ಆಷಾಢ ಮಾಸ ಕಳೆದರೂ ಶಾಸಕರಿಗೆ ಸಚಿವ ಸ್ಥಾನದ ಭಾಗ್ಯವಿಲ್ಲ!
Recommended Video
ಬೆಂಗಳೂರು, ಆಗಸ್ಟ್ 03 : ಆಷಾಢ ಮಾಸ ಕಳೆದ ಮೇಲೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಕಾದು ಕುಳಿತಿದ್ದ ಶಾಸಕರಿಗೆ ನಿರಾಸೆಯಾಗಲಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟ ವಿಸ್ತರಣೆ ಕೆಲವು ದಿನಗಳ ಕಾಲ ತಡವಾಗಲಿದೆ.
ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು. 'ಆಷಾಢದ ಬಳಿಕ ಸಂಪುಟ ವಿಸ್ತರಣೆಗೆ ಅವರು ಒಪ್ಪಿಗೆ ನೀಡಿದ್ದಾರೆ. ನಿಗಮ ಮಂಡಳಿಗೂ ನೇಮಕ ಮಾಡಲಾಗುತ್ತದೆ' ಎಂದು ಹೇಳಿದ್ದರು.
ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ: ಯಾರ ಕಣ್ಣಿಗೆ ಸುಣ್ಣ, ಯಾರಿಗೆ ಬೆಣ್ಣೆ
ಆದರೆ, ಗುರುವಾರ ಚುನಾವಣಾ ಆಯೋಗ 105 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಆದ್ದರಿಂದ, ಚುನಾವಣೆ ಮುಂದಿಟ್ಟುಕೊಂಡು ಸಂಪುಟ ವಿಸ್ತರಣೆಗೆ ಕೈ ಹಾಕುವುದಿಲ್ಲ ಎಂಬುದು ಸದ್ಯ ಹಬ್ಬಿರುವ ಸುದ್ದಿ.
ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕಕ್ಕೆ ಆಷಾಢ ಅಡ್ಡಿ!
ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟ ಸೇರಲು ಹಲವು ನಾಯಕರು ಬಯಸಿದ್ದಾರೆ. ಅದರಲ್ಲೂ ಹಿರಿಯ ಕಾಂಗ್ರೆಸ್ ನಾಯಕರು ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಮುನಿಸಿಕೊಂಡಿದ್ದಾರೆ. ಈಗ ಸಂಪುಟ ವಿಸ್ತರಣೆಯೂ ಮುಂದಕ್ಕೆ ಹೋದರೆ ನಾಯಕರ ಅಸಮಾಧಾನ ಹೆಚ್ಚಾಗುವ ನಿರೀಕ್ಷೆ ಇದೆ....
ಎಚ್.ಡಿ.ಕುಮಾರಸ್ವಾಮಿ ಸಂಪುಟ
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾರೆ. ಒಟ್ಟು 27 ಸಚಿವರು ಕುಮಾರಸ್ವಾಮಿ ಸಂಪುಟವನ್ನು ಸೇರಿದ್ದಾರೆ. ಕಾಂಗ್ರೆಸ್ನಿಂದ 7, ಜೆಡಿಎಸ್ನಿಂದ ಒಬ್ಬರು ಸಂಪುಟ ಸೇರಬಹುದಾಗಿದೆ.
ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ಬಜೆಟ್ ಮಂಡನೆ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಆಷಾಢ ಮಾಸದ ಹಿನ್ನಲೆಯಲ್ಲಿ ಸಂಪುಟ ವಿಸ್ತರಣೆಯನ್ನು ಮುಂದೂಡಲಾಗಿತ್ತು.
ಸಿದ್ದರಾಮಯ್ಯ ಭೇಟಿ
ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು. ಆಷಾಢದ ಬಳಿಕ ಸಂಪುಟ ವಿಸ್ತರಣೆ ಮತ್ತು ನಿಗಮ-ಮಂಡಳಿ ನೇಮಕಕ್ಕೆ ಅವರು ಒಪ್ಪಿಗೆ ನೀಡಿದ್ದರು.
'ಆಷಾಢದ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುತ್ತದೆ' ಎಂದು ಸಿದ್ದರಾಮಯ್ಯ ಹೇಳಿದ್ದರು. ಇದರಿಂದಾಗಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಂತಸಗೊಂಡಿದ್ದರು. ಆದರೆ, ಈಗ ಹೊಸ ಸುದ್ದಿ ಬಂದಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣೆ
ರಾಜ್ಯ ಚುನಾವಣಾ ಆಯೋಗ 29 ನಗರ ಸಭೆ, 53 ಪುರಸಭೆ ಮತ್ತು 23 ಪಟ್ಟಣ ಪಂಚಾಯಿತಿ ಸೇರಿ 105 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಿದೆ. ಆಗಸ್ಟ್ 29ರಂದು ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 1ರಂದು ಫಲಿತಾಂಶ ಪ್ರಕಟವಾಗಲಿದೆ.
ಚುನಾವಣೆ ದಿನಾಂಕ ಘೋಷಣೆಯಾದ ಕಾರಣ ಸಂಪುಟ ವಿಸ್ತರಣೆಗೆ ತಡವಾಗಲಿದೆ ಎಂಬ ಸುದ್ದಿ ಹಬ್ಬಿದೆ. ಮಿತ್ರಪಕ್ಷಗಳು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಳ್ಳಲಿವೆಯೇ? ಎಂದು ಕಾದು ನೋಡಬೇಕಿದೆ.
ಕೆ.ಸಿ.ವೇಣುಗೋಪಾಲ್ ತೀರ್ಮಾನ
ಸಚಿವ ಸಂಪುಟ ವಿಸ್ತರಣೆ ಮುಂದೂಡಲಾಗುತ್ತದೆ ಎಂಬ ಸುದ್ದಿ ಹಬ್ಬಿದ ತಕ್ಷಣ ಶಾಸಕರು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಭೇಟಿ ಮಾಡಲು ನಿರ್ಧರಿಸಿದ್ದಾರೆ.
ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಚರ್ಚೆ ನಡೆಸಲು ವೇಣುಗೋಪಾಲ್ ಬೆಂಗಳೂರಿಗೆ ಬಂದಿದ್ದಾರೆ. ಶಾಸಕರು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವ ಸಾಧ್ಯತೆ ಇದೆ. ಸಮನ್ವಯ ಸಮಿತಿಯಲ್ಲಿ ಚರ್ಚೆ ನಡೆಸಿದ ಬಳಿಕ ಸಂಪುಟ ವಿಸ್ತರಣೆ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.