ಹಿಂದೂಗಳ ಹಬ್ಬಗಳ ಮೇಲೆಯೇ ಕಾಂಗ್ರೆಸ್ ಕಾಮಾಲೆ ಕಣ್ಣು : ದಾಳಿ ಕುರಿತು ಜೆಡಿಎಸ್ ವಾಗ್ದಾಳಿ
ಬೆಂಗಳೂರು,ಏಪ್ರಿಲ್ 10: ಹೆಚ್ಡಿ ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದಕ್ಕೆ ಜೆಡಿಎಸ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಯುಗಾದಿ ಹೊಸತೊಡಕು ಸಂಭ್ರಮಕ್ಕೆ ಅಡ್ಡಿ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವು ಹಿಂದೂ ಸಂಸ್ಕೃತಿಯ ಮೇಲೆ ತನ್ನ ಕಾಕದೃಷ್ಟಿ ಬೀರಿದೆ ಎಂದು ಜಾತ್ಯತೀತ ಜನತಾದಳ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಜೆಡಿಎಸ್, ಹಿಂದೂಗಳ ಹಬ್ಬಗಳ ಮೇಲೆಯೇ ಕಾಂಗ್ರೆಸ್ಗೆ ಕಾಮಾಲೆ ಕಣ್ಣು ಎಂದು ಕಿಡಿ ಕಾರಿದೆ. ಯುಗಾದಿ ಹಿಂದೂಗಳ ಹೊಸವರ್ಷ. ಯುಗಾದಿ ಹಿಂದೂಗಳ ಸಾಂಸ್ಕೃತಿಕ ಮತ್ತು ಧಾರ್ಮಿಕ ಅಸ್ಮಿತೆ. ಈ ಹಬ್ಬದ ಮರುದಿನದ ಸಂಭ್ರಮ ಹೊಸತೊಡಕು ಆಚರಣೆ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಕಾಂಗ್ರೆಸ್ ಪಕ್ಷ ನಮ್ಮ ಸಂಪ್ರದಾಯ, ಸಂಸ್ಕೃತಿ, ಆಚರಣೆಯ ಮೇಲೆಯೂ ಕಾಕದೃಷ್ಟಿ ಬೀರಿದೆ. ಬಾಡೂಟವನ್ನು ಭಯೋತ್ಪಾದನೆಯಂತೆ ವೈಭವೀಕರಿಸುತ್ತಿದೆ ಎಂದು ಕಿಡಿಕಾರಿದೆ.

ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ನಡೆಯುವಂತೆ ಕುಮಾರಸ್ವಾಮಿ ಅವರ ಮನೆಯಲ್ಲಿಯೂ ಹೊಸತೊಡಕು ಆಚರಣೆ ನಡೆಯುತ್ತಿದೆ. ಅದರಲ್ಲಿ ವಿಶೇಷವೇನೂ ಇಲ್ಲ. ಹೊಸತೊಡಕು ಊಟಕ್ಕೆ ಸಂಬಂಧಿಕರು, ಸ್ನೇಹಿತರು ಹಾಗೂ ರಾಜಕೀಯ ಸಹಪಾಠಿಗಳನ್ನು ಅವರು ಆಹ್ವಾನಿಸಿದ್ದಾರೆ. ಮಾಂಸದ ಅಡುಗೆ ಈ ದಿನದ ಸಾಮಾನ್ಯ ತಿನಿಸು. ಈ ಊಟಕ್ಕೂ ಕಾಂಗ್ರೆಸ್ ಕಲ್ಲು ಹಾಕಿ ವಿಕೃತಿ ಮೆರೆದಿದೆ ಎಂದು ಜೆಡಿಎಸ್ ಆರೋಪಿಸಿದೆ.
ಮತಕ್ಕಾಗಿ ಹಣ, ಹೆಂಡ, ಸೀರೆ, ಕುಕ್ಕರ್, ಪ್ರಿಜ್ಡ್, ಕೂಪನ್ ಹಂಚುವ ಸತ್ಸಂಪ್ರದಾಯ ಹೊಂದಿರುವ ಕಾಂಗ್ರೆಸ್ಸಿಗೆ, ಕಾವೇರಿ ಹೆಸರಿನಲ್ಲಿ ನಡೆಸಿದ ಮೇಕೆದಾಟು ಪಾದಯಾತ್ರೆಯಲ್ಲಿ ನದಿಯಂತೆ ಹರಿದ ಮಾಂಸ, ಮದ್ಯದ ಹೊಳೆಯನ್ನು ಕಾಣದವರು ಯಾರೂ ಇಲ್ಲ. ಆದರೆ, ಆ ಪಕ್ಷದ ಕಾಮಾಲೆ ಕಣ್ಣು ಹಿಂದೂಗಳ ಹಬ್ಬಗಳ ಮೇಲೆಯೇ ಬಿದ್ದಿದೆ. ಜಾತಿ, ಧರ್ಮಗಳ ತುಷ್ಟೀಕರಣ ಜಾಡ್ಯ ಕಾಂಗ್ರೆಸ್ ಪಕ್ಷವನ್ನು ಅಂಟಿಕೊಂಡಿದೆ ಎಂದು ಜೆಡಿಎಸ್ ದೂರಿದೆ.
ಕಾಂಗ್ರೆಸ್ ಸೋಲಿನ ಹತಾಶೆಯಿಂದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳನ್ನು ಟೀಕಿಸುವ ಬರದಲ್ಲಿ ನಮ್ಮ ಹಿಂದೂ ಸಂಪ್ರದಾಯದ ಬಗ್ಗೆ ಅವಹೇಳನ ಮಾಡಿದೆ. ಅದರ ಕೊಳಕುತನ ಅದರ ಟ್ವೀಟ್ ನಲ್ಲಿ ಎದ್ದು ಕಾಣುತ್ತಿದೆ. ನಿರಂತರವಾಗಿ ಹಿಂದೂ ವಿರೋಧಿ, ದ್ರೋಹಿ ಆಗಿರುವ ಕಾಂಗ್ರೆಸ್ ಪಕ್ಷಕ್ಕೆ ಹೊಸತೊಡಕುಗಿಂತ ಇಫ್ತಾರ್ ಕೂಟದಲ್ಲಿಯೇ ಹೆಚ್ಚು ಪ್ರೀತಿ. ಜನ್ಮದಾರಭ್ಯ ಬಂದಿದ್ದನ್ನು ನಾವಂತೂ ಅವಹೇಳನ ಮಾಡುವುದಿಲ್ಲ ಎಂದು ಪಕ್ಷ ಹೇಳಿದೆ.
ಕಾಂಗ್ರೆಸ್ ಹೇಳಿದ್ದೇನು?
ಜೆಡಿಎಸ್ ಪಕ್ಷದ ಹೆಡ್ಡಾಫೀಸ್ನಂತಿರುವ ಬಿಡದಿ ತೋಟದ ಮನೆಯಿಂದ ಮದ್ಯ ಹಾಗೂ ಬಾಡೂಟದ ಘಮಲು ಹೊರಬರುತ್ತಿದೆಯಂತೆ? ಸೋಲಿನ ಭೀತಿಯಿಂದ ಹೊಸ್ತೊಡಕಿನ ಹೆಸರಲ್ಲಿ ಮತದಾರರಿಗೆ, ಕಾರ್ಯಕರ್ತರಿಗೆ ಬಾಡೂಟದ ವ್ಯವಸ್ಥೆ ಮಾಡಿರುವ ಕುರಿತು ಮಾಹಿತಿಗಳಿದ್ದರೂ ಮುಖ್ಯ ಚುನಾವಣಾ ಅಧಿಕಾರಿ ಅವರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೂತಿರುವುದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಸೋಲಿನ ಭಯದಲ್ಲಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮದ್ಯ, ಮಾಂಸದ ರುಚಿ ತೋರಿಸಿ ಮತ ಕೇಳಲು ಮುಂದಾಗಿವೆಯೇ? ರಾಮನಗರ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಬಾಡೂಟದ ಆಮಿಷವನ್ನು ತಡೆಯದೇ ವಾಮಮಾರ್ಗದ ಚುನಾವಣೆಗೆ ಬೆಂಬಲ ನೀಡುತ್ತಿದ್ದಾರೆಯೇ? ಎಂದು ಪ್ರಶ್ನಿಸಿದೆ.












Click it and Unblock the Notifications