ಲೋಕಸಭೆ ಚುನಾವಣೆ 2024; ಬಿಜೆಪಿ ನಾಯಕರ ಉತ್ಸಾಹ ಹೆಚ್ಚಿಸಿದ ಸಮೀಕ್ಷೆ!
ಬೆಂಗಳೂರು, ಸೆಪ್ಟೆಂಬರ್ 25; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಮುಗಿದು ಪರಿಪೂರ್ಣ ಬಹುಮತ ಪಡೆದು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. 2024ರ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು? ಸಿಗಲಿದೆ ಎಂಬ ಲೆಕ್ಕಾಚಾರ ನಡೆಯುತ್ತಿದೆ. ಇಂತಹ ಸಮಯದಲ್ಲಿ ಸಮೀಕ್ಷೆಯೊಂದು ಹೊರಬಿದ್ದಿದೆ.
2024ರ ಲೋಕಸಭೆ ಚುನಾವಣೆ ಕುರಿತು Janmatpolls ವಿವಿಧ ರಾಜ್ಯಗಳಲ್ಲಿ ಸಮೀಕ್ಷೆ ನಡೆಸಿದೆ. ಸಮೀಕ್ಷೆಗಳ ಫಲಿತಾಂಶವನ್ನು ಸೋಮವಾರ ಟ್ವೀಟ್ ಮಾಡುತ್ತಿದೆ. ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ.

Janmatpolls ಚುನಾವಣಾ ಪೂರ್ವ ಸಮೀಕ್ಷೆಯ ಫಲಿತಾಂಶ ಕರ್ನಾಟಕದ ಬಿಜೆಪಿ ನಾಯಕರ ಉತ್ಸಾಹ ಇಮ್ಮಡಿಗೊಳಿಸುವಂತೆ ಇದೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡು ಮಂಕಾಗಿರುವ ಬಿಜೆಪಿಗೆ ಸ್ಪೂರ್ತಿ ನೀಡುವಂತೆ ಸಮೀಕ್ಷೆ ವರದಿ ಇದೆ. ಆದರೆ 2019ಕ್ಕೆ ಹೋಲಿಕೆ ಮಾಡಿದರೆ ಸೀಟುಗಳ ಸಂಖ್ಯೆ ಕಡಿಮೆಯಾಗಿದೆ.
ಸಮೀಕ್ಷೆಯ ವರದಿ; ಸೋಮವಾರ Janmatpolls ಟ್ವೀಟ್ ಮಾಡಿರುವ ಪ್ರಕಾರ ಕರ್ನಾಟಕದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 15 ರಿಂದ 17 ಸ್ಥಾನಗಳಲ್ಲಿ ಜಯಗಳಿಸಲಿದೆ. 2019ರಲ್ಲಿ 25 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿತ್ತು. ಅಲ್ಲದೇ ಬಿಜೆಪಿ ಬೆಂಬಲಿತ ಮಂಡ್ಯದ ಪಕ್ಷೇತರ ಅಭ್ಯರ್ಥಿ ಸುಮಲತಾ ಸಹ ಗೆಲವು ಸಾಧಿಸಿದ್ದರು.
ಈ ಸಮೀಕ್ಷೆಯನ್ನು ಯಾವಾಗ ನಡೆಸಲಾಗಿದೆ?. ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್ ಗಳಿಸುವ ಸ್ಥಾನಗಳು ಎಷ್ಟು?, ಜೆಡಿಎಸ್ ಎಷ್ಟು ಸ್ಥಾನದಲ್ಲಿ ಜಯಗಳಿಸಲಿದೆ? ಎಂಬ ವಿವರಗಳನ್ನು ಟ್ವೀಟ್ನಲ್ಲಿ ನೀಡಲಾಗಿಲ್ಲ. ಬಿಜೆಪಿ ಮಾತ್ರ 15-17 ಸ್ಥಾನದಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ಹೇಳಿದೆ.
Loksabha election 2024
— Janmat polls (@Janmatpolls) September 25, 2023
BJP-275-278
Congress-66-68
Bihar
BJP = 15-17
INDIA =22-24
West Bangal
BJP =15-17
INDIA =23-25
Hariyana
BJP 5-6
Congress 4-5
Telangana
BJP =3-4
BRS =5-6
Congress =2-3
Karnataka
BJP =15-17#LoksabhaElection2024
ಒಟ್ಟಾರೆಯಾಗಿ ಸಮೀಕ್ಷೆಗಳ ಪ್ರಕಾರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 275 ರಿಂದ 278 ಮತ್ತು ಕಾಂಗ್ರೆಸ್ ಪಕ್ಷ 66 ರಿಂದ 68 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆಯ ವರದಿ ಹೇಳಿದೆ. 2024ರ ಏಪ್ರಿಲ್ ಅಂತ್ಯ ಅಥವ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ; ಲೋಕಸಭೆ ಚುನಾವಣೆ ಎದುರಿರುವಾಗಲೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಿಕೊಂಡಿದೆ. ಈ ಕುರಿತು ದೆಹಲಿಯಲ್ಲಿ ಶುಕ್ರವಾರ ಅಧಿಕೃತ ಘೋಷಣೆ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ದೆಹಲಿಯಲ್ಲಿ ಭೇಟಿ ಮಾಡಿದ ಬಳಿಕ ಜೆ. ಪಿ. ನಡ್ಡಾ ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. ಜೆಡಿಎಸ್ ಪಕ್ಷವನ್ನು ಎನ್ಡಿಎ ಮೈತ್ರಿಕೂಟಕ್ಕೆ ಸ್ವಾಗತಿಸಿದ್ದರು.
ಎನ್ಡಿಎ ಮೈತ್ರಿಕೂಟ ಸೇರಿರುವ ಜೆಡಿಎಸ್ಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಸ್ಥಾನಗಳನ್ನು ನೀಡಲಿದೆ? ಎಂಬುದು ಇನ್ನೂ ಅಂತಿಮವಾಗಿಲ್ಲ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇನ್ನೂ ಸೀಟು ಹಂಚಿಕೆ ಕುರಿತು ಚರ್ಚೆಯನ್ನು ನಡೆಸಬೇಕಿದೆ. ಜೆಡಿಎಸ್ 5 ಕ್ಷೇತ್ರಕ್ಕಾಗಿ ಬೇಡಿಕೆ ಇಟ್ಟಿದೆ ಎಂಬ ಸುದ್ದಿಗಳಿವೆ.
ಜೆಡಿಎಸ್ ಪಕ್ಷ ಹಾಸನ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ ಕ್ಷೇತ್ರಕ್ಕಾಗಿ ಬೇಡಿಕೆ ಇಟ್ಟಿದೆ ಎಂಬ ಸುದ್ದಿಗಳು ಹಬ್ಬಿವೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದ ಜೆಡಿಎಸ್ ಪಕ್ಷ ಗೆದ್ದಿದ್ದು, ಹಾಸನ (ಪ್ರಜ್ವಲ್ ರೇವಣ್ಣ) ಕ್ಷೇತ್ರದಲ್ಲಿ ಮಾತ್ರ.
2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 25, ಕಾಂಗ್ರೆಸ್ 1, ಜೆಡಿಎಸ್ 1 ಕ್ಷೇತ್ರದಲ್ಲಿ ಗೆದ್ದಿತ್ತು. ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದ್ದರು.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪರಿಪೂರ್ಣ ಬಹುಮತ ಪಡೆದು ಅಧಿಕಾರ ಪಡೆದಿರುವ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನದಲ್ಲಿ ಜಯಗಳಿಸುವ ಉತ್ಸಾಹದಲ್ಲಿದೆ. ಅದರಲ್ಲೂ ಎಐಸಿಸಿ ಅಧ್ಯಕ್ಷರು ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಆಗಿರುವ ಕಾರಣಕ್ಕೆ ರಾಜ್ಯದಲ್ಲಿ ಪಕ್ಷ ಹೆಚ್ಚು ಸ್ಥಾನ ಗೆಲ್ಲಬೇಕಿದೆ.
ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಸಚಿವರ ಜೊತೆ ಲೋಕಸಭೆ ಚುನಾವಣೆಯ ಬಗ್ಗೆ ಸಭೆ ನಡೆಸಿದ್ದಾರೆ. ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ನೀಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಅಕ್ಕಪಕ್ಕದ ಮಹಾರಾಷ್ಟ್ರದಲ್ಲಿ ಇಂಡಿಯಾ ಮೈತ್ರಿಕೂಟ 25-27, ಬಿಜೆಪಿ 15-17 ಸ್ಥಾನಗಳಿಸಲಿದೆ. ತೆಲಂಗಾಣದಲ್ಲಿ ಬಿಜೆಪಿ 3-4, ಬಿಆರ್ಎಸ್ 5-6 ಮತ್ತು ಕಾಂಗ್ರೆಸ್ 2-3 ಸ್ಥಾನದಲ್ಲಿ ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ.












Click it and Unblock the Notifications