ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಶಾಶ್ವತ ನೀರಾವರಿ ಯೋಜನೆ: ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್!
ಗೌರಿಬಿದನೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ. ಕೆ. ಸುಧಾಕರ್ ಅವರು ಈಗ ಭರ್ಜರಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿರುವ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದನಾದ ಬಳಿಕ ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆ ನೀಡುತ್ತೇನೆ. ಹಾಗೆಯೇ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತರುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರು ಭರವಸೆ ನೀಡಿದ್ದಾರೆ.
ಗೌರಿಬಿದನೂರು, ಬಾಗೇಪಲ್ಲಿಯಲ್ಲಿ ಹಿರಿಯ ಮುಂಖಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಈ ವೇಳೆ ಚುನಾವಣಾ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್ ಅವರು ಕೂಡ ಭಾಗವಹಿಸಿದ್ದರು. ನಾನು ಕೊಟ್ಟ ಮಾತು, ಇಟ್ಟ ಹೆಜ್ಜೆ ಎಂದಿಗೂ ಸುಳ್ಳಾಗದು.

ನನ್ನ ಕರ್ಮಭೂಮಿ ಇದೇ ಆಗಿರುವುದರಿಂದ ಇಲ್ಲಿನ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಸಂಸದನಾದ ಬಳಿಕ ಬಯಲುಸೀಮೆ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆ ತರುತ್ತೇನೆ. ಹಿಂದೆ ಸಂಸದರಾಗಿದ್ದ ವೀರಪ್ಪ ಮೊಯ್ಲಿ ನೀರು ತರುತ್ತೇನೆ ಎಂದು, ಹದಿನೈದು ವರ್ಷ ಹೇಳಿದ್ದರು. ಹಿಂದಿನ, ಬಿಜೆಪಿ ಸರ್ಕಾರ ಎತ್ತಿನಹೊಳೆ ಯೋಜನೆಗೆ 4 ಸಾವಿರ ಕೋಟಿ ರೂ. ನೀಡಿತ್ತು ಎಂದು ಡಾ. ಸುಧಾಕರ್ ಅವರು ಇದೇ ವೇಳೆ ಸ್ಮರಿಸಿದರು.
4,000 ರೂ. ನೀಡಿದ್ದ ಬಿಜೆಪಿ!
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಡವರಿಗೆ ಕೊಡುವ ಸರ್ಕಾರವಾಗಿದ್ದರೆ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುವ ಸರ್ಕಾರವಾಗಿದೆ. ಕಿಸಾನ್ ಸಮ್ಮಾನ್ ಅಡಿ, ಬಿಜೆಪಿ ಸರ್ಕಾರ ರೈತರಿಗೆ 4,000 ರೂ. ನೀಡುತ್ತಿದ್ದರೆ, ಅದನ್ನು ಕಾಂಗ್ರೆಸ್ ಕಿತ್ತುಕೊಂಡಿದೆ. ಬಿಜೆಪಿ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನ ಕೂಡ ರಾಜ್ಯ ಕಾಂಗ್ರೆಸ್ ಕಿತ್ತುಕೊಂಡಿದೆ ಎಂದು ಇದೇ ವೇಳೆ ಆರೋಪ ಮಾಡಿದರು.

ಹಾಲು ಒಕ್ಕೂಟ ತರುವ ಭರವಸೆ
ಚಿಕ್ಕಬಳ್ಳಾಪುರ ಹಾಲು ಒಕ್ಕೂಟ 5 ಲಕ್ಷ ಲೀಟರ್ ಹಾಲು ಉತ್ಪಾದಿಸುತ್ತಿದೆ. ಹೀಗಾಗಿಯೆ ಪ್ರತ್ಯೇಕ ಒಕ್ಕೂಟ ತರಲಾಯಿತು. ಆದ್ರೆ ಅದನ್ನು ರದ್ದು ಮಾಡಿದ ಕಾಂಗ್ರೆಸ್ ಸರ್ಕಾರ ಮತ್ತೆ ಕೋಲಾರಕ್ಕೆ ಒಕ್ಕೂಟ ನೀಡಿ ರೈತರ ಸ್ವಾಭಿಮಾನವನ್ನೇ ಕಿತ್ತುಕೊಂಡಿದೆ. ನಾನು, ವೈದ್ಯಕೀಯ ಕಾಲೇಜಿಗಾಗಿ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದೆ. ಈ ರೀತಿ ಹಾಲು ಒಕ್ಕೂಟವನ್ನ ಕೂಡ ಮರಳಿ ತರುತ್ತೇನೆ. ಇದನ್ನ ಕಿತ್ತುಕೊಳ್ಳಲು ಈಗಿನ ಚಿಕ್ಕಬಳ್ಳಾಪುರದ ಶಾಸಕರಿಂದ ಸಾಧ್ಯವಿಲ್ಲ. ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಅದೇ ರೀತಿ ಹಾಲು ಒಕ್ಕೂಟವನ್ನು ಮರಳಿ ತರುವುದು ಕೂಡ ಸತ್ಯ ಎಂದು ಇದೇ ವೇಳೆ ಭರವಸೆ ನೀಡಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ
ಪ್ರಧಾನಿ ಮೋದಿ ಉಜ್ವಲ ಯೋಜನೆ ಮೂಲಕವಾಗಿ 10 ಕೋಟಿ ಮಹಿಳೆಯರ ಆರೋಗ್ಯ ರಕ್ಷಣೆ ಮಾಡಿ ಅನಿಲ ಸಿಲಿಂಡರ್ ನೀಡಿದ್ದಾರೆ ಅವರ ಗೌರವ ಉಳಿಸಲು ಶೌಚಾಲಯನೂ ನೀಡಿದ್ದಾರೆ. ಕಟ್ಟಕಡೆ ವ್ಯಕ್ತಿಗೆ ಏನು ಬೇಕೆಂದು ಅರಿತು ಯೋಜನೆ ನೀಡಿದ್ದಾರೆ ಎಂದರು ಡಾ. ಸುಧಾಕರ್ ಅವರು. ದೇಶದ ಭವಿಷ್ಯ ರೂಪಿಸುವ, ಮಕ್ಕಳ ಬದುಕನ್ನು ಬಂಗಾರ ಮಾಡುವ, ಮಹಿಳಾ ಸಬಲೀಕರಣ ಮಾಡುವ ಗ್ಯಾರಂಟಿಯೇ ಮೋದಿ ಗ್ಯಾರಂಟಿ. ತಾತ್ಕಾಲಿಕ ಅನುಕೂಲಕ್ಕೋಸ್ಕರ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ. ಕಾಂಗ್ರೆಸ್ ಸರ್ಕಾರ ಒಂದೂವರೆ ಲಕ್ಷ ಕೋಟಿ ರೂ. ಸಾಲ ಮಾಡಿದೆ. ಇಂತಹ ಪಕ್ಷ ರಾಜ್ಯಕ್ಕೆ ಬೇಡ ಎಂದು ಡಾ. ಕೆ. ಸುಧಾಕರ್ ಹೇಳಿದ್ದಾರೆ.












Click it and Unblock the Notifications