Lok Sabha Election: ಕರ್ನಾಟಕ ಬಿಜೆಪಿಯಲ್ಲಿ ಬಿಎಸ್ವೈ ನಿರ್ಧಾರವೇ ಅಂತಿಮ!
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಜೆಡಿಎಸ್ಗೆ ಮೂರು ಸೀಟುಗಳನ್ನು ಬಿಟ್ಟುಕೊಟ್ಟಿದ್ದು, ಇನ್ನು ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ ಬಾಕಿ ಇದೆ.
ಕಾಂಗ್ರೆಸ್ ಬಿಜೆಪಿ ಅಭ್ಯರ್ಥಿಗಳನ್ನು ನೋಡಿದ ಬಳಿಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪ್ರಭಾವ ದಟ್ಟವಾಗಿ ಕಾಣುತ್ತದೆ. ರಾಜ್ಯ ನಾಯಕರನ್ನು ಎದುರು ಹಾಕಿಕೊಂಡರೆ ಉಳಿಗಾಲವಿಲ್ಲ ಎನ್ನುವ ಸಂದೇಶವನ್ನು ಈ ಪಟ್ಟಿಯ ಮೂಲಕ ಬಿಎಸ್ವೈ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ಬಳಿಕ ಹೊಂದಾಣಿಕೆ ರಾಜಕೀಯದ ಬಗ್ಗೆ ಮಾತನಾಡಿ, ರಾಜ್ಯ ಬಿಜೆಪಿ ನಾಯಕರ ವಿರುದ್ಧವೇ ಮಾತನಾಡಿದ್ದ ಮೈಸೂರು - ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದೆ. ಈಗ ಈ ಕ್ಷೇತ್ರದಿಂದ ಯದುವೀರ್ ಒಡೆಯರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಶೋಭಾ ಕರಂದ್ಲಾಜೆಗೆ ಟಿಕೆಟ್
ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಟಿಕೆಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಈ ಬಾರಿ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಚಿಕ್ಕಮಗಳೂರು - ಉಡುಪಿ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರೇ ಸಂಸದೆ ವಿರುದ್ಧ ತಿರುಗಿಬಿದ್ದಿದ್ದರು. ಅವರು ಇಲ್ಲಿಂದ ಸ್ಪರ್ಧೆ ಮಾಡುವುದು ಬೇಡ ಎಂದು ಅಭಿಯಾನ ಮಾಡಿದ್ದರು. ಅದಕ್ಕಾಗಿ ಕ್ಷೇತ್ರ ಬದಲಾವಣೆ ಮಾಡಿದ್ದರೂ ಟಿಕೆಟ್ ಸಿಕ್ಕಿದೆ.
ಇನ್ನು ಕುಟುಂಬ ರಾಜಕಾರಣವನ್ನು ವಿರೋಧಿಸುವ ಬಿಜೆಪಿಯಲ್ಲಿ ಬಿಎಸ್ವೈ ಅವರ ಕುಟುಂಬ ರಾಜಕಾರಣಕ್ಕೆ ಯಾವ ಅಡ್ಡಿ ಆತಂಕ ಇಲ್ಲವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿವೈ ರಾಘವೇಂದ್ರ ಟಿಕೆಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮತ್ತೊಬ್ಬ ಲಿಂಗಾಯತ ಮುಖಂಡ ವಿ. ಸೋಮಣ್ಣ ಅವರಿಗೂ ತುಮಕೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಸಿಕ್ಕಿದೆ. ವಿ. ಸೋಮಣ್ಣ ಸ್ಪರ್ಧೆಗೆ ಕ್ಷೇತ್ರದ ಪ್ರಮುಖ ಬಿಜೆಪಿ ನಾಯಕರಿಂದ ವಿರೋಧ ಇದ್ದರೂ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಹಾವೇರಿ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ಸಿಕ್ಕಿದೆ. ಕರ್ನಾಟಕ ಬಿಜೆಪಿಯಲ್ಲಿ ಆರ್ ಎಸ್ಎಸ್ ಪ್ರಭಾವಕ್ಕಿಂತ, ತಮ್ಮ ವರ್ಚಸ್ಸೇ ಹೆಚ್ಚಾಗಿದೆ ಎನ್ನುವುದನ್ನು ಈ ಪಟ್ಟಿಯ ಮೂಲಕ ಬಿಎಸ್ವೈ ತೋರಿಸಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ ಯಡಿಯೂರಪ್ಪ ಅವರನ್ನು ಕಡೆಗಣಿಸಿ, ಮೋದಿ ಹೆಸರಿನಲ್ಲೇ ಚುನಾವಣೆ ಗೆಲ್ಲಬಹುದು ಎಂದುಕೊಂಡಿದ್ದ ಬಿಜೆಪಿ ನಾಯಕರಿಗೆ ರಾಜ್ಯದ ಜನ ಶಾಕ್ ಕೊಟ್ಟಿದ್ದರು. ಕಾಂಗ್ರೆಸ್ ಅಬ್ಬರಕ್ಕೆ ಬಿಜೆಪಿ, ಮೋದಿ ಅಲೆ ಎಲ್ಲವೂ ಕೊಚ್ಚಿ ಹೋಗಿತ್ತು. ಸೋಲಿನ ಬಳಿಕ ಬಿಜೆಪಿ ಹೈಕಮಾಂಡ್ ಬುದ್ದಿ ಕಲಿತಿದ್ದು, ಬಿಎಸ್ವೈ ಅವರನ್ನು ವಿಶ್ವಾಸಕ್ಕೆ ಪಡೆದು ಎಲ್ಲಾ ನಿರ್ಧಾರ ಮಾಡುತ್ತಿದೆ.
ಬಿಎಸ್ವೈ ಅವರ ಇಚ್ಛೆಯಂತೆ ಈ ಬಾರಿ ಬಹುತೇಕ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ. ನಿರೀಕ್ಷೆಯಂತೆ ಈ ಬಾರಿ ಬಿಜೆಪಿ ರಾಜ್ಯದಲ್ಲಿ ಗೆಲುವು ಸಾಧಿಸಿದರೆ, ಬಿಎಸ್ವೈ ಅವರೇ ರಾಜ್ಯ ಬಿಜೆಪಿಯಲ್ಲಿ ಪ್ರಶ್ನಾತೀತ ನಾಯಕರಾಗಲಿದ್ದಾರೆ.












Click it and Unblock the Notifications