ಪ್ರತಾಪ್ ಸಿಂಹಗೆ ಕೈ ತಪ್ಪಿದ ಟಿಕೆಟ್: ಮೈಸೂರು ಕ್ಷೇತ್ರದಿಂದ ಅಚ್ಚರಿ ಅಭ್ಯರ್ಥಿ ಕಣಕ್ಕೆ?
ಮೈಸೂರು, ಮಾರ್ಚ್ 10: ಲೋಕಸಭಾ ಚುನಾವಣೆ ಹತ್ತಿರಕ್ಕೆ ಬರುತ್ತಿದೆ. ಕರ್ನಾಟಕದ ಹಾಲಿ ಬಿಜೆಪಿ ಸಂಸದರು ಟಿಕೆಟ್ ಸಿಗುವ ನಿರೀಕ್ಷೆಯಿಂದಾಗಿ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಮುಂದುವರೆಸುತ್ತಿದ್ದಾರೆ. ಆದರೆ, ಈ ಬಾರಿ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದರಾದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗುವುದು ಅನುಮಾನವಾಗಿದೆ.
ಹೌದು, ರಾಜ್ಯದಲ್ಲಿ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ಚಾಲ್ತಿಯಲ್ಲಿರುವುದರಿಂದಲೇ ಈ ಬಾರಿ, ಮೈಸೂರು - ಕೊಡಗು ಸಂಸದ ಪ್ರತಾಪ್ ಸಿಂಹರಿಗೆ ಟಿಕೆಟ್ ನಿರಾಕರಿಸಲಾಗುತ್ತದೆ ಎಂದು ಹೇಳಲಾಗಿದೆ. ಮೈಸೂರು ಎಂದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು. ಸಿದ್ದರಾಮಯ್ಯ ಅವರಿಗೆ ತವರು ಜಿಲ್ಲೆ ಪ್ರತಿಷ್ಠೆ ಕ್ಷೇತ್ರವಾಗಿದೆ. ಈ ಬಾರಿಯೂ ಮೈಸೂರಿನಲ್ಲಿ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ನಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಬಿಜೆಪಿ ನಾಯಕರು ಸಹಕಾರ ನೀಡುವ ಸಾಧ್ಯತೆಗಳು ದಟ್ಟವಾಗಿದ್ದು, ಹಾಲಿ ಸಂಸದರಿಗೆ ಟಿಕೆಟ್ ನೀಡುವುದು ಅನುಮಾನ ಎಂದು ಹೇಳಲಾಗಿದೆ.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರನ್ನು ಕಣಕ್ಕಿಳಿಸಲು ಮುಂದಾಗಿದೆ. ಯದುವೀರ್ ರನ್ನ ಬಿಜೆಪಿ ಅಭ್ಯರ್ಥಿ ಮಾಡಿದರೆ ಮೈಸೂರು ಸುತ್ತಮುತ್ತಲಿನ ಕ್ಷೇತ್ರಗಳನ್ನ ಗೆಲ್ಲಲು ಅನುಕೂಲವಾಗಲಿದೆ ಎಂಬ ತಂತ್ರವನ್ನು ಬಿಜೆಪಿ ನಾಯಕರು ಹಾಕಿಕೊಂಡಿದ್ದಾರೆ ಎನ್ನಲಾಗಿದೆ.
ಸೋಮವಾರ ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗಲಿದ್ದು, ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಹೊಸ ಪ್ರಯೋಗಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದೆ. ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರ ರಾಜಕೀಯ ಕರೆತರಲು ಕಮಲ ಕಲಿಗಳು ಕಸರತ್ತು ನಡೆಸಿದ್ದಾರೆ. ಈಗಾಗಲೇ ಮೈಸೂರು ಜಿಲ್ಲೆಯಲ್ಲಿ ಪ್ರತಾಪ್ ಸಿಂಹ ಅವರ ವಿರುದ್ಧ ಕಾರ್ಯಕರ್ತರು, ಮುಖಂಡರು, ಮಾಜಿ ಶಾಸಕರುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅಂತಿಮವಾಗಿ ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಲ್ಲಿ ಯದುವೀರ್ ಒಡೆಯರ್ ಅವರ ಹೆಸರು ಚರ್ಚೆ ಆಗುತ್ತಿದೆ.
ಇನ್ನೂ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ದಿ ಕಾರ್ಯಕ್ರಮಗಳ ಹಾಗೂ ಕೆಲಸಗಳನ್ನು ಮಾಡಿದ್ದರು, ಸ್ವಪಕ್ಷ ನಾಯಕರಿಂದಲೇ ತೀವ್ರ ವಿರೋಧ ಕೇಳಿ ಬರುತ್ತಿದೆ. ಅಲ್ಲದೇ ಕಳೆದ ಲೋಕಸಭೆಯ ಅಧಿವೇಶನದ ಸಂದರ್ಭದಲ್ಲಿ ಸಂಸತ್ ನಲ್ಲಿ ಸ್ಮೋಕ್ ಬಾಂಬ್ ವಿಚಾರದಲ್ಲಿ ಪ್ರತಾಪ್ ಸಿಂಹಗೆ ಸಂಕಷ್ಟ ಎದುರಾಗಿತ್ತು. ಈ ಎಲ್ಲಾ ವಿಷಯಗಳಿಂದ ಪ್ರತಾಪ್ ಸಿಂಹಗೆ ಈ ಬಾರಿಟಿಕೆಟ್ ಕೈ ತಪ್ಪುವ ಸಂಭವ ಇದೆ ಎನ್ನಲಾಗಿದೆ.
ಪ್ರತಾಪ್ ಸಿಂಹಗೆ ಟಿಕೆಟ್ ಕೊಟ್ಟರೆ ಇಡೀ ಕ್ಷೇತ್ರದ ಕಾರ್ಯಕರ್ತರು ಬಾರೀ ವಿರೋಧ ವ್ಯಕ್ತಪಡಿಸುತ್ತಾರೆ. ಜೊತೆಗೆ ಬಿಜೆಪಿಯ ಮಾಜಿ ಸಚಿವ ರಾಮದಾಸ್, ಹಾಲಿ ಶಾಸಕ ನಾಗೇಂದ್ರರವರು ಪರೋಕ್ಷವಾಗಿ ಬಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರತಾಪ್ ಸಿಂಹಗೆ ಮತ್ತೆ ಟಿಕೆಟ್ ನೀಡಿದರೆ ಫ್ರಂಟ್ ಲೈನ್ ಕಾರ್ಯಕರ್ತರ ಜೊತೆಗೆ ಎಲ್ಲಾ ಬಿಜೆಪಿ ಕಾರ್ಯಕರ್ತರು ಬಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಾರೀ ಅಸಮಾಧಾನ ಭುಗಿಲೇಳಲಿದೆ. ಹೀಗಾಗಿ ಪ್ರತಾಪ್ ಸಿಂಹ ಅವರ ಬದಲಿದೆ ಯದುವೀರ್ ಅವರಿಗೆ ಟಿಕೆಟ್ ನೀಡಿದರೇ ಬಿಜೆಪಿಗೆ ಗೆಲುವು ಸುಲಭ ಎಂಬ ಚರ್ಚೆಗಳು ನಡೆಯುತ್ತಿದೆ.
ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್?: ಬಿವೈ ವಿಜಯೇಂದ್ರ ಹೇಳಿದ್ದೇನು?
ಈ ಬಾರಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ಮುಂದಾಗಿದ್ದು, ಹಾಲಿ ಸಂಸದರಾದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈ ತಪ್ಪಲಿದೆ. ಇನ್ನೂ ಮೈಸೂರಿನಲ್ಲಿ ಈ ಬಾರಿ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನುವ ಮಾತುಗಳು ಕೇಳಿ ಬಂದಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಆಗಿರೋದನ್ನು ನಾನು ಹೇಳಲ್ಲ. ಆದರೆ, 28 ಕ್ಷೇತ್ರಗಳಿಗೆ ಉತ್ತಮ ಅಭ್ಯರ್ಥಿ ಕೊಡುತ್ತೇವೆ ಎಂದು ಹೇಳಿದ್ದಾರೆ.











Click it and Unblock the Notifications