ಕರ್ನಾಟಕದ ಎಲ್ಲಾ ಕೋರ್ಟ್ಗಳಲ್ಲಿ ಜುಲೈ 8ರಂದು ಲೋಕ ಅದಾಲತ್
ಬೆಂಗಳೂರು, ಜುಲೈ 07; ಕಕ್ಷಿದಾರರು ತಮ್ಮ ಪ್ರಕರಣಗಳನ್ನು ಸುಲಭವಾಗಿ ಇತ್ಯರ್ಥಪಡಿಸಿಕೊಳ್ಳಲು ಇಲ್ಲಿದೆ ಸುವರ್ಣಾವಕಾಶ. ಹೈಕೋರ್ಟ್ ಸೇರಿ ಕರ್ನಾಟಕದ ಎಲ್ಲ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್ಎಲ್ಎಸ್ಎ) ವತಿಯಿಂದ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ಜುಲೈ 8ರ ಶನಿವಾರ ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ಆಯೋಜನೆ ಮಾಡಲಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್ಎಲ್ಎಸ್ಎ) ಕಾರ್ಯ ನಿರ್ವಾಹಕ ಅಧ್ಯಕ್ಷರೂ ಆಗಿರುವ ಹಿರಿಯ ನ್ಯಾಯಮೂರ್ತಿ ಜಿ. ನರೇಂದರ್ ಮಾಹಿತಿ ನೀಡಿದ್ದಾರೆ. "ರಾಜಿ ಮಾಡಿಕೊಳ್ಳಬಹುದಾದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಸಾರ್ವಜನಿಕರು ಲೋಕ ಅದಾಲತ್ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು" ಎಂದು ಹೇಳಿದ್ದಾರೆ.
ಮೋಟಾರು ಅಪಘಾತ ಪರಿಹಾರ ನ್ಯಾಯಮಂಡಳಿ ಪ್ರಕರಣ, ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮ್ಗಳು, ವೈವಾಹಿಕ/ ಕೌಟುಂಬಿಕ ಪ್ರಕರಣ (ವಿಚ್ಛೇದನ ಹೊರತುಪಡಿಸಿ), ಚೆಕ್ ಅಮಾನ್ಯ ಪ್ರಕರಣಗಳೂ ಸೇರಿ ರಾಜಿಯಾಗಬಲ್ಲ ಕ್ರಿಮಿನಲ್ ಹಾಗೂ ಸಿವಿಲ್ ಪ್ರಕರಣಗಳನ್ನು ಅದಾಲತ್ನಲ್ಲಿ ಪರಿಗಣಿಸಲಾಗುತ್ತದೆ.
ಶುಲ್ಕವೂ ಮರು ಪಾವತಿ; ನ್ಯಾಯಾಲಯಗಳಲ್ಲಿ ಉಭಯ ಪಕ್ಷದವರು ಸಹ ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುತ್ತದೆ. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ.
ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯಾರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು.
ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕೆ ಇದೊಂದು ವಿಶೇಷ ಅವಕಾಶವಾಗಿದೆ ಎಂದು ತಿಳಿಸಲಾಗಿದೆ.
ಶೇ 50ರಷ್ಟು ದಂಡ ವಿನಾಯಿತಿ; ಅಲ್ಲದೇ, ಪೊಲೀಸ್ ಇಲಾಖೆಯ ಅಂಕಿ-ಅಂಶದ ಪ್ರಕಾರ ರಾಜ್ಯದಾದ್ಯಂತ 2 ಕೋಟಿಗೂ ಅಧಿಕ ಟ್ರಾಫಿಕ್ ಚಲನ್ ಪ್ರಕರಣಗಳಲ್ಲಿ ಸಾವಿರ ಕೋಟಿಗೂ ಅಧಿಕ ದಂಡದ ಮೊತ್ತ ವಸೂಲಿಗೆ ಬಾಕಿ ಇದೆ. ಈ ನಿಟ್ಟಿನಲ್ಲಿ ಜೂನ್ 14ರಂದು ಸರ್ಕಾರದೊಂದಿಗೆ ಸಭೆ ನಡೆಸಿ ಟ್ರಾಫಿಕ್ ಚಲನ್ ಪ್ರಕರಣಗಳ ದಂಡದಲ್ಲಿ ಶೇ.50 ವಿನಾಯಿತಿ ನೀಡುವಂತೆ ಕೋರಲಾಗಿತ್ತು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸರ್ಕಾರ 2023ರ ಫೆ.11ಕ್ಕೂ ಹಿಂದಿನ ಟ್ರಾಫಿಕ್ ಚಲನ್ ಪ್ರಕರಣಗಳಲ್ಲಿ ಶೇ.50 ದಂಡದ ಮೊತ್ತ ವಿನಾಯಿತಿ ನೀಡಿ ಜು.5ರಂದು ಆದೇಶ ಹೊರಡಿಸಿದೆ. ಸಾರ್ವಜನಿಕರು ಇದನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಜಿ. ನರೇಂದರ್ ಮನವಿ ಮಾಡಿದ್ದಾರೆ.












Click it and Unblock the Notifications