ಬಿಜೆಪಿ ಅಭ್ಯರ್ಥಿ ಡಾ|| ಕೆ. ಸುಧಾಕರ್ ಪರವಾಗಿ ನಿಂತ ಮುಖಂಡರು!
ದೇಶದ ಗಮನ ಸೆಳೆದಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ. ಎಲ್ಲೆಡೆ, ಬಿಜೆಪಿ & ಜೆಡಿಎಸ್ ನಡುವೆ ಒಗ್ಗಟ್ಟು ಕಂಡುಬಂದಿದೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಇದೀಗ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ. ಕೆ. ಸುಧಾಕರ್ ಅವರ ಗೆಲುವಿಗೆ ಸ್ಥಳೀಯ ಮುಖಂಡರು ಪಣತೊಟ್ಟಿದ್ದಾರೆ.
ಬಾಗೇಪಲ್ಲಿಯ ಹಿರಿಯ ಮುಖಂಡರಾದ, ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು, ಗೌರಿಬಿದನೂರಿನ ಮುಖಂಡ, ದ್ರಾಕ್ಷಿ & ವೈನ್ ಮಂಡಳಿ ಮಾಜಿ ಅಧ್ಯಕ್ಷ ರವಿನಾರಾಯಣ ರೆಡ್ಡಿ ಹಾಗೂ ಜೆಡಿಎಸ್ ಹಿರಿಯ ಮುಖಂಡ ಸಿ.ಆರ್.ನರಸಿಂಹಮೂರ್ತಿ, 2023ರ ಚುನಾವಣೆಯಲ್ಲಿ ಗೌರಿಬಿದನೂರು ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿದ್ದ ಡಾ.ಶಶಿಧರ್ ಅವರನ್ನು ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಭೇಟಿ ಮಾಡಿದ್ದಾರೆ. ಮುಖಂಡರು & ಕಾರ್ಯಕರ್ತರು ಸಂಪೂರ್ಣ ಬೆಂಬಲ ನೀಡಿ ಗೆಲುವಿಗೆ ಶ್ರಮಿಸುವುದಾಗಿ ಇದೇ ವೇಳೆ ತಿಳಿಸಿದ್ದಾರೆ.

ಬಿಜೆಪಿ & ಜೆಡಿಎಸ್ ಒಗ್ಗಟ್ಟಿನ ಮಂತ್ರ
ಇನ್ನು ಈ ವೇಳೆ ರಾಷ್ಟ್ರಮಟ್ಟದಲ್ಲಿ ಸುಭದ್ರ, ಜನಪರ ಸರ್ಕಾರ ಬೇಕು ಎನ್ನುವ ದೃಷ್ಟಿಯಿಂದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಈಗ ಕೈ ಜೋಡಿಸಿದ್ದು. ಮಾಜಿ ಸಿಎಂ ಕುಮಾರಸ್ವಾಮಿ ಅವರು ನೀಡಿರುವ ಕರೆಯಂತೆ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಎಲ್ಲ ಜೆಡಿಎಸ್ ಮುಖಂಡರು & ಕಾರ್ಯಕರ್ತರು ಒಗ್ಗಟ್ಟಿನಿಂದ ಎನ್ಡಿಎ ಮೈತ್ರಿಕೂಟದ ಗೆಲುವಿಗೆ ಶ್ರಮಿಸುತ್ತೇವೆ ಎಂದು ಇದೇ ಸಭೆಯಲ್ಲಿ ಭರವಸೆ ನೀಡಿದರು.
ಸ್ಥಳೀಯ ಮುಖಂಡರ ಭರವಸೆ ಏನು?
ನರೇಂದ್ರ ಮೋದಿ ಅವರನ್ನು 3ನೇ ಬಾರಿಗೆ ಪ್ರಧಾನಿ ಮಾಡೋದಕ್ಕೆ ಹಾಗೂ ಬಯಲುಸೀಮೆಯ ಅಭಿವೃದ್ಧಿಗಾಗಿ ಬಿಜೆಪಿ ಮತ್ತು ಜೆಡಿಎಸ್ನ ಕಾರ್ಯಕರ್ತರು ಹಾಗೂ ಮುಖಂಡರ ಜೊತೆಯಲ್ಲಿ ಶ್ರಮಿಸಲಾಗುವುದು. ಈ ಮೂಲಕ ವಿಕಸಿತ ಚಿಕ್ಕಬಳ್ಳಾಪುರ ನಿರ್ಮಿಸಲಾಗುವುದು. ಈ ಬಾರಿ, ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನ ಗೆಲ್ಲಿಸುವುದು ಮಾತ್ರವಲ್ಲ, ಅತ್ಯಧಿಕ ಮತ ಅಂತರ ಪಡೆಯಲು ಶ್ರಮಿಸುವುದಾಗಿ ಎರಡೂ ಪಕ್ಷಗಳ ಮುಖಂಡರು ಡಾ. ಕೆ. ಸುಧಾಕರ್ ಅವರಿಗೆ ಈ ಸಮಯದಲ್ಲಿ ಭರವಸೆ ನೀಡಿದರು.

ಡಾ. ಸುಧಾಕರ್ ಅವರ ಮಾತು
ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮಾಜಿ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್, ಏಪ್ರಿಲ್ 4 ರಂದು ಬಿಜೆಪಿ ಮತ್ತು ಜೆಡಿಎಸ್ನ ಎಲ್ಲ ಹಿರಿಯ ನಾಯಕರು, ಮಾಜಿ ಸಚಿವರು, ಶಾಸಕರು, ಮುಖಂಡರು & ಕಾರ್ಯಕರ್ತರ ಜೊತೆಗೆ ಚುನಾವಣಾ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ. ಈ ವೇಳೆ ರೋಡ್ ಶೋ ನಡೆಯಲಿದ್ದು, ಈ ರೋಡ್ ಶೋಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು, ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ, ಜಿಲ್ಲೆಯ ಎಲ್ಲಾ ಬಿಜೆಪಿ ಶಾಸಕರು, ಮಾಜಿ ಶಾಸಕರು ಸೇರಿ ಎಲ್ಲ ಹಿರಿಯ ನಾಯಕರನ್ನ ಆಹ್ವಾನಿಸುತ್ತೇನೆ ಎಂದು ಮಾಹಿತಿ ನೀಡಿದರು.












Click it and Unblock the Notifications