ಮಂಗಳವಾರ ಚುನಾವಣೆ ಫಲಿತಾಂಶ: ಸಿಎಂ ಸಿದ್ದರಾಮಯ್ಯ ಎಲ್ಲಿರುತ್ತಾರೆ?
ಬೆಂಗಳೂರು, ಜೂನ್ 03; ಲೋಕಸಭೆ ಚುನಾವಣೆ 2024ರ ಫಲಿತಾಂಶ ಜೂನ್ 4ರ ಮಂಗಳವಾರ ಪ್ರಕಟವಾಗಲಿದೆ. ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದೆ. ಚುನಾವಣಾ ಫಲಿತಾಂಶ ಏನಾಗಲಿದೆ? ಎಂದು ಎಲ್ಲರೂ ಕಾದು ಕುಳಿತಿದ್ದಾರೆ.
ಕರ್ನಾಟಕದ 28 ಲೋಕಸಭಾ ಕ್ಷೇತ್ರದ ಮತ ಎಣಿಕೆಯೂ ಮಂಗಳವಾರ ನಡೆಯುತ್ತಿದೆ. ರಾಜ್ಯದ ಚುನಾವಣಾ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ. ಅದಕ್ಕೆ ಕಾರಣ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವುದು.

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುವ ಜೂನ್ 4ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮಗಳೇನು?. ಸಿದ್ದರಾಮಯ್ಯಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರತಿಷ್ಠೆಗೆ ಕಾರಣವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರವೂ ಚಾಮರಾಜನಗರದ ವ್ಯಾಪ್ತಿಗೆ ಸೇರುತ್ತದೆ. ಆದ್ದರಿಂದ ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ಮುಖ್ಯವಾಗಿದೆ.
ಚಾಮರಾಜನಗರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಸ್. ಬಾಲರಾಜು, ಕಾಂಗ್ರೆಸ್ನಿಂದ ಸುನೀಲ್ ಬೋಸ್ ಕಣದಲ್ಲಿದ್ದಾರೆ. ಕ್ಷೇತ್ರದಲ್ಲಿ ಬಿಎಸ್ಪಿ ಪ್ರಭಾವ ಹೊಂದಿದ್ದು, ಪಕ್ಷದಿಂದ ಎಂ. ಕೃಷ್ಣಮೂರ್ತಿ ಅಭ್ಯರ್ಥಿ. ಯಾರಿಗೆ ಗೆಲುವು ಎಂದು ಕಾದು ನೋಡಬೇಕಿದೆ.
ಸಿದ್ದರಾಮಯ್ಯ ಕಾರ್ಯಕ್ರಮ: ಇದುವರೆಗೂ ಮಂಗಳವಾರ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರ್ಯಕ್ರಮಗಳು ನಿಗದಿಯಾಗಿಲ್ಲ. ಯಾವುದೇ ಜಿಲ್ಲೆಯ ಪ್ರವಾಸ ಇಲ್ಲದೇ ಅವರು ಬೆಂಗಳೂರು ನಗರದಲ್ಲಿಯೇ ಇರಲಿದ್ದಾರೆ.
ಗೃಹ ಕಛೇರಿಯಲ್ಲಿಯೇ ಅವರು ಲೋಕಸಭೆ ಚುನಾವಣೆ 2024ರ ಫಲಿತಾಂಶವನ್ನು ವೀಕ್ಷಣೆ ಮಾಡಲಿದ್ದಾರೆ. ಆಪ್ತರ ಜೊತೆ ಫಲಿತಾಂಶದ ಕುರಿತು ಮಾತುಕತೆ ನಡೆಸಲಿದ್ದಾರೆ. ಯಾವುದೇ ಅಧಿಕಾರಿಗಳ ಸಭೆಯನ್ನು ಸಹ ಸಿದ್ದರಾಮಯ್ಯ ಕರೆದಿಲ್ಲ.
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ಜೊತೆ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸುವ ನಿರೀಕ್ಷೆ ಇದೆ. ಆದರೆ ಈ ಕುರಿತು ಅಧಿಕೃತವಾಗಿ ಯಾವುದೇ ಕಾರ್ಯಕ್ರಮ ಪಟ್ಟಿ ಬಿಡುಗಡೆಯಾಗಿಲ್ಲ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಆದ್ದರಿಂದ ಹೆಚ್ಚಿನ ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಶನಿವಾರ ಪ್ರಕಟಗೊಂಡ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಒಟ್ಟಾರೆ ರಾಜ್ಯದಲ್ಲಿ ಕಾಂಗ್ರೆಸ್ 5-7 ಸ್ಥಾನಗಳಲ್ಲಿ ಜಯಗಳಿಸಬಹುದು ಎಂದು ಅಂದಾಜಿಸಲಾಗಿದೆ.
ಲೋಕಸಭೆ ಚುನಾವಣೆ ಕರ್ನಾಟಕ ಕಾಂಗ್ರೆಸ್ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಕಾರಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಅಲ್ಲದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ರಾಜ್ಯ ಕರ್ನಾಟಕ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಶ್ರಮ ಹಾಕಿದ್ದಾರೆ.
ಎಕ್ಸಿಟ್ ಪೋಲ್ ಫಲಿತಾಂಶ ಶನಿವಾರ ಪ್ರಕಟಗೊಂಡ ಬಳಿಕ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದರು. "ಎಕ್ಸಿಟ್ ಪೋಲ್ಗಳು ಕರ್ನಾಟಕದಲ್ಲಿ ಕಾಂಗ್ರೆಸ್ಗೆ ಕಡಿಮೆ ಸ್ಥಾನಗಳನ್ನು ನೀಡುತ್ತಿವೆ. ನನಗೆ ಈ ಸಮೀಕ್ಷೆಗ ಮೇಲೆ ನಂಬಿಕೆ ಇಲ್ಲ. ಸಣ್ಣ ಮಾದರಿಗಳನ್ನು ಸಂಗ್ರಹ ಮಾಡಿ ಅವರು ಸಮೀಕ್ಷೆ ಮಾಡುತ್ತಾರೆ. ಜನರ ಜೊತೆ ಕೆಲಸ ಮಾಡಿದ ನಮಗೆ ಎಲ್ಲವೂ ತಿಳಿದಿದೆ. ಕರ್ನಾಟಕದಲ್ಲಿ ನಾವು ಎರಡಂಕಿ ಸೀಟುಗಳನ್ನು ಗೆಲ್ಲುತ್ತೇವೆ" ಎಂದು ಹೇಳಿದ್ದರು.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಎಕ್ಸಿಟ್ ಪೋಲ್ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ, 'ಕರ್ನಾಟಕದಲ್ಲಿ ಕೆಲವು ರಾಜಕೀಯ ಪಂಡಿತರ ಲೆಕ್ಕಾಚಾರಗಳೆಲ್ಲಾ ತಲೆಕೆಳಗಾಗುವಂತೆ ಸಮೀಕ್ಷಾ ವರದಿಗಳು ನಮ್ಮ ನಿರೀಕ್ಷಿತ ಫಲಿತಾಂಶದ ಸೂಚನೆ ಪ್ರಕಟಿಸಿದ್ದು, ಕರ್ನಾಟಕ ರಾಜ್ಯದ ಜನತೆ ಮೋದಿ ಜೀ ಅವರನ್ನು ಬೆಂಬಲಿಸುವ ನಿಟ್ಟಿನಲ್ಲಿ ಸದಾ ಮುಂದೆ ಎನ್ನುವ ವರದಿ ಬಿಜೆಪಿ ಕಾರ್ಯಕರ್ತರ ಪರಿಶ್ರಮದ ಹೋರಾಟಕ್ಕೆ ಸಾರ್ಥಕ ಭಾವ ಮೂಡಿಸಿದೆ' ಎಂದು ಹೇಳಿದ್ದಾರೆ.
'ಮತ ಬ್ಯಾಂಕ್ ಆಧಾರಿತ ಯೋಜನೆಗಳಿಗೆ ಮತದಾರ ಬಂಧುಗಳು ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ ಎನ್ನುವುದೂ ಸ್ಪಷ್ಟವಾಗಿದೆ. ಸಮಗ್ರ ಭಾರತದ ಸುರಕ್ಷತೆ ಹಾಗೂ ಅಭಿವೃದ್ಧಿಯ ವಿಷಯದಲ್ಲಿ ಕರ್ನಾಟಕದ ಮತದಾರರು ರಾಜಿಯಾಗುವ ಪ್ರಶ್ನೆಯೇ ಇಲ್ಲ ಎನ್ನುವುದನ್ನು ಈ ಎಕ್ಸಿಟ್ ಪೋಲ್ ವರದಿ ಸಾಕ್ಷೀಕರಿಸಿದೆ' ಎಂದು ತಿಳಿಸಿದ್ದಾರೆ.












Click it and Unblock the Notifications