ಲೋಕಸಭೆ ಚುನಾವಣೆ: ಅಂತರರಾಜ್ಯ ಚೆಕ್‌ಪೋಸ್ಟ್‌ಗಳಲ್ಲಿ ಕಣ್ಗಾವಲು

ಬೆಂಗಳೂರು, ಮಾರ್ಚ್ 25: ಕೇಂದ್ರ ಚುನಾವಣಾ ಆಯೋಗ ಲೋಕಸಭೆ ಚುನಾವಣೆ 2024 ವೇಳಾಪಟ್ಟಿ ಘೋಷಣೆ ಮಾಡಿದೆ. ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆಬಂದಿದೆ. ಕರ್ನಾಟಕದ 28 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಲೋಕಸಭೆ ಚುನಾವಣೆ 2024ರ ಸಂಬಂಧ ತಮ್ಮ ಕಚೇರಿಯಿಂದ ಎಲ್ಲಾ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದರು.

Lok Sabha Election 2024 Election Commission Eye On Inter State Check Post

"ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಚುನಾವಣೆ ಪ್ರಕ್ರಿಯೆಯಲ್ಲಿ ಕಾನೂನು ಹಾಗೂ ನೀತಿ ಸಂಹಿತೆ ಯಾವುದೇ ಕಾರಣಕ್ಕೂ ಉಲ್ಲಂಘನೆಯಾಗಬಾರದು. ಪ್ರತಿಯೊಬ್ಬರೂ ಜಾಗ್ರತೆ ವಹಿಸಬೇಕು" ಎಂದು ಸೂಚನೆ ನೀಡಿದರು.

ಚೆಕ್‌ಪೋಸ್ಟ್‌ಗಳ ಮೇಲೆ ನಿಗಾ: ಮನೋಜ್ ಕುಮಾರ್ ಮೀನಾ ಅವರು, "ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲೆ ಗಡಿಭಾಗ ಹೊಂದಿರುವಂತಹ ಜಿಲ್ಲೆಯ ಚೆಕ್‌ಪೋಸ್ಟ್‌ಗಳಲ್ಲಿ ಹದ್ದಿನ ಕಣ್ಣಿನಂತೆ ನಿಗಾವಹಿಸಬೇಕು. ಅಕ್ರಮ ಮದ್ಯ, ಅನಧಿಕೃತವಾಗಿ ಸಾಗಿಸುವ ಹಣ, ಬೆಲೆಬಾಳುವ ವಸ್ತುಗಳನ್ನು ಜಪ್ತಿ ಮಾಡಬೇಕು. ನಿಗದಿತ ನಮೂನೆಯಲ್ಲಿ ವರದಿ ಸಲ್ಲಿಸಬೇಕು" ಎಂದು ಜಿಲ್ಲೆಯ ಚುನಾವಣಾಧಿಕಾರಿಗಳಿಗೆ ಸೂಚಿಸಿದರು.

"ಚೆಕ್‌ಪೋಸ್ಟ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಸಮರ್ಪಕ ವಿದ್ಯುತ್ ವ್ಯವಸ್ಥೆ ಹಾಗೂ ಮೂಲ ಸೌಲಭ್ಯ ಒದಗಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ವಾಹನ ತಪಾಸಣೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಯಾಗದಂತೆ ನಿಗಾವಹಿಸಬೇಕು" ಎಂದು ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

"ಫ್ಲೈಯಿಂಗ್ ಸ್ಕ್ವಾಡ್‍ಗಳು, ವೀಡಿಯೋ ಸರ್ವೆಲನ್ಸ್, ವೀಡಿಯೋ ವ್ಯೂವಿಂಗ್ ತಂಡಗಳು, ಸ್ಟ್ಯಾಟಿಕ್ ಸರ್ವೆಲನ್ಸ್ ತಂಡಗಳ ವಾಹನಗಳಲ್ಲಿ ಜಿಪಿಎಸ್ ಟ್ರ್ಯಾಕಿಂಗ್ ಅಳವಡಿಸಿರುವ ವಾಹನಗಳನ್ನು ಬಳಸಬೇಕು. ಕಂಟ್ರೋಲ್ ರೂಂಗಳ ಕಡೆಗೂ ಗಮನ ಹರಿಸಬೇಕು. ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಕೇಂದ್ರದಿಂದ ಭದ್ರತಾ ಪಡೆಗಳ ನಿಯೋಜನೆ ಮಾಡಲಾಗುತ್ತದೆ. ಅವರಿಗೆ ಎಲ್ಲಾ ತರಹದ ವ್ಯವಸ್ಥೆಯನ್ನು ಮಾಡಬೇಕು" ಎಂದರು.

"ಈಗಾಗಲೇ ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಯಾಗಿದ್ದು, ಚುನಾವಣೆಗೆ ತೊಂದರೆ ಉಂಟು ಮಾಡುವ ಅಥವಾ ಅಹಿತಕರ ಘಟನೆ ಸೃಷ್ಟಿಸುವಂತಹ ರೌಡಿ ಶೀಟರ್, ಸಮಾಜ ವಿದ್ರೋಹಿಗಳ ಮೇಲೆ ನಿಗಾ ವಹಿಸಬೇಕು" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದರು.

"ಮುಕ್ತ ಹಾಗೂ ಶಾಂತಿಯುತ ಚುನಾವಣೆ ನಡೆಸಲು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಹೊಂದಿರುವ ಪರವಾನಿಗೆದಾರರಿಂದ ಚುನಾವಣೆ ಮುಗಿಯುವವರೆಗೂ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡುವಂತೆ ಸೂಚಿಸಬೇಕು" ಎಂದು ತಿಳಿಸಿದರು.

"ಚುನಾವಣಾ ಅಕ್ರಮ ತಡೆಯಲು ಜನರ ಸಹಕಾರ ಸಹ ಮುಖ್ಯ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವುದನ್ನು ತಡೆಯಲು, ಚುನಾವಣಾ ಅಕ್ರಮ ಮತ್ತು ಮತದಾರನನ್ನು ಆಸೆ ಆಮಿಷಗಳಿಗೆ ಒಳಪಡಿಸುವುದನ್ನು ತಡೆಯಲು ನೇರವಾಗಿ ಸಾರ್ವಜನಿಕರು ಫೋಟೋ ಮತ್ತು ವಿಡಿಯೋ ಸೆರೆಹಿಡಿದು ದೂರು ನೀಡಲು ಚುನಾವಣಾ ಆಯೋಗವು ರೂಪಿಸಿರುವ ಸಿ-ವಿಜಿಲ್ ಅಪ್ ಬಗ್ಗೆ ಹೆಚ್ಚು ಅರಿವು ಮೂಡಿಸುವ ಕೆಲಸವಾಗಬೇಕು" ಎಂದರು.

"ಚುನಾವಣಾ ಅಕ್ರಮಗಳ ಕುರಿತು ಸಾರ್ವಜನಿಕರು ಸಿ-ವಿಜಿಲ್ ಆಪ್ ಮೂಲಕ ಯಾವುದೇ ರೀತಿಯ ಚುನಾವಣಾ ಅವ್ಯವಹಾರಗಳನ್ನು ವರದಿ ಮಾಡಬಹುದು. ಇದು ಗೌಪ್ಯವಾಗಿರಲಿದೆ. ಜನರು ನೀಡುವ ಪ್ರತಿ ದೂರಿಗೂ 100 ನಿಮಿಷಗಳ ಒಳಗೆ ಕ್ರಮ ಕೈಗೊಳ್ಳಬೇಕು" ಎಂದು ಸೂಚನೆ ನೀಡಿದರು.

"ಮತದಾನ ನಡೆಯುವ ಮತಗಟ್ಟೆ ಕೇಂದ್ರಗಳ ಪರಿಶೀಲನೆ ನಡೆಸಬೇಕು. ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಕ್ರಮ ವಹಿಸಬೇಕು. ಅತಿಹೆಚ್ಚು ಮತದಾರರನ್ನು ಹೊಂದಿರುವ ಭಾಗದಲ್ಲಿ ಮತಗಟ್ಟೆ ಕೇಂದ್ರಗಳಲ್ಲಿ ಅವಶ್ಯಕತೆ ಇದ್ದಲ್ಲಿ ಸ್ಥಳೀಯ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಪ್ರಸ್ತಾವನೆ ಪಡೆದುಕೊಳ್ಳಬೇಕು" ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+