IAS: ಎಲ್. ಕೆ. ಅತೀಕ್ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ
ಬೆಂಗಳೂರು, ಜನವರಿ 21: ಕರ್ನಾಟಕ ಸರ್ಕಾರ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಪ್ರಮುಖವಾಗಿ ಜನವರಿ 31ರಂದು ನಿವೃತ್ತರಾಗಲಿರುವ ಹಿರಿಯ ಐಎಎಸ್ ಅಧಿಕಾರಿ ಎಲ್. ಕೆ. ಅತೀಕ್ ಅವರ ಸೇವೆಯನ್ನು ಮುಂದುವರೆಸಲಾಗಿದ್ದು, ಅವರನ್ನು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸುವ ಸಮಯದಲ್ಲಿ ಈ ನೇಮಕ ಬಹಳ ಮಹತ್ವ ಪಡೆದಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಟಿ. ಮಹಾಂತೇಶ್ ಸರ್ಕಾರದ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವೆಗಳು-1) ಆದೇಶವನ್ನು ಹೊರಡಿಸಿದ್ದಾರೆ. 1/2/2025 ರಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಐಎಎಸ್ ಅಧಿಕಾರಿ ಎಲ್. ಕೆ. ಅತೀಕ್ ಅವರನ್ನು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಎಲ್. ಕೆ. ಅತೀಕ್ (ಕೆಎನ್: 1991) ರಾಜ್ಯದ ಹಿರಿಯ ಐಎಎಸ್ ಅಧಿಕಾರಿ. ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ, ಬಿಡಿಎಯ ಮಹತ್ವದ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆ ಅನುಷ್ಠಾನಕ್ಕಾಗಿ ರಚನೆ ಮಾಡಿರುವ ವಿಶೇಷ ಉದ್ದೇಶದ ಘಟಕ (ಎಸ್ಪಿವಿ) ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.
ಅಪಾರ ಅನುಭವ ಹೊಂದಿದ್ದಾರೆ: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸುವ ಸಮಯದಲ್ಲಿ ಎಲ್. ಕೆ. ಅತೀಕ್ ಅವರ ಸೇವೆ ಮುಂದುವರೆಸಿ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿರುವುದು ಮಹತ್ವದ ಬೆಳವಣಿಗೆಯಾಗಿದೆ.
ಎಲ್. ಕೆ. ಅತೀಕ್ ಮಾಜಿ ಪ್ರಧಾನಿ ದಿ. ಮನಮೋಹನ್ ಸಿಂಗ್ ಅವರ ಬಳಿ, ವಿಶ್ವಬ್ಯಾಂಕ್ನಲ್ಲಿ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದವರು. ಆರ್ಥಿಕ ವಿಚಾರದಲ್ಲಿ ಅವರು ಅಪಾರ ಅನುಭವ ಹೊಂದಿದ್ದಾರೆ. ಅತೀಕ್ ಅವರ ನಿವೃತ್ತಿ ನಂತರ ಉತ್ತರಾಧಿಕಾರಿ ಹುಡುಕುವುದು ಅಷ್ಟು ಸುಲಭದ ಮಾತಲ್ಲ ಎಂಬ ಚರ್ಚೆಗಳು ಸರ್ಕಾರದ ವಲಯದಲ್ಲಿಯೇ ಕೇಳಿ ಬಂದಿತ್ತು.
ಸದ್ಯ ಎಲ್. ಕೆ. ಅತೀಕ್ ಅರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಜನವರಿ 31ರಂದು ನಿವೃತ್ತರಾಗಬೇಕಿತ್ತು. ಫೆಬ್ರವರಿ 1ರಿಂದ ಜಾರಿಗೆ ಬರುವಂತೆ ಅವರನ್ನು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ (ಕೆಎನ್: 1996) ಅವರನ್ನು ತಾತ್ಕಾಲಿಕವಾಗಿ ಸೃಜಿಸಲಾದ ಆರ್ಥಿಕ ಇಲಾಖೆ ವಿಶೇಷ ಕರ್ತವ್ಯಾಧಿಕಾರಿ ಹುದ್ದೆಗೆ ಹೆಚ್ಚುವರಿಯಾಗಿ ನಿಯೋಜಿಸಲಾಗಿದೆ. ಎಲ್. ಕೆ. ಅತೀಕ್ ಅವರ ನಿವೃತ್ತಿಯಿಂದ ತೆರವಾಗುವ ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ರಿತೇಶ್ ಕುಮಾರ್ ಸಿಂಗ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಎಲ್. ಕೆ. ಅತೀಕ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದರು. ಅವರನ್ನು 2023ರ ಜೂನ್ 30ರಿಂದ ಜಾರಿಗೆ ಬರುವಂತೆ ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿತ್ತು.
1991ರ ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿ ಎಲ್. ಕೆ. ಅತೀಕ್ 2007ರಲ್ಲಿ ಪ್ರಧಾನ ಮಂತ್ರಿ ಕಚೇರಿ ನಿರ್ದೇಶಕರಾಗಿದ್ದರು. 2007 ರಿಂದ 2012ರ ತನಕ ಅವರು ಈ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದು, ಕೃಷಿ, ಶಿಕ್ಷಣ, ಪೋಷಣೆ, ಕೌಶಲ್ಯ ತರಬೇತಿ ಮುಂತಾದ ವಿಚಾರಗಳಲ್ಲಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಭಾಷಣಗಳನ್ನು ತಯಾರು ಮಾಡಿದ್ದಾರೆ.












Click it and Unblock the Notifications