ಲೋಕಸಭಾ ಚುನಾವಣೆ; ಅಧಿಕಾರಿ, ಸಿಬ್ಬಂದಿಗಳ ರಜೆಗೆ ನಿಯಮ
ಬೆಂಗಳೂರು, ಫೆಬ್ರವರಿ 04: ಚುನಾವಣಾ ಆಯೋಗ 2024ರ ಲೋಕಸಭಾ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಳ್ಳುವ ಅಧಿಕಾರಿ/ ಸಿಬ್ಬಂದಿಗಳನ್ನು ಫೆಬ್ರವರಿ ತಿಂಗಳಿನಲ್ಲಿಯೇ ಅಂತಿಮಗೊಳಿಸಿ ತರಬೇತಿ ನೀಡಲು ಪ್ರಾರಂಭಿಸಲಾಗುತ್ತದೆ.
ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಈಗಾಗಲೇ ಜನವರಿ 1ರಂದು ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಿ ಪ್ರಕಟಿಸಲಾಗಿದೆ. ಮತದಾರರಪಟ್ಟಿಗೆ ಹೆಸರು ಸೇರಿಸಲು ಇನ್ನೂ ಸಹ ಅವಕಾಶವಿದೆ. ಮಾರ್ಚ್ 10ರ ಬಳಿಕ ಚುನಾವಣಾ ದಿನಾಂಕ ನಿಗದಿಯಾಗುವ ನಿರೀಕ್ಷೆ ಇದೆ.

ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಳ್ಳುವ ಅಧಿಕಾರಿ/ ಸಿಬ್ಬಂದಿಗಳಿಗೆ ಚುನಾವಣಾ ಕಾರ್ಯಗಳು ಪೂರ್ಣಗೊಳ್ಳುವ ತನಕ ದೀರ್ಘಾವಧಿ ರಜೆ ಮಂಜೂರು ಮಾಡುವಂತಿಲ್ಲ. ಈ ಕುರಿತು ಎಲ್ಲಾ ಜಿಲ್ಲೆಗಳ ಚುನಾವಣಾಧಿಕಾರಿ, ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.
ಅನುಮತಿ ಕಡ್ಡಾಯವಾಗಿದೆ; ಲೋಕಸಭಾ ಚುನಾವಣೆ-2024ರ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಅಧಿಕಾರಿ ಅಥವಾ ಸಿಬ್ಬಂದಿಗಳಿಗೆ ದೀರ್ಘಾವಧಿ ರಜೆಗೆ ಜಿಲ್ಲಾ ಚುನಾವಣಾಧಿಕಾರಿಗಳ ಮಂಜೂರಾತಿ ಕಡ್ಡಾಯವಾಗಿರುತ್ತದೆ.
ಚುನಾವಣಾ ಕಾರ್ಯಗಳು ಚುರುಕಿನಿಂದ ನಡೆಯುತ್ತಿರುವ ಕಾರಣ ವಿವಿಧ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳ ತಂಡಗಳನ್ನು ರಚಿಸಿ ಅಧಿಕಾರಿ/ ಸಿಬ್ಬಂದಿಗಳಿಗೆ ಕಾರ್ಯಗಳನ್ನು ಹಂಚಿಕೆ ಮಾಡಲಾಗಿದೆ. ವಿವಿಧ ಪರೀಕ್ಷೆಗಳು ಮುಗಿದ ಬಳಿಕ ಶಾಲಾ ಶಿಕ್ಷಕರು, ಕಾಲೇಜುಗಳು ಉಪನ್ಯಾಸಕರು ಸಹ ಚುನಾವಣಾ ಕಾರ್ಯಗಳಿಗೆ ನಿಯೋಜನೆಗೊಳ್ಳಲಿದ್ದಾರೆ.
ನೇಮಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳು ಚುನಾವಣೆ ಮುಕ್ತಾಯಗೊಳ್ಳುವವರೆಗೂ ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಈಗಾಗಲೇ ನಿರ್ದೇಶನ ನೀಡಿದ್ದಾರೆ. ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ಬಳಿಕ ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿ/ ಸಿಬ್ಬಂದಿಯನ್ನು ವರ್ಗಾವಣೆ ಸಹಿತ ಮಾಡುವಂತಿಲ್ಲ.
ಈ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಚುನಾವಣೆ ಮುಕ್ತಾಯಗೊಳ್ಳುವವರೆಗೆ ಹಂಚಿಕೆ ಮಾಡಿರುವ ಕರ್ತವ್ಯಗಳನ್ನು ಯಾವುದೇ ಲೋಪವಾಗದಂತೆ ನಿರ್ವಹಿಸಬೇಕು ಎಂದು ಸೂಚನೆ ಕೊಡಲಾಗಿದೆ.
ಚುನಾವಣಾ ಕಾರ್ಯಕ್ಕೆ ಸಂಬಂಧಿಸಿದ ಅಧಿಕಾರಿ/ ಸಿಬ್ಬಂದಿಗಳಿಗೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೆ ದೀರ್ಘಾವಧಿ ರಜೆ ಮಂಜೂರು ಮಾಡುವಂತಿಲ್ಲ ನಿರ್ದೇಶನ ನೀಡಲಾಗಿದೆ. ರಜೆ ಪಡೆಯುವುದು ಮಾತ್ರವಲ್ಲ ಚುನಾವಣಾ ತರಬೇತಿಯನ್ನು ಆಯೋಜನೆ ಮಾಡಿದಾಗ ತಪ್ಪದೇ ಭಾಗವಹಿಸಬೇಕು ಎಂದು ಸೂಚಿಸಲಾಗಿದೆ.
ಈಗಾಗಲೇ ಸುತ್ತೋಲೆಯೊಂದನ್ನು ಹೊರಡಿಸಿ, ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತದಾನ ಸಿಬ್ಬಂದಿಗಳ ಮಾಹಿತಿಯನ್ನು ಎನ್.ಐ.ಸಿ ತಂತ್ರಾಂಶದಲ್ಲಿ ದಾಖಲಿಸುವ ಬಗ್ಗೆ ತಿಳಿಸಲಾಗಿದೆ. ಮತದಾನ ಸಿಬ್ಬಂದಿಗಳ ಮಾಹಿತಿಯನ್ನು ಎನ್.ಐ.ಸಿ ಅವರು ತಯಾರಿಸಿರುವ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಬೇಕಿದೆ.
ತಂತ್ರಾಂಶದಲ್ಲಿ ಚುನಾವಣಾಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ಸಿಬ್ಬಂದಿಗಳ ಅಗತ್ಯ ಮಾಹಿತಿಯನ್ನು ಅಪ್ಲೋಡ್ ಮಾಡಲಿದ್ದಾರೆ. ಬಳಿಕ ಅವರಿಗೆ ತರಬೇತಿಯನ್ನು ನೀಡಲಾಗುತ್ತದೆ. ಯಾವ ಸಿಬ್ಬಂದಿಗೆ ಚುನಾವಣಾ ಕಾರ್ಯದಿಂದ ವಿನಾಯಿತಿ ನೀಡಬೇಕು ಎಂದು ಸಹ ಮಾಹಿತಿ ಸಂಗ್ರಹ ಮಾಡಲಾಗುತ್ತದೆ.
ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ. 3.5 ಲಕ್ಷ ಸಿಬ್ಬಂದಿಗಳು ಚುನಾವಣಾ ಕಾರ್ಯಕ್ಕೆ ಬೇಕು ಎಂದು ಅಂದಾಜಿಸಲಾಗಿದೆ. 2023ರ ವಿಧಾನಸಭೆ ಚುನಾವಣೆಗೆ ಕೆಲಸ ಮಾಡಿದ ಬಹುತೇಕ ಸಿಬ್ಬಂದಿಯನ್ನು ಲೋಕಸಭೆ ಚುನಾವಣಾ ಕಾರ್ಯಕ್ಕೆ ನಿಯೋಜನೆ ಮಾಡಲಾಗುತ್ತದೆ.
2019ರಲ್ಲಿ ಒಟ್ಟು 7 ಹಂತದಲ್ಲಿ ದೇಶಾದ್ಯಂತ ಚುನಾವಣೆ ನಡೆಸಲಾಗಿತ್ತು. ರಾಜ್ಯದಲ್ಲಿ ಯಾವ ಹಂತದಲ್ಲಿ ಚುನಾವಣೆ ನಡೆಸಬೇಕು? ಎಂದು ಚುನಾವಣಾ ಆಯೋಗ ತೀರ್ಮಾನ ಕೈಗೊಳ್ಳುತ್ತದೆ. ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುವ ನಿರೀಕ್ಷೆ ಇದೆ.
ಕರ್ನಾಟಕದಲ್ಲಿ ವಿವಿಧ ಅಧಿಕಾರಿ/ ಸಿಬ್ಬಂದಿಗಳು 2023ರ ವಿಧಾನಸಭೆ ಚುನಾವಣೆಯಲ್ಲಿ ಕೆಲಸ ಮಾಡಿದ ಕಾರಣ ಅವರಿಗೆ ಈಗ ತರಬೇತಿ ನೀಡಿ ಬಳಕೆ ಮಾಡಿಕೊಳ್ಳುವುದು ಸರಳವಾಗಿದೆ. ವಿಧಾಸಭೆಯಲ್ಲಿ ಕೆಲಸ ಮಾಡಿದ್ದಕ್ಕಿಂತ ಹೆಚ್ಚುವರಿಯಾಗಿ ಸುಮಾರು 9 ಸಾವಿರ ಸಿಬ್ಬಂದಿ ಲೋಕಸಭೆ ಚುನಾವಣೆಗೆ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.












Click it and Unblock the Notifications