ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮಹತ್ವದ ಮಾಹಿತಿ ನೀಡಿದ ಡಿ ಕೆ ಶಿವಕುಮಾರ್
ಬೆಂಗಳೂರು, ಮೇ 22: ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು, ಜನರ ಕೈಗೆ ಅಧಿಕಾರ ಹೋಗಲಿದೆ. ಹೀಗಾಗಿ ಪಕ್ಷದ ನಾಯಕರು, ಕಾರ್ಯಕರ್ತರು ಈ ಚುನಾವಣೆಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂಡತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಪಂಡಿತ್ ನೆಹರು, ರಾಜಗೋಪಾಲಾಚಾರಿ, ಕೆಂಗಲ್ ಹನುಮಂತಯ್ಯ, ಬಿ.ಡಿ.ಜತ್ತಿ, ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಅನೇಕ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆ ಮೂಲಕ ರಾಷ್ಟ್ರಮಟ್ಟಕ್ಕೆ ಬೆಳೆದವರು. ಸಂಘಟನೆ ಬಲಗೊಳಿಸಬೇಕು. ಪಕ್ಷದ ಎಲ್ಲಾ ಘಟಕಗಳನ್ನು ವಿಸರ್ಜಿಸಿ ಹೊಸದಾಗಿ ರಚಿಸುವ ಸಮಯ ಬಂದಿದೆ. ಮೊದಲು ಪಕ್ಷದ ಕೆಲಸ ಮಾಡಬೇಕು. ಕೇವಲ ಗುರುತಿನ ಚೀಟಿಗೋಸ್ಕರ ಬರುವವರು ಮನೆಯಲ್ಲಿಯೇ ಇರಿ. ಖಾದಿ ಬಟ್ಟೆ ಹಾಕಿಕೊಂಡು, ಕಾರು ಇಟ್ಟುಕೊಂಡು ಎಂಎಲ್ ಸಿ ಮಾಡಿ, ಅಧ್ಯಕ್ಷನನ್ನಾಗಿ ಮಾಡಿ ಎಂದರೆ ಅದು ಇಲ್ಲಿ ನಡೆಯುವುದಿಲ್ಲ.

ಕೆಲಸ ಮಾಡುವವರಿಗೆ ಆದ್ಯತೆ. ನಿಮ್ಮ ಬೂತ್ ಮಟ್ಟದಲ್ಲಿ ಪಕ್ಷಕ್ಕೆ ಹೆಚ್ಚಿನ ಮತ ತಂದು ನಾಯಕತ್ವಕ್ಕೆ ಬೇಡಿಕೆ ಇಡಬೇಕು. ನಿಮ್ಮ ಬೂತ್ ಗಳಲ್ಲಿ ಪಕ್ಷಕ್ಕೆ ಮುನ್ನಡೆ ತರಲು ಆಗದಿದ್ದರೆ ನಾವು ಬೇರೆಯವರನ್ನು ತಯಾರು ಮಾಡುತ್ತೇವೆ. ನಾನು ಎಷ್ಟು ದಿನ ಅಧ್ಯಕ್ಷನಾಗಿ ಇರುತ್ತೇನೆ ಎಂಬುದು ಮುಖ್ಯವಲ್ಲ. ನಾನು ಅಧಿಕಾರ ಬಿಟ್ಟು ಹೋಗುವ ಮುನ್ನ ಪಕ್ಷದ ಸಂಘಟನೆಗೆ ಭದ್ರ ಬುನಾದಿ ಹಾಕಿಕೊಡುವ ಕೆಲಸ ಮಾಡುತ್ತೇನೆ. ಈ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇನೆ. ಮುಂದಿನ ಮೂರು ನಾಲ್ಕು ತಿಂಗಳಲ್ಲಿ ಕಾರ್ಯಯೋಜನೆ ಸಿದ್ಧಪಡಿಸುತ್ತೇವೆ. ನೀವೆಲ್ಲರೂ ಅದಕ್ಕೆ ಸಿದ್ಧರಾಗಬೇಕು.
ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗಾಗಿ ಪ್ರಾಣತ್ಯಾಗ ಮಾಡಿದ ಮಹಾನ್ ನಾಯಕ ರಾಜೀವ್ ಗಾಂಧಿ ಅವರು. ಸಾವಿರಾರು ಯುವ ನಾಯಕರನ್ನು ಸಮಾಜಕ್ಕೆ ಕೊಡುಗೆ ಕೊಟ್ಟ, ಯುವ, ವಿದ್ಯಾರ್ಥಿ ನಾಯಕತ್ವವನ್ನು ಬೆಳೆಸಿದವರು ಅವರು. ರಾಜೀವ್ ಗಾಂಧಿ ಅವರು ಪ್ರಧಾನಿಗಳಾಗಿದ್ದಾಗ ಕೆ.ಎಚ್.ಪಾಟೀಲರು ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಈ ವೇಳೆ ಸುಮಾರು 70 ಕ್ಕೂ ಹೆಚ್ಚು ಯುವ ಮುಖಗಳಿಗೆ ಟಿಕೆಟ್ ನೀಡಲಾಗಿತ್ತು. ರಾಜೀವ್ ಗಾಂಧಿ ಅವರು ನನ್ನ ಪರವಾಗಿ ಚುನಾವಣಾ ಪ್ರಚಾರಕ್ಕೆ ಬಂದಿದ್ದರು, ನಂತರವೂ ನನ್ನ ಕ್ಷೇತ್ರಕ್ಕೆ ಭೇಟಿ ನೀಡಿದ್ದರು.
ಚನ್ನಪಟ್ಟಣದಲ್ಲಿ ಹಿಂದೂ- ಮುಸ್ಲಿಂ ಗಲಾಟೆ ನಡೆದ ಸಂದರ್ಭದಲ್ಲಿ ನನ್ನನ್ನು ಬೇರೆ ಮಾರ್ಗದಲ್ಲಿ ಅವರ ಭೇಟಿಗೆ ಕರೆತರಲಾಯಿತು. ಅಂದು ಮುಖ್ಯಮಂತ್ರಿಗಳಾಗಿದ್ದ ವೀರೇಂದ್ರ ಪಾಟೀಲರ ಆರೋಗ್ಯ ಹದಗೆಟ್ಟಿದ್ದ ಕಾರಣ ಅವರನ್ನು ಬದಲಾವಣೆ ಮಾಡುವ ಸಂದರ್ಭ ಬಂದಿತ್ತು. ಆಗ ಬಂಗಾರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಘೋಷಣೆ ಮಾಡಲಾಯಿತು. ಸಚಿವ ಸಂಪುಟದಲ್ಲಿ ಎಲ್ಲಾ ಸಮುದಾಯಗಳ ಯುವ ನಾಯಕರಿಗೆ ಸ್ಥಾನ ನೀಡಿ ಎರಡನೇ ಸಾಲಿನ ನಾಯಕತ್ವ ತಯಾರು ಮಾಡಬೇಕು" ಎಂದು ಬಂಗಾರಪ್ಪ ಅವರಿಗೆ ರಾಜೀವ್ ಗಾಂಧಿ ಸೂಚನೆ ನೀಡಿದ್ದರು. ಆದ ಕಾರಣ ನಾನು ಮೊದಲ ಬಾರಿಗೆ ಮಂತ್ರಿಯಾದೆ.
ದೇಶದಲ್ಲಿ ಸಮಸ್ಯೆ ಬಂದಾಗ ರಾಹುಲ್ ಗಾಂಧಿ ವಿದೇಶಕ್ಕೆ ಹೋಗುತ್ತಾರೆ ಎಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಲಿದ್ದು, ಯೋಗಿ ಆದಿತ್ಯನಾಥ ಅವರು ಮತ್ತೊಮ್ಮೆ ಸನ್ಯಾಸತ್ವ ಸ್ವೀಕರಿಸಲಿದ್ದಾರೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಪ್ರಧಾನ ಮಂತ್ರಿಯಾಗುವ ಅವಕಾಶವಿದ್ದರೂ ದೇಶಕ್ಕಾಗಿ ಅಧಿಕಾರ ತ್ಯಾಗ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.
ಕುಮಾರಸ್ವಾಮಿ ಅವರ ಟೆಲಿಫೋನ್ ಟ್ಯಾಪಿಂಗ್ ಆರೋಪ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಅವರಲ್ಲಿ ಏನೋ ಸಮಸ್ಯೆ ಇರಬೇಕು. ಅವರು ಹಿಂದೆ ಇಂತಹ ಹೀನಾಯ ಕೆಲಸಗಳನ್ನು ಮಾಡಿರಬೇಕು. ಅದಕ್ಕಾಗಿ ಅದನ್ನು ಬೇರೆಯವರ ಮೇಲೆ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ ಎಂಬ ಬಿಜೆಪಿ ಟೀಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಯವರಿಗೆ 7 ತಿಂಗಳು ಬೇಕಾಯಿತು. ಇದು ಬಿಜೆಪಿಯ ಅಸಮರ್ಥತೆಗೆ ಸಾಕ್ಷಿ. ರಾಜ್ಯದಲ್ಲಿ ಬಿಜೆಪಿ ಪರಿಸ್ಥಿತಿ ಶೂನ್ಯ ಎಂದು ತಿರುಗೇಟು ನೀಡಿದರು.












Click it and Unblock the Notifications