1 ಕೋಟಿ ರೂಪಾಯಿಗೂ ಹೆಚ್ಚು ಹಣ ಪತ್ತೆ: ಬಿಜೆಪಿ ಬಗ್ಗೆ ರಾಮಲಿಂಗಾ ರೆಡ್ಡಿ ಆರೋಪ ಏನು?
2024ರ ಲೋಕಸಭೆ ಚುನಾವಣೆಗಾಗಿ ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ ಎಂಬ ಗಂಭೀರ ಆರೋಪಗಳ ನಡುವೆ ಇದೀಗ, ಬೆಂಗಳೂರಿನ ಜಯನಗರದಲ್ಲಿ ಬರೋಬ್ಬರಿ 1 ಕೋಟಿ 34 ಲಕ್ಷ ರೂಪಾಯಿ ಹಣ ಸಿಕ್ಕಿದೆ ಎಂದು ಆರೋಪ ಮಾಡಲಾಗಿದೆ. ಒಂದು ಕಡೆ ಈ ಹಣವು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ಸೇರಿದ್ದು ಎಂದು ಗಂಭೀರ ಆರೋಪ ಮಾಡುತ್ತಿದ್ದಾರೆ ಕಾಂಗ್ರೆಸ್ ನಾಯಕರು. ಇನ್ನು ಈ ಬಗ್ಗೆ ಸ್ವತಃ ರಾಮಲಿಂಗಾ ರೆಡ್ಡಿ ಅವರೇ ಟ್ವೀಟ್ ಮಾಡಿದ್ದಾರೆ.
ಹೀಗೆ ರಾಜಧಾನಿ ಬೆಂಗಳೂರಿನಲ್ಲಿ ಕೋಟಿ ಕೋಟಿ ಹಣ ಸಿಗುತ್ತಿದ್ದಂತೆ ಇಡೀ ಬೆಂಗಳೂರಿನ ಜನರು ಬೆಚ್ಚಿಬಿದ್ದಿದ್ದಾರೆ. ಈ ವಿಚಾರವು ದೇಶದ ಮೂಲೆ ಮೂಲೆಯಲ್ಲೂ ಸದ್ದು ಮಾಡಿದೆ. ಆದರೆ ಈ ಹಣವನ್ನು ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಬೆಂಬಲಿಗರು ಹಂಚಲು ತೆಗೆದುಕೊಂಡು ಹೋಗುತ್ತಿದ್ದರು ಎಂಬ ಆರೋಪ ಮಾಡಿದ್ದಾರೆ ಕಾಂಗ್ರೆಸ್ ನಾಯಕರು. ಈ ಆರೋಪದ ನಡುವೆ ಖುದ್ದು ಬೆಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸೌಮ್ಯಾ ರೆಡ್ಡಿ ಅವರ ತಂದೆ ರಾಮಲಿಂಗಾ ರೆಡ್ಡಿ ಅವರು ಟ್ವೀಟ್ ಮಾಡಿದ್ದಾರೆ. ಹಾಗಾದ್ರೆ, ರಾಮಲಿಂಗಾ ರೆಡ್ಡಿ ಅವರು ಹೇಳಿದ್ದೇನು? ಮುಂದೆ ಓದಿ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ರಾಮಲಿಂಗಾ ರೆಡ್ಡಿ ಅವರು, 'ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜಯನಗರದಲ್ಲಿ ಬಿಜೆಪಿಯ ದಾಖಲೆಯಿಲ್ಲದ ಕೋಟ್ಯಂತರ ರೂಪಾಯಿ ಹಣವನ್ನು ಚುನಾವಣೆ ಆಯೋಗ ಜಪ್ತಿ ಮಾಡಿದ್ದು, ಇದು ಬಿಜೆಪಿ ಎಲೆಕ್ಟೊರಲ್ ಬಾಂಡ್ ರೂಪದಲ್ಲಿ ಕೊಳ್ಳೆ ಹೊಡೆದ ಪಾಪದ ಹಣವಾಗಿದೆ. ಈ ಹಣವನ್ನು ಪ್ರಧಾನಿಯ ಬೆಂಗಳೂರು ಕಾರ್ಯಕ್ರಮಕ್ಕೆ ಜನ ಸೇರಿಸಲು ಬಳಸುವ ಉದ್ದೇಶದಿಂದ ಸಾಗಿಸುತ್ತಿದ್ದರೆ? ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಚುನಾವಣೆ ನಡೆಸುವುದು, ಬಹುಮತ ಬರದಿದ್ದಾಗ ನೂರಾರು ಕೋಟಿ ಹಣ ಹಾಕಿ ಶಾಸಕರು, ಸಂಸದರನ್ನು ಖರೀದಿಸುವುದು ಬಿಜೆಪಿ ಜಾಯಮಾನ.' ಎಂದಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜಯನಗರದಲ್ಲಿ ಬಿಜೆಪಿಯ ದಾಖಲೆಯಿಲ್ಲದ ಕೋಟ್ಯಂತರ ರೂಪಾಯಿ ಹಣವನ್ನು ಚುನಾವಣೆ ಆಯೋಗ ಜಪ್ತಿ ಮಾಡಿದ್ದು, ಇದು ಬಿಜೆಪಿ ಎಲೆಕ್ಟೊರಲ್ ಬಾಂಡ್ ರೂಪದಲ್ಲಿ ಕೊಳ್ಳೆ ಹೊಡೆದ ಪಾಪದ ಹಣವಾಗಿದೆ.
— Ramalinga Reddy (@RLR_BTM) April 13, 2024
ಈ ಹಣವನ್ನು ಪ್ರಧಾನಿಯ ಬೆಂಗಳೂರು ಕಾರ್ಯಕ್ರಮಕ್ಕೆ ಜನ ಸೇರಿಸಲು ಬಳಸುವ ಉದ್ದೇಶದಿಂದ ಸಾಗಿಸುತ್ತಿದ್ದರೆ?… pic.twitter.com/U6K0X78BIB
ಹಾಗೇ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಮುಂದುವರಿಸಿದ ರಾಮಲಿಂಗಾ ರೆಡ್ಡಿ ಅವರು, 'ಈಗ ಅವರ ಹಣವಂತೂ ಹೋಗಿದೆ, ಮಾನವನ್ನಾದರೂ ಉಳಿಸಿಕೊಳ್ಳಬೇಕು ಎನ್ನುವ ಕಾರಣದಿಂದ ಕಾಂಗ್ರೆಸ್ ಮೇಲೆ ಆಧಾರ ರಹಿತ ಆರೋಪವನ್ನು ಮಾಡುತ್ತಿದ್ದಾರೆ. ಈ ಬಾರಿಯ ಬೆಂಗಳೂರು ದಕ್ಷಿಣ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭಯ ಉಂಟಾಗಿದ್ದು, ಲೂಟಿ ಮಾಡಿದ ಹಣವನ್ನೆಲ್ಲ ಖರ್ಚು ಮಾಡಿಯಾದರೂ ಶತಾಯಗತಾಯ ಗೆಲ್ಲಬೇಕು ಎಂದು ಅವರ ತಂಡ ಹೊರಟಿರುವಂತಿದೆ. ನಾವು ಜನ ಬಲವನ್ನು ನಂಬಿದವರು, ಬಿಜೆಪಿಯಂತೆ ಹಣ ಬಲವನ್ನಲ್ಲ.' ಎಂದಿದ್ದಾರೆ ಸಚಿವ ರಾಮಲಿಂಗಾ ರೆಡ್ಡಿ ಅವರು.












Click it and Unblock the Notifications