ಮೊದಲ ದಿನವೇ ನಾಮಪತ್ರ ಸಲ್ಲಿಕೆ ಭರಾಟೆ
ಬೆಂಗಳೂರು, ಮಾ. 19 : ಕರ್ನಾಟಕದಲ್ಲಿ ಬುಧವಾರ ಚುನಾವಣಾ ಅಧಿಸೂಚನೆ ಹೊರಬಿದ್ದಿದ್ದು, ನಾಮಪತ್ರ ಸಲ್ಲಿಕೆ ಸೇರಿದಂತೆ ಚುನಾವಣಾ ಪ್ರಕ್ರಿಯೆಗಳು ಅಧಿಕೃತವಾಗಿ ಆರಂಭವಾಗಿವೆ. ಅನಂತ್ ಕುಮಾರ್, ಕೆ.ಎಚ್.ಮುನಿಯಪ್ಪ, ಜೆಡಿಎಸ್ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ಸೇರಿದಂತೆ ಹಲವು ನಾಯಕರು ಮೊದಲ ದಿನ ನಾಮಪತ್ರ ಸಲ್ಲಿಸಿದ್ದಾರೆ.
ಬುಧವಾರ ಎಲ್ಲ ಜಿಲ್ಲೆಗಳಲ್ಲಿ ಚುನಾವಣಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದು ಮಾ.19ರ ಬುಧವಾರದಿಂದ ಮಾರ್ಚ್26ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಬುಧವಾರವೇ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಗುರುವಾರ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ. [ನಾಮಪತ್ರ ಸಲ್ಲಿಸಿದ ಅನಂತ್ ಕುಮಾರ್ ಹೇಳಿದ್ದೇನು?]
ಬುಧವಾರ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್, ತುಮಕೂರಿನಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ, ಕೋಲಾರದಲ್ಲಿ ಕೇಂದ್ರ ಸಚಿವ ಕೆ.ಎಸ್.ಮುನಿಯಪ್ಪ, ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್, ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ಮುಂತಾದವರು ನಾಮಪತ್ರ ಸಲ್ಲಿಸಿದರು. [ಬಿರುಸಿನ ಮತಯಾಚನೆ ಚಿತ್ರಗಳು]
ಅನಂತ್ ಕುಮಾರ್ ನಾಮಪತ್ರ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದ ಪಕ್ಷದ ಅಭ್ಯರ್ಥಿ ಅನಂತ್ ಕುಮಾರ್ ಬುಧವಾರ ಜಯನಗರದ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಪತ್ನಿ ತೇಜಸ್ವಿನಿ ಅನಂತ್ ಕುಮಾರ್, ಮಾಜಿ ಡಿಸಿಎ ಆರ್.ಅಶೋಕ್, ಮಾಜಿ ಸಚಿವ ವಿ.ಸೋಮಣ್ಣ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಬಿಫಾರಂ ಇಲ್ಲದೆ ನಾಮಪತ್ರ
ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ಬಿಫಾರಂ ಇಲ್ಲದೆ ಬುಧವಾರ ತಮ್ಮ ನಾಮಪತ್ರ ಸಲ್ಲಿಸಿದರು. ಸಚಿವರಾದ ಕಿಮ್ಮನೆ ರತ್ನಾಕರ್, ವಿನಯ್ ಕುಮಾರ್ ಸೊರಕೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಾರ್ಚ್ 26ರವರೆಗೆ ಬಿಫಾರಂ ಸಲ್ಲಿಸಲು ಅವಕಾಶವಿದ್ದು, ಅಷ್ಟರೊಳಗೆ ಬಿಫಾರಂ ನೀಡಲಿದ್ದಾರೆ ಎಂದು ಸಚಿವ ಕಿಮ್ಮನೆ ರತ್ನಾಕರ್ ಈ ಸಂದರ್ಭದಲ್ಲಿ ತಿಳಿಸಿದರು.
ಎರಡನೇ ಬಾರಿ ಅಖಾಡಕ್ಕಿಳಿದ ಪಿಸಿ ಮೋಹನ್
ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಮೊದಲ ದಿನವಾದ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. 2009ರಲ್ಲಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು ಈ ಚುನಾವಣೆಯಲ್ಲಿ ಮರು ಆಯ್ಕೆ ಬಯಸಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಸುರೇಶ್ ಕುಮಾರ್ ಪಿಸಿ ಮೊಹನ್ ಜೊತೆಗೆ ನಾಮಪತ್ರ ಸಲ್ಲಿಸುವಾಗ ಹಾಜರಿದ್ದರು.
ಎ.ಕೃಷ್ಣಪ್ಪ ನಾಮಪತ್ರ
ತುಮಕೂರು ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಜೆಡಿಎಸ್ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ಬುಧವಾರ ತಮ್ಮ ನಾಮಪತ್ರ ಸಲ್ಲಿಸಿದರು. ನೂರಾರು ಕಾರ್ಯಕರ್ತರೊಂದಿಗೆ ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಿದ ಅವರು, ನಂತರ ತಮ್ಮ ನಾಮಪತ್ರ ಸಲ್ಲಿಸಿದರು. ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಚುನಾವಣಾ ವೇಳಾಪಟ್ಟಿ
ಮಾರ್ಚ್ 19ರಂದು ಚುನಾವಣಾ ಅಧಿಸೂಚನೆ ಹೊರಬಿದ್ದಿದ್ದು ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ. ಮಾರ್ಚ್ 26 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದ್ದು, ಮಾ.27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮಾರ್ಚ್ 29 ಕಡೆಯ ದಿನವಾಗಿದ್ದು, ಏಪ್ರಿಲ್ 17ಕ್ಕೆ ಚುನಾವಣೆ ನಡೆಯಲಿದೆ. ಮೇ 16ರಂದು ಮತ ಎಣಿಕೆ ನಡೆಯಲಿದೆ.