ಕರ್ನಾಟಕದಲ್ಲಿ ಲಾಕ್ಡೌನ್ ಜೂನ್ 7ರವರೆಗೆ ವಿಸ್ತರಣೆ
ಬೆಂಗಳೂರು, ಮೇ 21: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 14 ದಿನಗಳ ಕಾಲ ಲಾಕ್ಡೌನ್ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಂದಿನ 14 ದಿನಗಳ ಕಾಲ ಕೊರೊನಾ ಲಾಕ್ಡೌನ್ ವಿಸ್ತರಿಸಲಾಗಿದೆ, ಲಾಕ್ಡೌನ್ ಜೂನ್ 7ರ ಬೆಳಗಿನ ಜಾವ 6 ಗಂಟೆಯವರೆಗೆ ಜಾರಿಯಲ್ಲಿರಲಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಮೇ 10 ರಿಂದ ಮೇ 23ರವರೆಗೆ ಲಾಕ್ಡೌನ್ ವಿಧಿಸಲಾಗಿತ್ತು. ಲಾಕ್ಡೌನ್ ಶುರುವಾಗಿ ಇಷ್ಟು ದಿನ ಕಳೆದರೂ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮತ್ತೆ 14 ದಿನಗಳ ಕಾಲ್ ಲಾಕ್ಡೌನ್ ಮುಂದುವರೆಸಲು ಕ್ರಮ ಕೈಗೊಳ್ಳಲಾಗಿದೆ.
ತಜ್ಞರ ಅಭಿಪ್ರಾಯ ಪರಿಗಣಿಸಿ,ಕೊರೊನಾ ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯಾದ್ಯಂತ ವಿಧಿಸಲಾಗಿದ್ದ ಕಠಿಣ ನಿರ್ಬಂಧಗಳನ್ನು ದಿನಾಂಕ 24.05.2021 ರಿಂದ 07.06.2021ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಜನರ ಆರೋಗ್ಯದ ದೃಷ್ಠಿಯಿಂದ ನಿರ್ಬಂಧಗಳನ್ನು ಮುಂದುವರೆಸಿದ್ದು, ಮುಂದೆಯೂ ಸಾರ್ವಜನಿಕರ ಸಹಕಾರ ಕೋರುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಿದ್ದಾಪುರ, ಶಿರಸಿ, ಯಲ್ಲಾಪುರ, ಮುಂಡಗೋಡು ತಾಲೂಕುಗಳನ್ನು ಸೀಲ್ಡೌನ್ ಮಾಡಲಾಗಿದೆ. ಸಾಕಷ್ಟು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದೆ.
ಬೆಳಗ್ಗೆ 10 ಕಳೆದರೂ ವಾಹನಗಳಲ್ಲಿ ಓಡಾಡುತ್ತಿರುವುದು ಕಂಡುಬರುತ್ತಿದೆ. ಬೆಳಗ್ಗೆ 9.45ರೊಳಗೆ ಜನರು ತಮ್ಮ ಮನೆ ಸೇರಿಕೊಳ್ಳಬೇಕು. ನಿಯಮ ಉಲ್ಲಂಘಿಸಿದರೆ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಜತೆಗೆ ಸರ್ಕಾರಿ ನೌಕರರ ವೇತನ ಕಡಿತಗೊಳಿಸುವ ಬಗ್ಗೆ ನಿರ್ಧರಿಸಿಲ್ಲ ಎಂದು ಸಹ ಅವರು ಮಾಹಿತಿ ನೀಡಿದರು.
ಬೆಳಗ್ಗೆ 6ರಿಂದ 10ರವರೆಗೆ ಅಗತ್ಯವಸ್ತುಗಳ ಖರೀದಿಗೆ ಅವಕಾಶ ನೀಡಲಾಗುವುದು. ಆದರೆ ಅನಗತ್ಯವಾಗಿ ಓಡಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು.
Recommended Video
ಸದ್ಯ ಬೆಳಗ್ಗೆ 10 ಗಂಟೆಯ ನಂತರವೂ ಜನರು ಅನಗತ್ಯವಾಗಿ ಓಡಾಡುತ್ತಿರುವುದು ಕಂಡುಬರುತ್ತಿದೆ ಹೀಗೆಯೇ ಮುಂದುವರೆದರೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ, ಜನರು ಕಟ್ಟುನಿಟ್ಟಾಗಿ ಲಾಕ್ಡೌನ್ ಪಾಲನೆ ಮಾಡಬೇಕು ಎಂದರು.