ಎರಡು ವರ್ಷದಲ್ಲಿ ಜೆಡಿಎಸ್ ಬಿಟ್ಟು ಹೋದ ನಾಯಕರ ಪಟ್ಟಿ!
ಬೆಂಗಳೂರು, ಡಿಸೆಂಬರ್ 15; "ಕಾಂಗ್ರೆಸ್ ಸೇರುವುದು ಖಚಿತ. ಆದರೆ ಯಾವತ್ತೂ ಎಂಬುದು ನಿಗದಿಯಾಗಿಲ್ಲ" ಎಂದು ಕಡೂರು ಕ್ಷೇತ್ರದ ಮಾಜಿ ಶಾಸಕ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಪರಮಾಪ್ತರಾಗಿದ್ದ ವೈ. ಎಸ್. ವಿ. ದತ್ತ ಹೇಳಿದ್ದಾರೆ. ಈ ಮೂಲಕ ಮತ್ತೊಬ್ಬ ಜೆಡಿಎಸ್ ನಾಯಕ ಪಕ್ಷ ಬಿಟ್ಟು ಹೊರಟಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ ಜೆಡಿಎಸ್ ತೊರೆದ ನಾಯಕರ ಪಟ್ಟಿ ದೊಡ್ಡದಿದೆ. ಪಕ್ಷ ತೊರೆಯುತ್ತೇನೆ ಎಂದು ಹೇಳಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ. ಟಿ. ದೇವೇಗೌಡರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳುವಲ್ಲಿ ನಾಯಕರು ಯಶಸ್ವಿಯಾಗಿದ್ದಾರೆ. ಆದರೆ ಉಳಿದ ನಾಯಕರ ಮನವೊಲಿಕೆಗೆ ಏಕೆ ಮುಂದಾಗಿಲ್ಲ? ಎಂಬ ಪ್ರಶ್ನೆಗೆ ಜೆಡಿಎಸ್ ನಾಯಕರೇ ಉತ್ತರ ಕೊಡಬೇಕಿದೆ.
ಇಬ್ಬರು ಹಾಲಿ ಶಾಸಕರು, ಮೂವರು ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಹಲವಾರು ನಾಯಕರು ಜೆಡಿಎಸ್ ಬಿಟ್ಟು ಬೇರೆ-ಬೇರೆ ಪಕ್ಷವನ್ನು ಸೇರುತ್ತಿದ್ದಾರೆ. ಆದರೆ ಪಕ್ಷದ ನಾಯಕರು ಯಾವುದಕ್ಕೂ ತಲೆಕೆಡಿಸಿಕೊಳ್ಳದೇ 2023ರ ಚುನಾವಣೆಯ ತಯಾರಿಯಲ್ಲಿ ತೊಡಗಿದ್ದಾರೆ.
ಮುಂದಿನ ಚುನಾವಣೆಯಲ್ಲಿ 123 ಸ್ಥಾನಗಳಲ್ಲಿ ಜಯಗಳಿಸುವುದು ಜೆಡಿಎಸ್ ಪಕ್ಷದ ಗುರಿ. ಅದಕ್ಕಾಗಿ ವಿವಿಧ ಕಾರ್ಯತಂತ್ರ ರೂಪಿಸಲಾಗಿದೆ. ಪಂಚರತ್ನ ರಥಯಾತ್ರೆ ಮೂಲಕ ಜನರ ಬಳಿಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತೆರಳಿದ್ದಾರೆ. ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿದ ಸಿ. ಎಂ. ಇಬ್ರಾಹಿಂರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಮಾಜಿ ಶಾಸಕ ಮಧು ಬಂಗಾರಪ್ಪ
2018ರ ಚುನಾವಣೆ, 2019 ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ. 2021ರ ಜುಲೈನಲ್ಲಿ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆಪ್ತರಾಗಿದ್ದ ಮಧು ಬಂಗಾರಪ್ಪ ಮುಂದಿನ ಚುನಾವಣೆಗೆ ಸೊರಬದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ಮಾಜಿ ಶಾಸಕ ಕೋನ ರಡ್ಡಿ
ನವಲಗುಂದ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ನಾಯಕ ಎನ್. ಎಚ್. ಕೋನರಡ್ಡಿ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಮುಗಿದ ಬಳಿಕ ಎನ್. ಎಚ್. ಕೋನರಡ್ಡಿ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದ ಕೋನರಡ್ಡಿ ಬಳಿಕ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಆರ್. ಎಂ. ಮಂಜುನಾಥ ಗೌಡ
ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ, ತೀರ್ಥಹಳ್ಳಿ ಕ್ಷೇತ್ರದ ಪ್ರಭಾವಿ ನಾಯಕ ಆರ್. ಎಂ. ಮಂಜುನಾಥ ಗೌಡ ಸಹ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ. 2018ರ ಚುನಾವಣೆಯಲ್ಲಿ ಅವರು ತೀರ್ಥಹಳ್ಳಿಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಸುಮಾರು 40 ಸಾವಿರ ಮತಗಳನ್ನು ಪಡೆದು ಬಿಜೆಪಿಯ ಆರಗ ಜ್ಞಾನೇಂದ್ರ ವಿರುದ್ಧ ಸೋಲು ಕಂಡಿದ್ದರು. ಸೊರಬದ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರಿದ ಕೆಲವೇ ದಿನಗಳಲ್ಲಿ ಆರ್. ಎಂ. ಮಂಜುನಾಥ ಗೌಡ ಸಹ ಜೆಡಿಎಸ್ ತೊರೆದಿದ್ದಾರೆ.

ವೈ. ಎಸ್. ವಿ. ದತ್ತಾ ಘೋಷಣೆ
ಕಡೂರು ಕ್ಷೇತ್ರದ ಮಾಜಿ ಶಾಸಕ ವೈ. ಎಸ್. ವಿ. ದತ್ತಾ ಬುಧವಾರ ಜೆಡಿಎಸ್ ತೊರೆಯುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. "ಕಾಂಗ್ರೆಸ್ ಸೇರುವುದು ಖಚಿತ, ಯಾವತ್ತೂ ಎಂಬುದು ಇನ್ನೂ ನಿಗದಿಯಾಗಿಲ್ಲ. ನನಗೀಗ 70 ವರ್ಷ ವಯಸ್ಸಾಗಿದೆ. ಬಹುಶಃ ನನಗಿದು ಕೊನೆಯ ಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿಲ್ಲ, ಟಿಕೆಟ್ ನೀಡಬೇಕು ಎಂದು ಷರತ್ತು ಸಹ ವಿಧಿಸಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

ಬೆಮಲ್ ಕಾಂತರಾಜು
ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ಅಸಮಾಧಾನಗೊಂಡಿದ್ದ ತುಮಕೂರು ಜಿಲ್ಲೆಯ ಪ್ರಭಾವಿ ನಾಯಕ ಬೆಮಲ್ ಕಾಂತರಾಜು ಜೆಡಿಎಸ್ ಬಿಟ್ಟು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು.
ಒಕ್ಕಲಿಗ ಸಮುದಾಯದ ನಾಯಕ ಬೆಮಲ್ ಕಾಂತರಾಜು 2021ರಲ್ಲಿಯೇ ಜೆಡಿಎಸ್ ತೊರೆಯುತ್ತೇನೆ ಎಂದು ಘೋಷಣೆ ಮಾಡಿದ್ದರು. ವಿಧಾನ ಪರಿಷತ್ ಸದಸ್ಯರಾಗಿದ್ದ ಅವರು ಮತ್ತೊಮ್ಮೆ ಚುನಾವಣಾ ಕಣಕ್ಕಿಳಿಯದೇ ಕ್ಷೇತ್ರ ಬಿಟ್ಟುಕೊಟ್ಟಿದ್ದರು.

ಎಸ್. ಆರ್. ಶ್ರೀನಿವಾಸ್ ನಡೆ ಏನು?
ಗುಬ್ಬಿ ಕ್ಷೇತ್ರದ ಹಾಲಿ ಶಾಸಕ ಎಸ್. ಆರ್. ಶ್ರೀನಿವಾಸ್ ಜೆಡಿಎಸ್ ತೊರೆಯುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಆದರೆ ಅವರು ಯಾವ ಪಕ್ಷ ಸೇರಲಿದ್ದಾರೆ? ಎಂಬುದು ಖಚಿತವಾಗಿಲ್ಲ. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಗುಬ್ಬಿಗೆ ಆಗಮಿಸಿದಾಗ ರಾಹುಲ್ ಸ್ವಾಗತಿಸಿ, ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದರು.
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಕಾರಣಕ್ಕೆ ಜೆಡಿಎಸ್ ಪಕ್ಷದಿಂದ ಎಸ್. ಆರ್. ಶ್ರೀನಿವಾಸ್ ಅಮಾನತುಗೊಳಿಸಲಾಗಿದೆ. ಅಲ್ಲದೇ ಅವರ ಶಾಸಕ ಸ್ಥಾನ ರದ್ದು ಮಾಡಬೇಕು ಎಂದು ಸ್ಪೀಕರ್ಗೆ ದೂರು ನೀಡಲಾಗಿದೆ.












Click it and Unblock the Notifications