ಲಾಕ್ಡೌನ್; ಜೂನ್ 1ರಿಂದ ಸಿಗಲಿದೆ ಕೆಲವು ವಿನಾಯಿತಿ?
ಬೆಂಗಳೂರು, ಮೇ 26; ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ಕರ್ನಾಟಕದಲ್ಲಿ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಮೇ 10 ರಿಂದ 14ರ ತನಕ ಲಾಕ್ಡೌನ್ ಮಾಡಲಾಗಿತ್ತು. ಪುನಃ ಮೇ 24ರಿಂದ ಜೂನ್ 7ರ ತನಕ ಲಾಕ್ಡೌನ್ ಮುಂದುವರೆಯಲಿದೆ.
ಜನತಾ ಕರ್ಫ್ಯೂ, ಲಾಕ್ಡೌನ್ಗಳಿಂದಾಗಿ ಆರ್ಥಿಕ ಚಟುವಟಿಕೆಗಳಿಗೆ ಭಾರಿ ಹೊಡೆತ ಬಿದ್ದಿದೆ. ಜೂನ್ 7ರ ತನಕ ಲಾಕ್ಡೌನ್ ಜಾರಿಯಲ್ಲಿದ್ದರೂ ಕೆಲವು ವಿನಾಯಿತಿಗಳನ್ನು ನೀಡಲು ಸರ್ಕಾರ ಮುಂದಾಗಿದೆ. ಈ ಕುರಿತು ಚರ್ಚೆಗಳು ನಡೆದಿವೆ.
ರಾಜ್ಯದ ಅರ್ಥಿಕ ಪರಿಸ್ಥಿತಿ, ಉದ್ಯಮಗಳ ಪರಿಸ್ಥಿತಿಯನ್ನು ನೋಡಿಕೊಂಡು ಜೂನ್ 1ರಿಂದ ಕೆಲವು ವಿನಾಯಿತಿಗಳನ್ನು ನೀಡಲಾಗುತ್ತದೆ. ಈ ಕುರಿತು ಸಚಿವರ ಜೊತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ.
ಜೂನ್ 1ರಿಂದ ಕೆಲವು ಕೈಗಾರಿಕೆಗಳಿಗೆ ಲಾಕ್ಡೌನ್ನಿಂದ ವಿನಾಯಿತಿ ನೀಡುವ ಕುರಿತು ಚರ್ಚೆ ನಡೆದಿದೆ. ಇವುಗಳಲ್ಲಿ ವಿದೇಶಗಳಿಗೆ ರಫ್ತು ಮಾಡುವ ಉತ್ಪನ್ನಗಳು ಸೇರಿವೆ. ಉಳಿದ ಕ್ಷೇತ್ರಗಳಿಗೆ ಕಠಿಣ ನಿಯಮಗಳು ಮುಂದುವರೆಯಲಿವೆ.

ರಫ್ತಿನ ಮೇಲೆ ಹೊಡೆತ ಬಿದ್ದಿದೆ
ಲಾಕ್ಡೌನ್ ಪರಿಣಾಮ ಬಹುತೇಕ ಕೈಗಾರಿಕೆಗಳಿಗೆ ಬೀಗ ಬಿದ್ದಿದೆ. ಕರ್ನಾಟಕದಲ್ಲಿ ಲಾಕ್ಡೌನ್ ಪರಿಣಾಮದಿಂದ ರಫ್ತಿನ ಮೇಲೆ ಹೊಡೆತ ಬಿದ್ದಿದೆ. ಕಂಪನಿಗಳು ಒಂದು ವೇಳೆ ಬೇರೆ ರಾಜ್ಯಕ್ಕೆ ಸ್ಥಳಾಂತರವಾದರೆ ರಾಜ್ಯಕ್ಕೆ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆದಿದೆ.

ವಿನಾಯಿತಿ ನೀಡಬೇಕು ಎಂದು ಮನವಿ
ಕೆಲವು ಕೈಗಾರಿಕೆಗಳಿಗೆ ವಿನಾಯಿತಿ ನೀಡಿ ಎಂದು ಸರ್ಕಾರಕ್ಕೆ ಮನವಿ ಸಲ್ಲಿಕೆಯಾಗಿದೆ. ಯಾವ-ಯಾವ ಉದ್ಯಮಗಳಿಗೆ ವಿನಾಯಿತಿ ನೀಡಬೇಕು ಎಂದು ಸಭೆಯಲ್ಲಿ ಚರ್ಚಿಸಲಾಗಿದೆ. ಯಡಿಯೂರಪ್ಪ ಅಧಿಕಾರಿಗಳ ಜೊತೆ ಇನ್ನೊಮ್ಮೆ ಚರ್ಚೆಯನ್ನು ನಡೆಸಿ ಬಳಿಕ ವಿನಾಯಿತಿಯನ್ನು ಘೋಷಣೆ ಮಾಡಲಾಗುತ್ತದೆ.

ಗ್ರಾಮೀಣ ಪ್ರದೇಶಗಳತ್ತ ಗಮನಹರಿಸಿ
ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಗ್ರಾಮೀಣ ಪ್ರದೇಶದಲ್ಲಿ ಹೋಂ ಐಸೋಲೇಷನ್ನಲ್ಲಿ ಇರುವವರನ್ನು ಕೋವಿಡ್ ಕೇರ್ ಸೆಂಟರ್ಗೆ ದಾಖಲು ಮಾಡಿಸಬೇಕು. ಇದಕ್ಕಾಗಿ ಅಧಿಕಾರಿಗಳು ಜನರ ಮನವೊಲಿಸಬೇಕು ಎಂದು ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಡಿಸ್ಚಾರ್ಜ್ಗೆ ಹೊಸ ನಿಯಮಗಳು
ಕೋವಿಡ್ ರೋಗಿಗಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲು ಇರುವ ಶಿಷ್ಟಾಚಾರವನ್ನು ಬದಲಾವಣೆ ಮಾಡಲು ಸರ್ಕಾರ ಮುಂದಾಗಿದೆ. ಹೊಸ ಶಿಷ್ಟಾಚಾರ ಪಾಲನೆ ಮಾಡುವಂತೆ ಆಸ್ಪತ್ರೆಗಳಿಗೆ ಸೂಚನೆ ನೀಡಬೇಕು ಎಂದು ಅಧಿಕಾರಿಗಳಿಗೆ ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ.












Click it and Unblock the Notifications