ಇನ್ಮುಂದೆ ಪಿಯುಸಿಯಿಂದಲೇ ಆನ್ಲೈನ್ ತರಗತಿಗೆ ಒತ್ತು: ಸಿಎಂ ಯಡಿಯೂರಪ್ಪ!
ಬೆಂಗಳೂರು, ಮೇ 26: ಕೊರೊನಾವೈರಸ್ ತಂದಿಟ್ಟಿರುವ ಲಾಕ್ಡೌನ್ ಸಂಕಷ್ಟದಿಂದ ವಿದ್ಯಾರ್ಥಿಗಳ ಸ್ಥಿತಿ ಅತಂತ್ರವಾಗಿದೆ. ಆ ಕಡೆ ಪರೀಕ್ಷೆಯನ್ನೂ ಬರೆಯಲಾಗದೆ, ಈ ಕಡೆ ತರಗತಿಗಳಿಗೂ ಹೋಗಲಾಗದ ವಿಚಿತ್ರ ಸನ್ನಿವೇಶವನ್ನು ಅವರು ಎದುರಿಸುತ್ತಿದ್ದಾರೆ. ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದು ಗುರುತಿಸುವ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿಧ್ಯಾರ್ಥಿಗಳಂತೂ ಈ ಲಾಕ್ಡೌನ್ ಮುಗಿದು ಪರೀಕ್ಷೆ ಬರೆಯುತ್ತೇವೊ? ಇಲ್ಲವೊ ಎಂಬ ಆತಂಕದಲ್ಲಿದ್ದಾರೆ.
Recommended Video
ಇಂಜಿನಿಯರಿಂಗ್ , ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣದ ಗುರಿ ಇಟ್ಟುಕೊಂಡಿದ್ದ ವಿದ್ಯಾರ್ಥಿಗಳಿಗೆ ಭವಿಷ್ಯದ ಆತಂಕ ಕಾಡುತ್ತಿದೆ. ಸಧ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುವುದು ಸೇರಿದಂತೆ ಆತಂಕವಿಲ್ಲದೆ ಪರೀಕ್ಷೆ ಎದುರಿಸಲು ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗಮನ ಹರಿಸಿದ್ದಾರೆ. ಹಿಂದೆಂದೂ ಎದುರಿಸದ ಈ ವಿಚಿತ್ರ ಪರಿಸ್ಥಿತಿಯನ್ನು ಎದುರಿಸುವ ಕುರಿತು ಅಧಿಕಾರಿಗಳ ಸಭೆ ನಡೆಸಿದ್ದಾರೆ.

ಅಗ್ಗದ ಆನ್ಲೈನ್ ಶಿಕ್ಷಣ
ರಾಜ್ಯದಲ್ಲಿ ಲಾಕ್ಡೌನ್ನಿಂದಾಗಿ ಹೊಸ ಸವಾಲನ್ನು ಸರ್ಕಾರ ಹಾಗೂ ವಿದ್ಯಾರ್ಥಿಗಳು ಎದುರಿಸುವಂತಾಗಿದೆ. ಹೀಗಾಗಿ ಉಳಿದ ತರಗತಿಗಳನ್ನು ಆನ್ಲೈನ್ನಲ್ಲಿ ಮುಗಿಸಿ, ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಿದ್ಧಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ. ಆನ್ಲೈನ್ ತರಗತಿಗಳನ್ನು ನಡೆಸುವುದು ಸಾಮಾನ್ಯ ತರಗತಿಗಳಿಗೆ ಹೋಲಿಕೆ ಮಾಡಿದರೆ ಆನ್ಲೈನ್ ತರಗತಿ ನಡೆಸುವುದು ಕಡಿಮೆ ವೆಚ್ಚದ್ದಾಗಿದೆ ಎಂದು ಸಿಎಂ ಹೇಳಿದ್ದಾರೆ.
ಪಿಯುಸಿಯಿಂದಲೇ ಆನ್ಲೈನ್ ತರಗತಿ ಆರಂಭಿಸುವ ಬಗ್ಗೆ ಪರಿಶೀಲಿಸುವಂತೆ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಪಠ್ಯಕ್ರಮ ಪೂರ್ಣ
ಪಿಯುಸಿ ವಿದ್ಯಾರ್ಥಿಗಳ ಎಲ್ಲ ವಿಷಯಗಳ ಪರೀಕ್ಷೆ ಮುಗಿದಿದ್ದು, ಇಂಜನೀಯರಿಂಗ್, ವೈದ್ಯಕೀಯ ಶೀಕ್ಷಣದ ಗುರಿ ಹೊಂದಿರುವ ವಿದ್ಯಾರ್ಥಿಗಳಿಗೆ ಲಾಕಡೌನ್ ಪೂರ್ವದಲ್ಲಿ ಶೇಕಡಾ 79ರಷ್ಟು ಪಠ್ಯಕ್ರಮ ಪೂರ್ಣಗೊಳಿಸಲಾಗಿದ್ದು, ಉಳಿದ ಶೇಕಡಾ 21ರಷ್ಟು ಪಠ್ಯಕ್ರಮಗಳನ್ನು ಆನ್ಲೈನ್ ಬೋಧನೆ ಮೂಲಕ ಮೇ 31ರೊಳಗೆ ಪೂರ್ಣಗೊಳಿಸಲಾಗುವುದು.
ವೆಬ್ಎಕ್ಸ್, ಸ್ಕೈಪ್ ಹಾಗೂ ಇತರೆ ಆನ್ಲೈನ್ ಪ್ಲಾಟ್ ಫಾರಂ ಮೂಲಕ 30 ಸಾವಿರ ಆನ್ಲೈನ್ ತರಗತಿಗಳನ್ನು ನಡೆಸಲಾಗಿದೆ. ವಾಟ್ಸಪ್ ಮತ್ತು ಟೆಲಿಗ್ರಾಂ ಮೂಲಕ ಶೇಕಡಾ 85 ರಷ್ಟು ವಿದ್ಯಾಥಿಗಳಿಗೆ ಇ-ನೋಟ್ಸ್, ಪಿಪಿಟಿ ಹಾಗೂ ಹಳೆಯ ಪ್ರಶ್ನೆ ಪತ್ರಿಕೆಗಳ ವಿತರಣೆ ಮಾಡಲಾಗಿದೆ. ಜ್ಞಾನನಿಧಿ ಯು-ಟ್ಯೂಬ್ ಚಾನೆಲ್ ಮೂಲಕ 65 ವಿಷಯಗಳ 7074 ಬೋಧನಾ ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, 5 ಲಕ್ಷ ವೀಕ್ಷಣೆಯಾಗಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿಳಿಸಿದ್ದಾರೆ.

ಡಿಜಿಟಲ್ ಕಲಿಕೆಗೆ ಒತ್ತು
'ಗೆಟ್ ಸಿಇಟಿ ಗೋ' ಮೂಲಕ 2 ಲಕಕ್ಕೂ ಅಧಿಕ ವಿದ್ಯಾರ್ಥಿಗಳನ್ನು ತಲುಪಲಾಗಿದ್ದು, 13600 ವಿದ್ಯಾರ್ಥಿಗಳು ಯುಟ್ಯೂಬ್ ಚಂದಾದಾರರಾಗಿದ್ದಾರೆ. 90 ಸಾವಿರ ವಿದ್ಯಾರ್ಥಿಗಳು ಲಾಗಿನ್ ಆಗಿದ್ದಾರೆ. ಸದರಿ ಪೋರ್ಟಲ್ಗೆ ನಾಲ್ಕು ಸ್ಟಾರ್ಗಳು ದೊರೆತಿದ್ದು, ಉತ್ತಮ ಗುಣಮಟ್ಟ ಕಾಯ್ದುಕೊಳ್ಳಲಾಗಿದೆ. 10 ಸಾವಿರಕ್ಕೂ ಅಧಿಕ ಕರೆಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಪರಿಹರಿಸಲಾಗಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಕಾಲೇಜುಗಳಲ್ಲಿ ಉಚಿತ ಲ್ಯಾಪ್ ಟಾಪ್ ವಿತರಿಸಲಾಗಿರುವ ವಿದ್ಯಾರ್ಥಿಗಳಿಗೆ ಆನ್ಲೈನ್ ಕಲಿಕೆ ಅನುಷ್ಠಾನಕ್ಕೆ ಬರಲಿದೆ. ಕೋವಿಡ್ - 19 ರ ಪರಿಸ್ಥಿತಿಯಲ್ಲಿ ಡಿಜಿಟಲ್ ಕಲಿಕೆಗೆ ಹೆಚ್ಚಿನ ಮಹತ್ವ ಒದಗಿಸಲಾಗಿದ್ದು, ಮೈತ್ರಿ ಸಹಾಯವಾಣಿ ಪೋರ್ಟಲ್ ನಿಂದ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಪ್ರಯೋಜನಕಾರಿಯಾಗಿದೆ.

ಹನ್ನೊಂದು ಕೋಟಿ ರೂ. ವೆಚ್ಚ!
ಬರೋಬ್ಬರಿ ಹನ್ನೊಂದು ಕೋಟಿ ರೂ.ಗಳ ವೆಚ್ಚದಲ್ಲಿ ವಿಶ್ವವಿದ್ಯಾಲಯ ಮತ್ತು ಕಾಲೇಜು ಸಮಗ್ರ ನಿರ್ವಹಣಾ ವ್ಯವಸ್ಥೆಯನ್ನು ಇ-ಆಡಳಿತ ಇಲಾಖೆಯ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದೆ. ಯುಜಿಸಿ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದ್ದು, ಪ್ರಸ್ತುತ ಶೈಕ್ಷಣಿಕ ವರ್ಷದ ಕಾರ್ಯಕ್ರಮಗಳನ್ನು ಜೂನ್ 15ರೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ಈ ಬಾರಿ ಬೇಸಿಗೆ ರಜೆಯನ್ನು ಮೊಟಕುಗೊಳಿಸಲಾಗುವುದು.
ರಾಜ್ಯದ 13 ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ಕಾರಿ ಕಾಲೇಜುಗಳು ಇಲ್ಲದೇ ಇರುವುದನ್ನು ಗುರುತಿಸಿದ್ದು, ಹೆಚ್ಚುವರಿ ಕಾಲೇಜುಗಳು ಇರುವ ಕ್ಷೇತ್ರಗಳಿಂದ 6 ಪ್ರಥಮ ದರ್ಜೆ ಕಾಲೇಜುಗಳನ್ನ ಈ ಭಾಗಗಳಿಗೆ ಸ್ಥಳಾಂತರ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಅವರು ಸಿಎಂ ಯಡಿಯೂರಪ್ಪ ಅವರಿಗೆ ತಿಳಿಸಿದರು.

ಉದ್ಘಾಟನೆಗೆ ಪ್ರಧಾನಿ
ಬೆಂಗಳೂರಿನ ಬಾಬಾ ಸಾಹೇಬ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆ ಲಾಕ್ಡೌನ್ ನಂತರದ ದಿನಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲು ಉದ್ದೇಶಿಸಲಾಗಿದೆ.
ಯುವ ಸಬಲೀಕರಣ ಕೇಂದ್ರಗಳನ್ನು ರಚಿಸಿ ವಿದ್ಯಾರ್ಥಿಗಳಿಗೆ ಆನ್ಲೈನ್ ಪೋರ್ಟಲ್ ಮೂಲಕ ಒಂದೇ ಸೂರಿನಡಿ ಸಮಗ್ರ ಮಾಹಿತಿಯನ್ನು ಒದಗಿಸಲಾಗುವುದು. ಈ ಕೇಂದ್ರಕ್ಕೆ ಪ್ರೌಢಶಾಲಾ ಮಟ್ಟದಿಂದಲೇ ವಿದ್ಯಾರ್ಥಿಗಳ ನೊಂದಣಿಯನ್ನು ಪ್ರಾರಂಭಿಸಲಾಗುವುದು. ಶಾಲೆ, ಕಾಲೇಜಿನಿಂದ ಹೊರಗುಳಿಯುವ ವಿದ್ಯಾರ್ಥಿಗಳನ್ನು ಈ ಮೂಲಕ ಪತ್ತೆ ಹಚ್ಚಸಲು ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿಳಿಸಿದ್ದಾರೆ.
ಉನ್ನತ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ.ವಿ. ರಮಣರೆಡ್ಡಿ, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್, ಉಪಸ್ಥಿತರಿದ್ದರು.












Click it and Unblock the Notifications