ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ & ನೆಲಮಂಗಲ ಹೊಸ ಉಪನಗರ: ಡಾ. ಕೆ. ಸುಧಾಕರ್ ಭರವಸೆ!
ಲೋಕಸಭೆ ಚುನಾವಣೆಗೆ ಭರ್ಜರಿ ರಣಕಹಳೆ ಇದೀಗ ಮೊಳಗಿದ್ದು, ಡಾ. ಕೆ. ಸುಧಾಕರ್ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಕ್ಷೇತ್ರದಲ್ಲಿ ಇದೀಗ ಭರ್ಜರಿ ಪ್ರಚಾರ ನಡೆಸುತ್ತಿರುವ ಡಾ. ಕೆ. ಸುಧಾಕರ್ ಅವರು, ಸ್ಥಳೀಯ ಪ್ರದೇಶಗಳ ಅಭಿವೃದ್ಧಿ ಬಗ್ಗೆ ಈ ಸಮಯದಲ್ಲಿ ಮಾತನಾಡಿದ್ದಾರೆ. ಹಾಗೇ ಹೊಸ ಉಪನಗರಗಳ ರಚನೆ ಬಗ್ಗೆ ಮಾಹಿತಿ ನೀಡಿದ್ದು ಭಾರಿ ಗಮನ ಸೆಳೆದಿದೆ.
ಈಗ ಡಾ. ಕೆ. ಸುಧಾಕರ್ ಅವರು ಹೇಳಿರುವಂತೆ, ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ ಮತ್ತು ನೆಲಮಂಗಲವನ್ನು ಬೆಂಗಳೂರಿಗೆ ಉಪನಗರವಾಗಿ ಬೆಳೆಸುವ ಗುರಿ ನನ್ನದಾಗಿದೆ ಎಂದಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಈ ಕಾರಣಕ್ಕೇ ಈ ಬಾರಿಯೂ ನರೇಂದ್ರ ಮೋದಿ ಅವರನ್ನ ಪ್ರಧಾನಿ ಮಾಡಬೇಕಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರು ಇದೀಗ ಮನವಿ ಮಾಡಿದ್ದಾರೆ.

ಬೆಂಗಳೂರಿನ ಪಕ್ಕದಲ್ಲೇ ಉಪನಗರ ಅಭಿವೃದ್ಧಿ
ಬಿಜೆಪಿ ಮುಖಂಡರು, ಕಾರ್ಯಕರ್ತರ ಜೊತೆ ಸಭೆಯಲ್ಲಿ ಮಾತನಾಡಿದ ಡಾ. ಸುಧಾಕರ್ ಅವರು, ದೆಹಲಿಗೆ ಪರ್ಯಾಯವಾಗಿ ನೋಯ್ಡಾ ಇರುವಂತೆ ಬೆಂಗಳೂರಿಗೆ ಪರ್ಯಾಯವಾಗಿ ದೇವನಹಳ್ಳಿಯ ಬೆಳೆಸುವ ಗುರಿ ನನ್ನದು. ಹಾಗೆಯೇ ಹೊಸಕೋಟೆ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲವನ್ನು ಉಪನಗರಗಳಾಗಿ ಅಭಿವೃದ್ಧಿ ಮಾಡುತ್ತೇವೆ. ನನ್ನ ಆಯ್ಕೆ ಮಾಡಿದರೆ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಸಹಾಯ ಆಗುತ್ತದೆ. ಕಾಂಗ್ರೆಸ್ಗೆ ಮತ ಹಾಕಿದರೆ, ಚಿಕ್ಕಬಳ್ಳಾಪುರ ಕ್ಷೇತ್ರ ಅಭಿವೃದ್ಧಿ ಸಾಧ್ಯ ಆಗುವುದಿಲ್ಲ ಎಂದು ಇದೇ ವೇಳೆ ಹೇಳಿದರು. ಈ ಮೂಲಕ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ನಿಂದ ಅಭಿವೃದ್ಧಿ ಅಸಾಧ್ಯ!
ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೇ ರಸ್ತೆ, ಸೇತುವೆ ನಿರ್ಮಿಸಿಲ್ಲ ಅಭಿವೃದ್ಧಿ ನಡೆಯುತ್ತಿಲ್ಲ ಇದನ್ನ ಜನರಿಗೆ ತಿಳಿಸಬೇಕಿದೆ. ಜೆಡಿಎಸ್ ಜೊತೆ ಸಮನ್ವಯ ತಂಡ ರಚಿಸಿ ಪ್ರತಿ ಹಂತದಲ್ಲೂ ತಂಡಗಳನ್ನು ಒಗ್ಗೂಡಿಸಿ ಕೆಲಸ ಮಾಡಬೇಕು. ಬಿಜೆಪಿ ಮತ್ತು ಜೆಡಿಎಸ್ ಒಳಗೊಂಡ ಬೃಹತ್ ಪ್ರಚಾರ ಸಭೆಯನ್ನು ನಡೆಸಬೇಕಿದೆ ಎಂದು ತಿಳಿಸಿದರು. ನರೇಂದ್ರ ಮೋದಿಯವರನ್ನ ಮತ್ತೆ ಪ್ರಧಾನಿಯಾಗಿಸಲು ಜನರು ಉತ್ಸುಕರಾಗಿದ್ದಾರೆ. 500 ವರ್ಷಗಳಿಂದ ರಾಮ ಮಂದಿರ ಕೇವಲ ಕನಸಾಗಿತ್ತು ಆದರೆ ಇದು ಬಿಜೆಪಿಗೆ ಕೇವಲ ರಾಜಕೀಯ ಲಾಭ ನಷ್ಟ ವಿಚಾರವಲ್ಲ ಎಂಬುದು ಮಂದಿರ ಲೋಕಾರ್ಪಣೆ ಮಾಡಿದ ಬಳಿಕ ಸಾಬೀತಾಗಿದೆ ಎಂದರು. ಈ ಮೂಲಕ ಇಡೀ ದೇಶ ಬಿಜೆಪಿ ಪಕ್ಷ ಮತ್ತು ಪ್ರಧಾನಿ ಮೋದಿಯವರ ಕೆಲಸವನ್ನು ಬೆಂಬಲಿಸುತ್ತಿದೆ ಎಂದಿದ್ದಾರೆ ಡಾ. ಕೆ. ಸುಧಾಕರ್ ಅವರು.

ಒಗ್ಗಟ್ಟಿನಿಂದ ನಾವು ಕೆಲಸ ಮಾಡುತ್ತೇವೆ
ಬಿಜೆಪಿ ಪಕ್ಷದಲ್ಲಿ ಅಭ್ಯರ್ಥಿಯನ್ನು ಆರಿಸುವಾಗ ಒಂದೇ ಬಾರಿ ತೀರ್ಮಾನ ಮಾಡಲಾಗುತ್ತೆ. ಹಿರಿಯ ನಾಯಕರಾದ ಶಾಸಕ ಎಸ್.ಆರ್. ವಿಶ್ವನಾಥ್ ಅವರಿಗೆ ಸ್ವಾಭಾವಿಕವಾಗಿ ಬೇಸರವಾಗಿದೆ. ಆದರೂ ಅದನ್ನು ಮೀರಿ ಅವರು ಪಕ್ಷದ ಕಟ್ಟಾಳಾಗಿ ಕೆಲಸ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ. ಅವರನ್ನೂ ಇದೀಗ ಭೇಟಿಯಾಗಿ ಚರ್ಚಿಸುತ್ತೇನೆ. ಎಲ್ಲರೂ ಒಂದಾಗಿ ಕೆಲಸ ಮಾಡಲಿದ್ದೇವೆ ಎಂದು ಇದೇ ವೇಳೆ ಡಾ. ಕೆ. ಸುಧಾಕರ್ ಅವರು ಭರವಸೆ ನೀಡಿದರು.












Click it and Unblock the Notifications