ಬೆಂಗಳೂರು ಗ್ರಾಮಾಂತರದಿಂದ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆಯೇ ಕಾಂಗ್ರೆಸ್? ಡಿಕೆ ಸುರೇಶ್ಗೆ ಯಾವ ಕ್ಷೇತ್ರ?
ಬೆಂಗಳೂರು,ಡಿಸೆಂಬರ್ 20: 2024 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕೊಟ್ಟಿರುವ ಗುರಿಯನ್ನ ತಲುಪಲು ರಾಜ್ಯದಲ್ಲಿ ಕಾಂಗ್ರೆಸ್ ಸದ್ದಿಲ್ಲದೇ ತಯಾರಿ ನಡೆಸುತ್ತಿದೆ. ಮುಂಬರುವ ಬಿಬಿಎಂಪಿ ಚುನಾವಣೆಯ ದೃಷ್ಟಿಯಿಂದ 28 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಮುಖವಾಗಿ ಬೆಂಗಳೂರು ನಗರದ ಮೂರು ಲೋಕಸಭಾ ಕ್ಷೇತ್ರಗಳನ್ನು ವಶಪಡಿಸಿಕೊಳ್ಳಲು ಕಾಂಗ್ರೆಸ್ ತಂತ್ರಗಾರಿಕೆ ರೂಪಿಸುತ್ತಿದೆ.
ಹೌದು, ಬೆಂಗಳೂರು ವ್ಯಾಪ್ತಿಯಲ್ಲಿ ಕನಿಷ್ಠ ಎರಡು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾಸ್ಟರ್ ಪ್ಲಾನ್ ನಡೆಸಿದ್ದಾರೆ. ಬೆಂಗಳೂರು ನಗರ ಉಸ್ತುವಾರಿ ಸಚಿವರಾಗಿರುವ ಡಿ ಕೆ ಶಿವಕುಮಾರ್ ಅವರು,ಬೆಂಗಳೂರು ಗ್ರಾಮಾಂತರ, ಉತ್ತರ, ದಕ್ಷಿಣ ಲೋಕಸಭಾ ಕ್ಷೇತ್ರವನ್ನು ಗೆಲ್ಲುವುದು ಡಿ ಕೆ ಶಿವಕುಮಾರ್ ಅವರಿಗೆ ಪ್ರತಿಷ್ಟೆಯಾಗಿದೆ. ಹೀಗಾಗಿ ಸೂಕ್ತ ಅಭ್ಯರ್ಥಿಗಳ ಹುಡುಕಾಟವನ್ನ ನಡೆಸಿರುವ ಡಿ ಕೆ ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಯನ್ನ ಕಣಕ್ಕಿಳಿಸುವ ಚಿಂತನೆಯನ್ನ ನಡೆಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬೆಂಗಳೂರು ವ್ಯಾಪ್ತಿಯಲ್ಲಿ ಹೆಚ್ಚು ಸ್ಥಾನವನ್ನ ಗೆಲ್ಲಲ್ಲು ಸಮರ್ಥ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಆರಂಭಿಸಿದ್ದಾರೆ. ಬೆಂಗಳೂರಿನ ಮೂರು ಕ್ಷೇತ್ರಗಳಲ್ಲೂ ಪ್ರಬಲ ಅಭ್ಯರ್ಥಿಗಳಿಗಾಗಿ ಶೋಧ ನಡೆಸಲಾಗುತ್ತಿದೆ. ಈ ನಿಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ನಿಂದ ಮಹಿಳಾ ಅಭ್ಯರ್ಥಿಯಾಗಿ ಕುಸುಮಾ ಹನುಮಂತರಾಯಪ್ಪಗೆ ಟಿಕೆಟ್ ಕೊಡಲು ಚಿಂತನೆ ನಡೆಸಲಾಗಿದೆ.
ಕುಸುಮ ಹನುಮಂತರಾಯಪ್ಪನವರು 2023 ಎ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಕುಸುಮಾ ಹನುಮಂತರಾಯಪ್ಪ ಅವರು ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಟಫ್ ಫೈಟ್ ಕೊಟ್ಟಿದ್ದರು. ಹೀಗಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಕುಸುಮಾ ಅವರನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಚಿಂತನೆಯನ್ನ ಕಾಂಗ್ರೆಸ್ ನಾಯಕರು ನಡೆಸಿದ್ದಾರೆ ಎನ್ನಲಾಗಿದೆ.

ಮಹಿಳಾ ಕೋಟಾದಲ್ಲಿ ಕಾಂಗ್ರೆಸ್ ವಕ್ತಾರೆಯಾಗಿರುವ ಕುಸುಮಾ ಹನುಮಂತರಾಮಪ್ಪ ಅವರನ್ನ ಕಣಕ್ಕಿಸುವ ನಿಟ್ಟಿನಲ್ಲಿ ಡಿ ಕೆ ಶಿವಕುಮಾರ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಡಿ ಕೆ ಬ್ರದರ್ಸ್ ಅವರ ಭದ್ರಕೋಟೆಯಾಗಿದ್ದು, ಸುಲಭವಾಗಿ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ಅಲ್ಲದೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕುಸುಮಾ ಅವರಿಗೆ ತಮ್ಮದೇ ಆದ ವರ್ಚಸ್ಸು ಹಾಗೂ ಡಿ ಕೆ ಶಿವಕುಮಾರ್ ಅವರ ಬೆಂಬಲ ಇರುವುದರಿಂದ ಸುಲಭವಾಗಿ ಗೆಲ್ಲಬಹುದು ಎಂಬುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರವಾಗಿದೆ.
ಇನ್ನೂ ಹಾಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಡಿ ಕೆ ಸುರೇಶ್ ಅವರು ತಮ್ಮ ಕ್ಷೇತ್ರವನ್ನ ಬಿಟ್ಟುಕೊಟ್ಟು ಒಕ್ಕಲಿಗರ ಭದ್ರಕೋಟೆಯಾದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ರೆಡಿಯಾಗಿದ್ದಾರೆ ಎನ್ನಲಾಗಿದೆ. ಈಗಾಗಲೇ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾದ ಡಿ ವಿ ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ಸಮರ್ಥ ಅಭ್ಯರ್ಥಿಯ ಹುಡುಕಾಟವನ್ನ ಬಿಜೆಪಿ ನಡೆಸಿದೆ. ಹೀಗಾಗಿ ಕಾಂಗ್ರೆಸ್ ಸಮರ್ಥ ಅಭ್ಯರ್ಥಿಯನ್ನ ಕಣಕ್ಕಿಳಿಸಲು ಮುಂದಾಗಿದೆ.
ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಬಿಜೆಪಿಯಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಭಿನ್ನಮತಗಳು ಸೃಷ್ಟಿಯಾಗುವ ಸಾಧ್ಯತೆ ಇದೆ. ಹೀಗಾಗಿ ಒಕ್ಕಲಿಗ ನಾಯಕರಾದ ಡಿ ಕೆ ಸುರೇಶ್ ಅವರನ್ನ ಈ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರ ಹಾಗೂ ಸಚಿವರು ಸಹ ಡಿ ಕೆ ಸುರೇಶ್ ಅವರನ್ನ ಕಣಕ್ಕಿಳಿಸುವ ಕುರಿತು ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.












Click it and Unblock the Notifications