ಕೋವಿಡ್ ಲಾಕ್ಡೌನ್; ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ
ಬೆಂಗಳೂರು, ಮೇ 09; ಕೋವಿಡ್ ಹರಡುವಿಕೆ ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದೆ. ಮೇ 10ರ ಸೋಮವಾರದಿಂದ 24ರ ತನಕ ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಈ ಕುರಿತು ಪತ್ರವನ್ನು ಬರೆದಿದ್ದಾರೆ, ಕೆಲವು ಸಲಹೆಗಳನ್ನು ನೀಡಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕ್ರಮಗಳನ್ನು ಜಾರಿಗೆ ತರುವುದಾಗಿ ಹೇಳಿರುವುದರಿಂದ ಈಗಾಗಲೇ ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ದುಡಿಯುವ ವರ್ಗಕ್ಕೆ ನೆರವಾಗುವಂತೆ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯ ಅವರು ಪಕ್ಷದ ಶಾಸಕರ ಅಭಿಪ್ರಾಯಗಳನ್ನು ಸಂಗ್ರಹಿಸಿ ಸರ್ಕಾರಕ್ಕೆ ಕೆಲವು ಸಲಹೆಗಳನ್ನೂ ನೀಡಿದ್ದಾರೆ.
ಸಲಹೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕಾರ್ಯೋನ್ಮುಖರಾಗಬೇಕು, ಜನರಿಗೆ ಬಂದೊದಗಿರುವ ಸಂಕಟವನ್ನು ನಿವಾರಿಸಬೇಕೆಂದು ಸಿದ್ದರಾಮಯ್ಯ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕಾಳಸಂತೆಯಲ್ಲಿ ಮಾರಾಟ
ರಾಜ್ಯದಲ್ಲಿ ಸದ್ಯ ಬೇಡಿಕೆ ಇರುವುದಕ್ಕಿಂತ ಹೆಚ್ಚಿನ ಆಕ್ಸಿಜನ್ ಉತ್ಪಾದನೆಯಾಗುತ್ತಿದೆ. ನಮ್ಮಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಅನ್ನು ಇಲ್ಲಿಯೇ ಉಳಿಸಿಕೊಳ್ಳಬೇಕು. ಜಿಲ್ಲಾವಾರು ಆಕ್ಸಿಜನ್ ಘಟಕಗಳನ್ನು ಸ್ಥಾಪಿಸಬೇಕು. ಆಕ್ಸಿಜನ್ ಸಿಲಿಂಡರುಗಳು ಕಾಳಸಂತೆಯಲ್ಲಿ ಮಾರಾಟ ಮಾಡುವ ದಂಧೆ ನಿಲ್ಲಿಸಿ, ಮನೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೂ ಸುಲಭವಾಗಿ ಆಕ್ಸಿಜನ್ ಸಿಗುವಂತೆ ಮಾಡಬೇಕು. ಆಕ್ಸಿಜನ್ ಉತ್ಪಾದನೆ ಆಗುತ್ತಿರುವ ಪ್ರದೇಶಗಳಲ್ಲೇ ಆಕ್ಸಿಜನ್ ಲಭ್ಯತೆಯ ಆಧಾರದ ಮೇಲೆ ತಾತ್ಕಾಲಿಕ ಕೋವಿಡ್ ಆಸ್ಪತ್ರೆಯನ್ನು ಸ್ಥಾಪಿಸಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ವಿವರಿಸಿದ್ದಾರೆ.

ರೆಮ್ಡೆಸಿವಿರ್ ಔಷಧಿಗಳು
ಜಿಲ್ಲಾವಾರು ಚಿಕಿತ್ಸೆ ಎಂಬ ಅವೈಜ್ಞಾನಿಕ ವಿಧಾನವನ್ನು ಕೈಬಿಟ್ಟು ಸುತ್ತಮುತ್ತಲ ಏಳೆಂಟು ಜಿಲ್ಲೆಗಳ ರೋಗಿಗಳನ್ನು ಒಂದು ಕಡೆ ತಂದು ಆಕ್ಸಿಜನ್ ನೀಡಿ ರಕ್ಷಿಸಬೇಕು. ಇದರಿಂದ ಒತ್ತಡ ಕಡಿಮೆಯಾಗುತ್ತದೆ. ಖಾಸಗಿ ಆಸ್ಪತ್ರೆಗಳವರು ರೆಮ್ಡೆಸಿವಿರ್ಔಷಧಿ ತರುವಂತೆ ರೋಗಿಗಳಿಗೆ ಹೇಳುತ್ತಿದ್ದಾರೆ. ಈ ಜೀವರಕ್ಷಕ ಔಷಧಿಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವವರ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಪ್ರತಿ ರೋಗಿಗೆ ಕನಿಷ್ಟ ಮಟ್ಟದ ಮೊತ್ತವನ್ನು ನಿಗದಿ ಪಡಿಸಲಾಗಿದೆ. ಅದರಿಂದ ಸಮರ್ಪಕವಾಗಿ ರೆಮ್ಡೆಸಿವಿರ್ ನಂಥ ಔಷಧಗಳನ್ನೂ ನೀಡಲಾಗುತ್ತಿಲ್ಲ ಎಂಬ ಮಾಹಿತಿ ಇದೆ. ಈ ಅವ್ಯವಸ್ಥೆಯನ್ನು ಸರಿ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬೆಡ್ ಸ್ಥಾಪಿಸಲು ಯಾವ ಸಮಸ್ಯೆ ಇದೆ
ರಾಜ್ಯದ ಅಸಹಾಯಕ ರೋಗಿಗಳಿಗೆ ಸಾಮಾನ್ಯ, ಐ.ಸಿ.ಯು, ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆ ಇರುವ ಸಾಕಷ್ಟು ಬೆಡ್ಗಳನ್ನು ಸ್ಥಾಪಿಸಲು ಯಾವ ಸಮಸ್ಯೆ ಇದೆ? ಬೆಡ್ಗಳು ಎಷ್ಟು ಬೇಕಾಗಬಹುದು ಎಂಬುದನ್ನು ಮೊದಲೇ ಅಂದಾಜಿಸಿ ಕಾರ್ಯೋನ್ಮಖರಾಗಬೇಕು. ವೈದ್ಯರುಗಳಿಗೆ ಸಂಬಂಧಿಸಿದಂತೆ, ಖಾಸಗಿ, ನಿವೃತ್ತರಾದವರನ್ನು ಅಗತ್ಯ ಬಿದ್ದರೆ ನೇಮಿಸಿಕೊಳ್ಳಬೇಕು. ದಾದಿಯರ ವಿಷಯದಲ್ಲೂ ಹಾಗೆ ಮಾಡಬೇಕು. ಈಗಾಗಲೇ ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಂಡಿರುವ ಅಂತಿಮ ವರ್ಷಗಳಲ್ಲಿರುವ ವಿದ್ಯಾರ್ಥಿಗಳನ್ನು ಚಿಕಿತ್ಸೆಗೆ ನಿಯೋಜಿಸಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಆದ್ಯತೆಯ ಮೇಲೆ ಲಸಿಕೆ ಹಾಕಿ
ಲಸಿಕೆ ಹಾಕಿಸಿಕೊಳ್ಳದವರಿಗೆ ಆದ್ಯತೆಯ ಮೇಲೆ ಲಸಿಕೆ ಹಾಕಬೇಕು. ಕಳೆದ ವರ್ಷ ತರಿಸಿದ ಸಾವಿರಗಟ್ಟಲೆ ವೆಂಟಿಲೇಟರ್ಗಳನ್ನು ಬಳಸದೆ ಗೋಡೌನುಗಳಲ್ಲಿ ಧೂಳು ತಿನ್ನಲು ಬಿಡಲಾಗಿದೆಯೆಂಬ ಮಾಹಿತಿ ಇದೆ. ಇದನ್ನು ಕ್ರಿಮಿನಲ್ ವರ್ತನೆ ಎನ್ನಬೇಕಾಗುತ್ತದೆ.
ಅಗತ್ಯ ಬಿದ್ದರೆ ಕಲ್ಯಾಣ ಮಂಟಪ, ಕ್ರೀಡಾಂಗಣ, ಹಾಸ್ಟೆಲುಗಳು ಮುಂತಾದವುಗಳನ್ನು ತಾತ್ಕಾಲಿಕ ಆಸ್ಪತ್ರೆ ಮಾಡಿ ಚಿಕಿತ್ಸೆ ನೀಡಿ. ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲೂ ಖಾಲಿ ಜಾಗವನ್ನು ಹುಡುಕಿ ವ್ಯವಸ್ಥಿತವಾಗಿ ಶವ ಸಂಸ್ಕಾರ ನಡೆಸಬೇಕು. ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಆಹಾರದ ಕಿಟ್ಗಳನ್ನು ನೀಡಿ
ಜನ ಉದ್ಯೋಗಗಳನ್ನು ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಸರ್ಕಾರ ಪ್ರತಿಯೊಬ್ಬರಿಗೂ ತಿಂಗಳಿಗೆ ತಲಾ 10 ಕೆ.ಜಿ. ಅಕ್ಕಿ ನೀಡಬೇಕು. ಜೊತೆಗೆ ಬೇಳೆ, ಅಡುಗೆ ಎಣ್ಣೆ, ಮುಂತಾದ ದಿನಸಿ ಪದಾರ್ಥಗಳುಳ್ಳ ಕಿಟ್ಗಳನ್ನು ನೀಡಬೇಕು.
ಪ್ರತಿ ಬಿ.ಪಿ.ಎಲ್ ಕುಟುಂಬಕ್ಕೆ ಮೊದಲಿಗೆ ರೂ.10,000 ಗಳನ್ನು ನೀಡಬೇಕು. ನಂತರ ತಿಂಗಳಿಗೆ ರೂ.6,000 ಗಳನ್ನು ನೀಡಬೇಕು. ರಾಜ್ಯದ ರೈತರಿಗೆ, ಕುಶಲಕರ್ಮಿ ಸಮುದಾಯಗಳಿಗೆ, ಕಾರ್ಮಿಕರಿಗೆ, ಡ್ರೈವರುಗಳಾದಿಯಾಗಿ ಎಲ್ಲ ದುಡಿಯುವ ವರ್ಗಗಳಿಗೆ ರೂ.10,000 ಗಳನ್ನು ನೀಡಬೇಕು. ಸಣ್ಣ, ಅತಿ ಸಣ್ಣ, ಸೂಕ್ಷ್ಮ, ಗೃಹ ಕೈಗಾರಿಕೆಗಳಿಗೆ, ವಾಹನಗಳ ಮಾಲೀಕರ ಸಭೆಗಳನ್ನು ನಡೆಸಿ ಸೂಕ್ತ ಪ್ಯಾಕೇಜ ಅನ್ನು ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
Recommended Video

ನರೇಗಾ ಯೋಜನೆಯನ್ನು ಬಳಕೆ ಮಾಡಿ
ನಗರಗಳಿಂದ ಹಳ್ಳಿಗಳಿಗೆ ದುಡಿಯುವ ಜನ ವಾಪಸಾಗಿದ್ದಾರೆ. ಈ ಸಂದರ್ಭದಲ್ಲಿ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಅತ್ಯಂತ ಸಮರ್ಪಕವಾಗಿ ಬಳಸಬೇಕು. ಕನಿಷ್ಟ 200 ಮಾನವ ದಿನಗಳ ಯೋಜನೆಯನ್ನು ಜಾರಿಗೊಳಿಸಬೇಕು. ಅಗತ್ಯ ಇರುವ ಕಡೆ ಬೇಡಿಕೆಯನ್ನು ಆಧರಿಸಿ ಉದ್ಯೋಗ ನೀಡಬೇಕು. ಪ್ರಸ್ತುತ ಇರುವ ಹಣದುಬ್ಬರವನ್ನು ಆಧರಿಸಿ ನರೇಗಾ ಕೂಲಿ ಮೊತ್ತವನ್ನು ಪರಿಷ್ಕರಿಸಬೇಕು ಮತ್ತು ಹೆಚ್ಚಿಸಬೇಕು.
ನರೇಗಾ ಯೋಜನೆಯಡಿ ಕೆಲಸ ಮಾಡಿದವರಿಗೆ 4 ತಿಂಗಳಿಂದ ಹಣ ಬಿಡುಗಡೆ ಮಾಡಿಲ್ಲ. ಈ ಬಾಕಿ ಉಳಿಸಿಕೊಂಡಿರುವ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.












Click it and Unblock the Notifications