ಲೋಕಸಭೆ ಚುನಾವಣೆ 2024 ಮತ ಎಣಿಕೆ: ರಾಜಕೀಯ ಪಕ್ಷಗಳಿಗೆ ಖಡಕ್ ಸೂಚನೆ
ಬೆಂಗಳೂರು, ಜೂನ್ 02: ಲೋಕಸಭಾ ಚುನಾವಣೆ 2024ರ ಮತ ಏಣಿಕೆ ಕಾರ್ಯವು ಜೂನ್ 4ರಂದು ನಡೆಯಲಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಜಿಲ್ಲೆಗಳಲ್ಲಿ ನಡೆಯಲಿದ್ದು, ಜಿಲ್ಲಾಡಳಿತ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿವೆ.
ಈಗಾಗಲೇ ಮತಯಂತ್ರಗಳನ್ನು ಸ್ಟ್ರಾಂಗ್ ರೂಂಗಳಲ್ಲಿ ಇಡಲಾಗಿದೆ. ಮಂಗಳವಾರ ಬೆಳಗ್ಗೆ 7.30ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗುತ್ತದೆ. ಮೊದಲು ಅಂಚೆ ಮತಗಳ ಎಣಿಕೆ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಇವಿಎಂ ಮತಗಳ ಎಣಿಕೆ ಆರಂಭವಾಗಲಿದೆ.

ರಾಜಕೀಯ ಪಕ್ಷಗಳಿಗೆ ಸೂಚನೆಗಳು: ಮತ ಎಣಿಕೆ ಹಿನ್ನಲೆಯಲ್ಲಿ ಮತ ಎಣಿಕೆ ಕೇಂದ್ರದ ಆವರಣದ ಸುತ್ತಮುತ್ತ ಸೆಕ್ಷನ್ 144 ಅನ್ನು ಜಾರಿ ಮಾಡಲಾಗಿದೆ. ಜಿಲ್ಲಾಡಳಿತ ಮದ್ಯ ಮಾರಾಟ ನಿಷೇಧಿಸಿ ಆದೇಶಿಸಿದೆ.
ಮತ ಎಣಿಕೆ ಕುರಿತು ಮಾಹಿತಿ ನೀಡಲು ಮಾಧ್ಯಮ ಕೇಂದ್ರವನ್ನು ಮತ ಎಣಿಕೆ ಕೇಂದ್ರದ ಆವರಣದಲ್ಲಿ ತೆರೆಯಲಾಗಿದೆ. ವಿಧಾನಸಭಾ ಕ್ಷೇತ್ರದ ಮತಗಳ ಎಣಿಕೆ 18 ರಿಂದ21 ಸುತ್ತು ನಡೆಯಲಿದೆ. ಪ್ರತಿಯೊಂದು ಸುತ್ತಿನ ಫಲಿತಾಂಶವನ್ನು ಚುನಾವಣಾ ವೀಕ್ಷಕರ ಸಹಿ ಹಾಕಿದ ನಂತರ ಮಾಧ್ಯಮ ಹಾಗೂ ಮೈಕ್ ಮೂಲಕ ತಿಳಿಸಲಾಗುತ್ತದೆ.
ಜಿಲ್ಲಾ ಚುನಾವಣಾಧಿಕಾರಿಗಳು ಈಗಾಗಲೇ ಮತ ಎಣಿಕೆ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ಸಭೆಯನ್ನು ನಡೆಸಿದ್ದಾರೆ. ತಮ್ಮ ಚುನಾವಣಾ ಏಜೆಂಟರು, ಮತ ಏಣಿಕಾ ಏಜೆಂಟರುಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪಕ್ಷಗಳಿಗೆ ಸೂಚನೆ ನೀಡಲಾಗಿದೆ.
ಮತ ಏಣಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು, ಚುನಾವಣಾ ಏಜೆಂಟರು, ಮತ ಏಣಿಕೆ ಏಜೆಂಟರಿಗೆ ವಾಹನ ನಿಲುಗಡೆಗೆ, ಉಪಹಾರಕ್ಕೆ ನಿಗದಿತ ಸ್ಥಳ ಗುರುತಿಸಿ, ಸಿದ್ದತೆ ಮಾಡಲಾಗಿದೆ. ಅಂದು ಮತ ಏಣಿಕಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ 144ಕಲಂ ಅಡಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅನಗತ್ಯ ಓಡಾಟ, ಗುಂಪು ಸೇರುವುದು ಮಾಡುವಂತಿಲ್ಲ.
ಮತ ಏಣಿಕಾ ಕೇಂದ್ರದೊಳಗೆ ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತು ತರಲು ಅವಕಾಶವಿಲ್ಲ. ಯಾವುದೇ ರೀತಿಯ ಆಯುಧ, ಗುಟ್ಕಾ, ಬೀಡಿ, ಸಿಗರೇಟ್, ಎಲೆ ಅಡಿಕೆ ತರುವುದನ್ನು ಸಹ ನಿರ್ಬಂಧಿಸಲಾಗಿದೆ.
ಚುನಾವಣಾ ಆಯೋಗದ ಎಲ್ಲ ನಿಯಮಗಳನ್ನು ಪಾಲಿಸುವ ಮೂಲಕ ಮತ ಏಣಿಕೆ ಕಾರ್ಯ ನಿಯಮಾನುಸಾರ, ಸುಗಮವಾಗಿ ನಡೆಯಲು ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಸಹಕಾರ ನೀಡಬೇಕೆಂದು ಮನವಿ ಮಾಡಲಾಗಿದೆ.
ಜೂನ್ 4 ರಂದು ಬೆಳಗ್ಗೆ ಸ್ಟ್ರಾಂಗ್ ರೂಂ ತೆರೆಯುವುದರಿಂದ ಹಿಡಿದು ಸಂಜೆ ಇವಿಎಂ ಮಷಿನ್ಗಳು ಭದ್ರತಾ ಕೊಠಡಿಗೆ ಹೋಗುವವರೆಗಿನ ಎಲ್ಲ ಹಂತಗಳ ಕುರಿತು ಪಕ್ಷದ ಅಭ್ಯರ್ಥಿಗಳಿಗೆ ಮಾಹಿತಿ ನೀಡಲಾಗಿದೆ. ಮತ ಏಣಿಕೆ ಪ್ರಕ್ರಿಯೆ, ಹಂತಗಳ ಕುರಿತು ಅಭ್ಯರ್ಥಿಗಳಿಗೆ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿವರಿಸಲಾಗಿದೆ.
ಬೆಂಗಳೂರು ನಗರದಲ್ಲಿ ಮತ ಎಣಿಕೆ: ಬೆಂಗಳೂರು ನಗರದಲ್ಲಿ ಬಿಬಿಎಂಪಿ ವ್ಯಾಪ್ತಿಗೆ 3 ಲೋಕಸಭಾ ಕ್ಷೇತ್ರಗಳು ಒಳಪಡುತ್ತವೆ. ಏಪ್ರಿಲ್ 26ರಂದು ಬೆಂಗಳೂರು ಸೆಂಟ್ರಲ್, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮತದಾನ ನಡೆದಿತ್ತು. ಜೂನ್ 4ರಂದು ಮತ ಎಣಿಕೆ ನಡೆಯಲಿದೆ.
ನಗರದ ಮೌಂಟ್ ಕಾರ್ಮೆಲ್ ಕಾಲೇಜು, ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮತ್ತು ಎಸ್ಎಂಆರ್ವಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಕೇಂದ್ರದ ಸುತ್ತ ಈಗಾಗಲೇ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮತ ಎಣಿಕೆ ದಿನ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಈಗಾಗಲೇ ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುವ ದಿನ ಮತ ಎಣಿಕೆ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. 5 ಮಂದಿಗಿಂತ ಹೆಚ್ಚು ಜನರು ಒಂದೆಡೆ ಸೇರುವಂತಿಲ್ಲ. ಸಮಾರಂಭ ಮಾಡುವಂತಿಲ್ಲ. ನಿಷೇಧಾಜ್ಞೆ ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.












Click it and Unblock the Notifications