ಬಾಗಲಕೋಟೆ ಕಾಂಗ್ರೆಸ್ನ ಬಿಗ್ ಅಪ್ಡೇಟ್: ಬೆಂಬಲಿಗರ ಸಭೆ ಕರೆದ ವೀಣಾ ಕಾಶಪ್ಪನವರ್
ಬಾಗಲಕೋಟೆ, ಏಪ್ರಿಲ್ 01: ಲೋಕಸಭಾ ಅಭ್ಯರ್ಥಿಗಳು ಅಂತಿಮವಾಗುತ್ತಿದ್ದಂತೆ ಎಲ್ಲಾ ಪಕ್ಷಗಳಲ್ಲಿಯೂ ಅಸಮಾಧಾನ ಹೊಗೆಯಾಡುತ್ತಿದೆ. ಈ ಬಾರಿ ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದ ಅನೇಕರಿಗೆ ಟಿಕೆಟ್ ಕೈ ತಪ್ಪಿದ್ದು, ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ. ಇದೀಗ ಕಾಂಗ್ರೆಸ್ಗೂ ಬಂಡಾಯದ ಬಿಸಿ ತಟ್ಟುತ್ತಿದ್ದು, ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ ಬೆಂಬಲಿಗರ ಸಭೆ ಕರೆದಿರುವುದು ರಾಜ್ಯ ಕಾಂಗ್ರೆಸ್ ನಾಯಕರ ಆತಂಕಕ್ಕೆ ಕಾರಣವಾಗಿದೆ.
ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಈ ಬಾರಿ ಹೊಸ ಅಭ್ಯರ್ಥಿಯನ್ನು ಕಾಂಗ್ರೆಸ್ ಕಣಕ್ಕಿಳಿಸಿದ್ದು, ಸಚಿವರ ಪುತ್ರಿ ಸ್ಪರ್ಧೆಗಿಳಿದಿದ್ದಾರೆ. ಕ್ಷೇತ್ರದಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ್ಗೆ ಕೈ ತಪ್ಪಿದ ಟಿಕೆಟ್ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಅವರ ಪಾಲಾಗಿತ್ತು.

ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಿಂದ ಸಕ್ರಿಯರಾಗಿದ್ದ ವೀಣಾ ಕಾಶಪ್ಪನವರ್ ಇನ್ನು ಎರಡು ದಿನಗಳಲ್ಲಿ ಬಾಗಲಕೋಟೆಯ ಜಿಲ್ಲಾ ಕೇಂದ್ರದಲ್ಲಿ ಬೆಂಬಲಿಗರ ಸಭೆ ನಡೆಸಲಿದ್ದು, ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಚರ್ಚಿಸಲಿದ್ದಾರೆ. ವೀಣಾ ಕಾಶಪ್ಪನವರ್ ಅವರಿಗೆ ಟಿಕೆಟ್ ಕೈ ತಪ್ಪಿರುವ ವಿಚಾರ ಹೊರ ಬೀಳುತ್ತಿದ್ದಂತೆ ಅವರ ಬೆಂಬಲಿಗರು ಕ್ಷೇತ್ರದಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು. ಇದೀಗ ಕಾಂಗ್ರೆಸ್ ಹೈಕಮಾಂಡ್ ನಾಯಕರ ನಿರ್ಧಾರದಿಂದ ಅಸಮಾಧಾನಗೊಂಡಿರುವ ವೀಣಾ ಕಾಶಪ್ಪನವರ್ ಬೆಂಬಲಿಗರು, ಅವರು ಪಕ್ಷೇತರರಾಗಿ ಸ್ಪರ್ಧಿಸಿದರು ಕೂಡ ಬೆಂಬಲಕ್ಕೆ ನಿಲ್ಲುವ ಭರವಸೆ ನೀಡಿದ್ದಾರೆ.
ಇದೀಗ ವೀಣಾ ಕಾಶಪ್ಪನವರ್ ಜಿಲ್ಲೆಯ ಶಾಸಕರನ್ನು ಹೊರತುಪಡಿಸಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪಕ್ಷಾತೀತ ಬೆಂಬಲಿಗರ ಜೊತೆ ಸಭೆ ನಡೆಸಲಿದ್ದು, ಕಾಂಗ್ರೆಸ್ ಪರ ಪ್ರಚಾರದಲ್ಲಿ ಭಾಗಿಯಾಗುವ ಬಗ್ಗೆ, ಅಥವಾ ಪಕ್ಷೇತರರಾಗಿ ಸ್ಪರ್ಧಿಸುವ ಬಗ್ಗೆ ಹಾಗೂ ಪಕ್ಷಾಂತರದ ಸಾಧಕ- ಭಾದಕಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ವೀಣಾ ಕಾಶಪ್ಪನವರ್ ಬೆಂಬಲಿಗರ ಸಭೆ ಕರೆದಿರುವುದು ರಾಜ್ಯ ನಾಯಕರಿಗೆ ದೊಡ್ಡ ತಲೆ ನೋವಾಗಿದೆ.
ಪಕ್ಷೇತರ ಸ್ಪರ್ಧೆ ಬಗ್ಗೆ ಸುಳಿವು ಕೊಟ್ಟ ವೀಣಾ ಕಾಶಪ್ಪನವರ್
ಇನ್ನು ಪಕ್ಷೇತರ ಸ್ಪರ್ಧೆ ಬಗ್ಗೆ ಈ ಹಿಂದೆ ಸುಳಿವು ಕೊಟ್ಟಿದ್ದ ವೀಣಾ ಕಾಶಪ್ಪನವರ್, ನನಗೆ ಟಿಕೆಟ್ ನೀಡಿಲ್ಲ, ನಾನು ಅಭ್ಯರ್ಥಿ ಅಲ್ಲ ಎಂದು ನಾನು ಕ್ಷೇತ್ರದಲ್ಲಿ ಓಡಾಡುವುದನ್ನು ನಿಲ್ಲಿಸಿಲ್ಲ. ನೀವು ಪಕ್ಷೇತರ ನಿಂತರೂ ನಾವು ನಿಮಗಾಗಿ ಕೆಲಸ ಮಾಡುತ್ತೇವೆ ಎಂದು ನಮ್ಮ ಕಾರ್ಯಕರ್ತರು ಹೇಳಿದ್ದಾರೆ. ಟಿಕೆಟ್ ಸಿಗದೇ ಇದ್ದರೂ ಈಗಲೂ ಕ್ಷೇತ್ರದಲ್ಲಿ ಓಡಾಡುತ್ತಿದ್ದೇನೆ. ಜನರ ಸಂಪರ್ಕದಲ್ಲಿದ್ದೇನೆ. ನೀವು ಪಕ್ಷೇತರ ನಿಂತರೂ ನಾವು ನಿಮಗಾಗಿ ಕೆಲಸ ಮಾಡುತ್ತೇವೆ. ನಿಮ್ಮ ನಿರ್ಧಾರಕ್ಕೆ ನಾವು ಬದ್ಧ ಎಂದು ಪ್ರತಿಯೊಬ್ಬರು ಹೇಳಿದ್ದಾರೆ ಎಂದು ಹೇಳಿದರು.












Click it and Unblock the Notifications