರಾಟ ಮಾಡಬೇಕಲ್ಲವೇ, ವಿಪಕ್ಷದವರು ರಾಜಕೀಯ ಉದ್ದೇಶದಿಂದ ಮಾಡಿರುವುದನ್ನು ಜನರ ಮುಂದೆ ತೆಗೆದುಕೊಂಡು ಹೋಗಿ ಹೇಳುತ್ತೇವೆ ಎಂದಿದ್ದಾರೆ.
ಹೈಕೋರ್ಟ್ನಲ್ಲಿ ವಕೀಲರು ವಾದ ಮಾಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಏನಿದೆ ಹೇಳಿ ಎಂದು ಎಂಬುದನ್ನು ಹೇಳಿ. ಈ ಬಗ್ಗೆ ಹೇಳುತ್ತಿಲ್ಲವಲ್ಲ ಎಂದು ಜಡ್ಜ್ ಅವರೇ ಹೇಳಿದ್ದಾರೆ. ಮುಖ್ಯಮಂತ್ರಿಯವರ ಪಾತ್ರ ಏನು ಎಂಬುದು ಜಡ್ಜ್ಮೆಂಟ್ನಲ್ಲಿ ಎಲ್ಲಿಯೂ ಕಾಣಿಸಿಲ್ಲ. ದ್ವಿಸದಸ್ಯ ಪೀಠ, ಸುಪ್ರೀಂಕೋರ್ಟ್ಗೆ ಹೋಗುವ ಬಗ್ಗೆ ಮುಖ್ಯಮಂತ್ರಿಯವರು ಮತ್ತು ಅವರ ಕಾನೂನು ಸಲಹೆಗಾರರು ತೀರ್ಮಾನ ಮಾಡುತ್ತಾರೆ. ಲೋಕಾಯುಕ್ತಕ್ಕೆ ರಾಜ್ಯಪಾಲರು ಕಡತಗಳನ್ನು ಲೋಕಾಯುಕ್ತಕ್ಕೆ ವಾಪಸ್ ಕಳಿಸಿರಬಹುದು. ಲೋಕಾಯುಕ್ತದವರು ಸ್ಪಷ್ಟನೆ ನೀಡಿ, ಆ ಕಡತಗಳನ್ನು ರಾಜ್ಯಪಾಲರಿಗೆ ವಾಪಸ್ ಕಳುಹಿಸಿದ್ದಾರೆ. ರಾಜ್ಯಪಾಲರು ತಮ್ಮ ಬಲವನ್ನು ಈ ಪ್ರಕರಣಗಳಿಗೂ ಉಪಯೋಗಿಸಬೇಕು ಎಂದು ಪರಮೇಶ್ವರ್ ಅವರು ಆಗ್ರಹಿಸಿದ್ದಾರೆ.
ಕುಮಾರಸ್ವಾಮಿಯ ಮೇಲೂ ಇದೇ ಅಪ್ಲೈ ಮಾಡಲಿ
ಹೈಕೋರ್ಟ್ನಿಂದ ರಾಜ್ಯಪಾಲರಿಗೆ ಬಲ ಬಂದಿರಬಹುದು. ಅದನ್ನು ಎಲ್ಲರಿಗೂ ಅಪ್ಲೈ ಮಾಡಬೇಕು. ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ಧನಾ ರೆಡ್ಡಿ ಅವರಿಗೆ ಅಪ್ಲೈ ಮಾಡಬೇಕಲ್ಲವೇ ಎಂದು ಜಿ ಪರಮೇಶ್ವರ್ ಅವರು ಪ್ರಶ್ನೆ ಮಾಡಿದ್ದಾರೆ. ಬಲ ಬಂದಿದೆ ಎಂದು ಹೇಳಿ ಒಬ್ಬರಿಗೆ, ಒಂದು ವರ್ಗಕ್ಕೆ ಮಾಡುವುದು ಸಮಂಜಸವೂ ಅಲ್ಲ, ನ್ಯಾಯ ಎಂದೂ ಅನ್ನಿಸುವುದಿಲ್ಲ ಎಂದು ಹೇಳಿದ್ದಾರೆ.
ಹೈಕಮಾಂಡ್ ನಿರ್ಧಾರ
ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಮತ್ತು ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರದ ಮೇಲೆ ನಾವು ಮುಂದುವರಿಯುತ್ತೇವೆ. ಬಿಜೆಪಿಯವರ ಉದ್ದೇಶವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎನ್ನುವುದು. ವಿರೋಧ ಪಕ್ಷಗಳು ಹೋರಾಟ ಮಾಡುವುದರಲ್ಲಿ ಆಶ್ಚರ್ಯವೇನು ಇಲ್ಲ. ಯಾವುದೇ ಕಾರಣಕ್ಕೆ ರಾಜೀನಾಮೆ ನೀಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದೇವೆ. ಅವರು ರಾಜೀನಾಮೆ ಕೊಡುವುದು ಸಹ ಇಲ್ಲ.
ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಇಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಪಕ್ಷದ ಒಳಗೆ ಯಾವುದೇ ರೀತಿಯ ಒತ್ತಡವಿಲ್ಲ. ಬಿಜೆಪಿಯವರು ಪದೇಪದೆ ರಾಜೀನಾಮೆ ಕೊಡಬೇಕು ಎಂದು ಹೇಳುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದ್ದಾರೆ. ಪಕ್ಷದ ಒಳಗೆ ಆ ರೀತಿಯ ವ್ಯತ್ಯಾಸಗಳಾಗಲಿ ಅಥವಾ ಭಾವನೆಗಳಾಗಲಿ ಇಲ್ಲ. ಹೈಕಮಾಂಡ್ ನಿಮ್ಮ ಜೊತೆಗಿದೆ ಎಂದು ಕೆ.ಸಿ.ವೇಣುಗೋಪಾಲ್ ಮತ್ತು ಸುರ್ಜೇವಾಲಾ ಅವರು ಹೇಳಿದ್ದಾರೆ. ಸಿದ್ದರಾಮಯ್ಯನವರು ವೀಕ್ ಆಗಿದ್ದಾರಾ ಅಂತ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನಿಮಗೆ ಹಂಗೆ ಅನ್ಸುತ್ತಾ... ನಮಗೆ ಏನು ಆ ರೀತಿ ಅನ್ನಿಸುವುದಿಲ್ಲ. ಸಿದ್ದರಾಮಯ್ಯನವರು ಗುಂಡುಕಲ್ಲು ಇದ್ದ ಹಾಗೆ ಇದ್ದಾರೆ. ಯಾಕೆ ವೀಕ್ ಆಗ್ತಾರೆ ನಮಗೇನು ಹಂಗ್ ಅನ್ಸಿಲ್ಲ. ನಿಮ್ಮ ಕ್ಯಾಮೆರಾ ಕಣ್ಣಲ್ಲಿ ಏನು ಬರುತ್ತೋ ಗೊತ್ತಾಗಲ್ಲ ಎಂದು ಹೇಳಿದ್ದಾರೆ.












Click it and Unblock the Notifications