ಕುಮಾರಸ್ವಾಮಿ ಸಂಪುಟ ಸೇರುವ ಕಾಂಗ್ರೆಸ್ ಶಾಸಕರ ಪಟ್ಟಿ
Recommended Video

ಬೆಂಗಳೂರು, ಸೆಪ್ಟೆಂಬರ್ 28 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟ ವಿಸ್ತರಣೆಗೆ ಒಪ್ಪಿಗೆ ಸಿಕ್ಕಿದೆ. ಕಾಂಗ್ರೆಸ್ ಪಕ್ಷದಲ್ಲಿ ಹಲವು ನಾಯಕರ ಹೆಸರು ಮುಂಚೂಣಿಯಲ್ಲಿದ್ದು, ಯಾರು ಸಂಪುಟ ಸೇರಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
'ಅಕ್ಟೋಬರ್ 10ರೊಳಗೆ ಸಂಪುಟ ವಿಸ್ತರಣೆ ಮಾಡುವುದು ಖಚಿತ' ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಘೋಷಣೆ ಮಾಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ 7 ಸಚಿವ ಸ್ಥಾನಗಳು ಖಾಲಿ ಇವೆ.
7 ಸ್ಥಾನಗಳ ಪೈಕಿ ಕಾಂಗ್ರೆಸ್ ಪಕ್ಷಕ್ಕೆ 6, ಜೆಡಿಎಸ್ ಪಕ್ಷಕ್ಕೆ ಒಂದು ಸ್ಥಾನ ಹಂಚಿಕೆಯಾಗಲಿದೆ. ಅಕ್ಟೋಬರ್ 8 ರಂದು ಮಹಾಲಯ ಅಮಾವಾಸ್ಯೆ ಇದ್ದು ಬಳಿಕ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯುವುದು ಖಚಿತವಾಗಿದೆ.
ಹಿರಿಯ ಶಾಸಕರಾದ ಎಚ್.ಕೆ.ಪಾಟೀಲ್ ಮತ್ತು ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಕಡಿಮೆ ಇದೆ. ಆದರೆ, ಹಿರಿಯ ನಾಯಕರು ಇದರ ವಿರುದ್ದ ಅಸಮಾಧಾನಗೊಳ್ಳುವ ಸಾಧ್ಯತೆ ಇದೆ. ಅಸಮಾಧಾನ ಬಗೆಹರಿಸಲು ಪಕ್ಷ ತಂತ್ರ ರೂಪಿಸಿದೆ...

ರಾಹುಲ್ ಗಾಂಧಿ ಜೊತೆ ಸಭೆ
ಅಕ್ಟೋಬರ್ 2ರಂದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಈ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲಿದೆ. ಅಕ್ಟೋಬರ್ 5 ಅಥವ 6ರಂದು ದೆಹಲಿಯಲ್ಲಿ ಮತ್ತೊಮ್ಮೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜೊತೆ ಸಭೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಆಗಲೇ ಸಂಪುಟ ಸೇರುವ ಶಾಸಕರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.

ಮಾನದಂಡಗಳೇನು?
ಸಂಪುಟಕ್ಕೆ ಶಾಸಕರನ್ನು ಸೇರಿಸಿಕೊಳ್ಳಲು ಹಲವು ಮಾನದಂಡಗಳನ್ನು ನಿಗದಿ ಮಾಡಲಾಗಿದೆ. ಲೋಕಸಭೆ ಚುನಾವಣೆ, ಪ್ರಾದೇಶಿಕತೆ ಮತ್ತು ಜಾತಿ ಮಾನದಂಡವಾಗಿಟ್ಟು ಶಾಸಕರನ್ನುಆಯ್ಕೆ ಮಾಡಲಾಗುತ್ತದೆ. ಹಿರಿಯ ಶಾಸಕರಾದ ಎಚ್.ಕೆ.ಪಾಟೀಲ್ ಮತ್ತು ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಇದೆ.

ಶಾಸಕರ ಪಟ್ಟಿ ಇಲ್ಲಿದೆ
* ಎಂ.ಬಿ.ಪಾಟೀಲ್ (ಬಬಲೇಶ್ವರ) (ಲಿಂಗಾಯತ)
* ಸಿ.ಎಸ್.ಶಿವಳ್ಳಿ (ಕುಂದಗೋಳ) (ಕುರುಬ)
* ಬಿ.ಸಿ.ಪಾಟೀಲ್ (ಹಿರೇಕೆರೂರ) (ಸಾಧು ಲಿಂಗಾಯತ)
* ಈ.ತುಕಾರಾಂ (ಸಂಡೂರು) (ವಾಲ್ಮೀಕಿ)
* ಬಿ.ಕೆ.ಸಂಗಮೇಶ್ವರ (ಭದ್ರಾವತಿ) (ಪಂಚಮಸಾಲಿ ಲಿಂಗಾಯತ) ಹೆಸರು ಮುಂಚೂಣಿಯಲ್ಲಿದೆ.

ಒಂದು ಸ್ಥಾನ ಉಳಿಸಿಕೊಳ್ಳುವ ತಂತ್ರ
ಸಂಪುಟ ವಿಸ್ತರಣೆ ಬಳಿಕ ಉಂಟಾಗುವ ಅಸಮಾಧಾನವನ್ನು ಶಮನಗೊಳಿಸಲು ಕಾಂಗ್ರೆಸ್ ತಂತ್ರ ರೂಪಿಸಿದೆ. ಅದರ ಅನ್ವಯ 6 ಸ್ಥಾನಗಳ ಪೈಕಿ 5 ಸ್ಥಾನಗಳನ್ನು ಭರ್ತಿ ಮಾಡಿ, ಒಂದನ್ನು ಖಾಲಿ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಲೋಕಸಭೆ ಚುನಾವಣೆ ವೇಳೆಗೆ ಮತ್ತೊಂದು ಸ್ಥಾನ ಭರ್ತಿಯಾಗುವ ನಿರೀಕ್ಷೆ ಇದೆ.












Click it and Unblock the Notifications