ಲಿಂಗಸುಗೂರು ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ, ಬಂಡಿ ರಾಜೀನಾಮೆ
ಲಿಂಗಸುಗೂರು (ರಾಯಚೂರು), ಜನವರಿ 22: ರಾಯಚೂರು ಜಿಲ್ಲೆಯ ಲಿಂಗಸುಗೂರು ಕ್ಷೇತ್ರ ಬಿಜೆಪಿ ಮುಖಂಡ ಸಿದ್ದು ವೈ.ಬಂಡಿ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿದ್ದ ಲಿಂಗಸುಗೂರಿನ ಸಿದ್ದು ವಾಯ್ ಬಂಡಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಳುಹಿಸಿದ್ದಾರೆ.
ಲಿಂಗಸುಗೂರಿನಿಂದ ಅಸೆಂಬ್ಲಿಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೈ ತಪ್ಪುವ ಹಿನ್ನೆಲೆಯಲ್ಲಿ ಸಿದ್ದು ಬಂಡಿ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿಯಿದೆ. ಬಿಜೆಪಿಗೆ ಗುಡ್ ಬೈ ಹೇಳುವ ಮೂಲಕ ಬಂಡಾಯ ಸಾರಿದ್ದಾರೆ. ಜಿಲ್ಲಾ, ತಾಲೂಕು ಘಟಕಗಳಲ್ಲಿ ಬಂಡಿ ಬೆಂಬಲಿತ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಿದೆ.
ಇತ್ತೀಚೆಗೆ ಜೆಡಿಎಸ್ ಶಾಸಕ ಮಾನಪ್ಪ ವಜ್ಜಲ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ವಜ್ಜಲ್ ಅವರ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಆದರೆ, ಬಿಜೆಪಿ ಸೇರಿದ ಬಳಿಕ ವಜ್ಜಲ್ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ನಿಚ್ಚಳವಾಗಿದ್ದು, ಈ ಹಿನ್ನೆಲೆಯಲ್ಲಿ ಬಂಡಿ ಅವರು ಬಂಡಾಯ ಎದ್ದಿದ್ದಾರೆ.
ಕಳೆದ 15 ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯರಾಗಿರುವ ಬಂಡಿ ಅವರು ಕಳೆದ ವಿಧನಾಸಭಾ ಚುನಾವಣೆಯಲ್ಲಿ ಬಿಎಸ್ಆರ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಬಿಎಸ್ಆರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿದ್ದು ಬಂಡಿ 25 ಸಾವಿರಕ್ಕೂ ಹೆಚ್ಚು ಮತ ಪಡೆದಿದ್ದರು.