ಲೋಕಸಭೆ ಚುನಾವಣೆ ಮುಕ್ತಾಯ: ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಜೂನ್ 08; ಲೋಕಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆಯಾಗಿದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಸೀಟುಗಳಲ್ಲಿ ಜಯಗಳಿಸಿದೆ. ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಆಯೋಗ ವಾಪಸ್ ಪಡೆದಿದೆ.
ಮಾದರಿ ಚುನಾವಣಾ ನೀತಿ ಸಂಹಿತೆ ವಾಪಸ್ ಪಡೆಯುತ್ತಿದ್ದಂತೆಯೇ ಕರ್ನಾಟಕ ಸರ್ಕಾರ ಆಡಳಿತ ಯಂತ್ರದಲ್ಲಿ ಬದಲಾವಣೆ ಮಾಡಿದೆ. ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಲೋಕಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಸರ್ಕಾರ ಅಧಿಕಾರಿಗಳ ವರ್ಗಾವಣೆ ಮಾಡುವಂತಿರಲಿಲ್ಲ. ವರ್ಗಾವಣೆಗೆ ಕೇಂದ್ರ ಚುನಾವಣಾ ಆಯೋಗದ ಒಪ್ಪಿಗೆ ಅಗತ್ಯವಿತ್ತು. ಅದಕ್ಕಾಗಿ ಚುನಾವಣೆ ಮುಗಿದ ಕೂಡಲೇ ಐಎಎಎಸ್ ಅಧಿಕಾರಿಗಳ ವರ್ಗಾವಣೆ ಆರಂಭಿಸಿದೆ.
ಯಾವ-ಯಾವ ಅಧಿಕಾರಿಗಳು?; ಐಎಎಸ್ ಅಧಿಕಾರಿಗಳ ವರ್ಗಾವಣೆ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಜೂನ್ 7ರಂದು ಆದೇಶ ಹೊರಡಿಸಿದೆ. ಕೆಲವು ಐಎಎಸ್ ಅಧಿಕಾರಿಗಳಿಗೆ ಸದ್ಯ ಇರುವ ಹುದ್ದೆಯ ಜೊತೆ ಹೆಚ್ಚುವರಿ ಹೊಣೆಯನ್ನು ನೀಡಲಾಗಿದೆ. ಅಧಿಕಾರಿಗಳ ಪಟ್ಟಿ ಇಲ್ಲಿದೆ.
* ಮಂಜುನಾಥ್ ಪ್ರಸಾದ್ (ಕೆಎನ್: 1994). ಸಹಕಾರ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವರ್ಗಾವಣೆ. ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಗೆ ವರ್ಗಾವಣೆ.
* ಮಂಜುನಾಥ್ ಪ್ರಸಾದ್ ಅವರಿಗೆ ಈಗಿರುವ ಹುದ್ದೆಯ ಜೊತೆಗೆ ಹೆಚ್ಚುವರಿಯಾಗಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಹೊಣೆ.
* ಮಂಜುನಾಥ್ ಪ್ರಸಾದ್ ಅವರಿಗೆ ಈಗಿರುವ ಹುದ್ದೆಯ ಜೊತೆಗೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಹೊಣೆ.
* ಡಾ. ಅಜಯ್ ನಾಗಭೂಷಣ್ (ಕೆಎನ್: 2004) ಸರ್ಕಾರದ ಕಾರ್ಯದರ್ಶಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಹುದ್ದೆಯ ಜೊತೆಗೆ ಮಂಜುನಾಥ್ ಪ್ರಸಾದ್ ವರ್ಗಾವಣೆಯಿಂದ ತೆರವಾದ ಸಹಕಾರ ಇಲಾಖೆ ಕಾರ್ಯದರ್ಶಿ ಹುದ್ದೆಯ ಹೊಣೆ ನೀಡಲಾಗಿದೆ.
ಸಚಿವರ ರಾಜೀನಾಮೆ ಪರಿಣಾಮ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಸುಮಾರು 94.73 ಕೋಟಿ ಹಣ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ಗುರುವಾರ ರಾಜೀನಾಮೆ ನೀಡಿದ್ದರು.
ಸಚಿವ ಬಿ. ನಾಗೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವರಾಗಿದ್ದರು. ಈಗ ಸಚಿವರು ರಾಜೀನಾಮೆ ನೀಡಿರುವುದರಿಂದ ಇಲಾಖೆಯ ಆಡಳಿತ ನಿಧಾನಗತಿಯಲ್ಲಿ ಸಾಗಬಾರದು ಎಂಬ ಕಾರಣಕ್ಕೆ ಹಿರಿಯ ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ.












Click it and Unblock the Notifications