ವೀರಶೈವ ಲಿಂಗಾಯತ ಎರಡೂ ಒಂದೇ : ವೀರಶೈವ ಮಹಾಸಭಾ
ಬೆಂಗಳೂರು, ಮಾರ್ಚ್ 23 : ಲಿಂಗಾಯತ ಸಮುದಾಯಕ್ಕೆ ಅಲ್ಪ ಸಂಖ್ಯಾತ ಸ್ಥಾನಮಾನ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಅಖಿಲ ಭಾರತ ವೀರಶೈವ ಮಹಾಸಭಾ ಖಂಡಿಸಿದೆ.
ಬೆಂಗಳೂರಿನ ಸದಾಶಿವ ನಗರದಲ್ಲಿ ಶುಕ್ರವಾರ ಅಖಿಲ ಭಾರತ ವೀರಶೈವ ಮಹಾಸಭಾದ ಸಭೆ ನಡೆಯಿತು. ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಶಾಮನೂರು ಶಿವಶಂಕರಪ್ಪ ಅವರು, 'ವೀರಶೈವ ಲಿಂಗಾಯತ ಎರಡೂ ಒಂದೇ. ವೀರಶೈವ ಸಮಾಜವನ್ನು ಒಡೆಯುವುದು ಸರಿಯಲ್ಲ' ಎಂದು ಹೇಳಿದರು.

'ವೀರಶೈವ ಲಿಂಗಾಯತ ಎರಡೂ ಒಂದೇ, ಆದ್ದರಿಂದ, ರಾಜ್ಯ ಸರ್ಕಾರದ ನಿರ್ಧಾರವನ್ನು ಸಭೆಯಲ್ಲಿ ಖಂಡಿಸಲಾಗಿದೆ. ಖಂಡನಾ ನಿರ್ಣಯವನ್ನು ಅಂಗೀಕರಿಸಲಾಗಿದೆ' ಎಂದರು.
'ಲಿಂಗಾಯತ ಮತ್ತು ವೀರಶೈವ ಒಂದೇ ಎಂದು 2013ರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಈ ಪತ್ರವನ್ನು ಪರಿಗಣಿಸಬೇಕು' ಎಂದು ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳಲಾಗಿದೆ.
ಇದರಿಂದಾಗಿ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಮತ್ತೊಂದು ಪರ್ವ ಆರಂಭವಾದಂತೆ ಕಾಣುತ್ತಿದೆ. ಈಗಾಗಲೇ ಕರ್ನಾಟಕ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಪರಿಗಣಿಸುವಂತೆ ಕೇಂದ್ರ ಸರ್ಕಾರದ ಶಿಫಾರಸು ಮಾಡಲು ನಿರ್ಧಾರವನ್ನು ಕೈಗೊಂಡಿದೆ.












Click it and Unblock the Notifications