ಕರ್ನಾಟಕ ಕಾಂಗ್ರೆಸ್ ಮರ್ಯಾದೆ ಉಳಿಸಿದ ಡಿಕೆಶಿ ಸಹೋದರರು!
ಬೆಂಗಳೂರು, ಮೇ 23 : ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಕಾಂಗ್ರೆಸ್ನ ಶಿಸ್ತಿನ ಸಿಪಾಯಿ, ಪಕ್ಷದ ಪಾಲಿಗೆ ಟ್ರಬಲ್ ಶೂಟರ್. ಇಂದು ಇದೇ ಡಿ.ಕೆ.ಶಿವಕುಮಾರ್ ಸಹೋದರರು ರಾಜ್ಯ ಕಾಂಗ್ರೆಸ್ ಮಾನವನ್ನು ಕಾಪಾಡಿದ್ದಾರೆ.
ಗುರುವಾರ 2019ನೇ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ರಾಜ್ಯದ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಕೇವಲ 1 ಸ್ಥಾನದಲ್ಲಿ ಜಯಗಳಿಸಿದೆ. ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಅವರು ಬೆಂಗಳೂರು ಗ್ರಾಮಾಂತರದಲ್ಲಿ ಗೆದ್ದು ಬೀಗಿದ್ದಾರೆ.
ಮೈತ್ರಿ ಸರ್ಕಾರಕ್ಕೆ ಸಂಕಷ್ಟ ಎದುರಾದರೆ ಟ್ರಬಲ್ ಶೂಟರ್ ಇಲ್ಲ!
ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಆಸ್ಟ್ರೇಲಿಯಾ ಪ್ರವಾಸಲ್ಲಿದ್ದಾರೆ. ಆದರೆ, ಪಕ್ಷ ಕೊಟ್ಟ ಕೆಲಸವನ್ನು ಅವರು ನಿಷ್ಠೆಯಿಂದ ಮಾಡಿದ್ದು, ಅದರ ಫಲಿತಾಂಶ ಇಂದು ಹೊರಬಿದ್ದಿದೆ. ಕುಂದಗೋಳದಲ್ಲಿ ಕುಸುಮಾ ಶಿವಳ್ಳಿ ಅವರು ಜಯಗಳಿಸಿದ್ದಾರೆ.
ಕುಂದಗೋಳ ಉಪ ಚುನಾವಣೆ : 1611 ಮತದ ಅಂತದಲ್ಲಿ ಕುಸುಮಾ ಶಿವಳ್ಳಿ ಜಯ
ಒಂದು ಕಡೆ ಕುಂದಗೋಳ ವಿಧಾನಸಭೆ ಉಪ ಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಯನ್ನು ಡಿ.ಕೆ.ಶಿವಕುಮಾರ್ ಗೆಲ್ಲಿಸಿಕೊಟ್ಟಿದ್ದಾರೆ. ಮತ್ತೊಂದು ಕಡೆ ಡಿ.ಕೆ.ಸುರೇಶ್ ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಉಂಟಾಗಬೇಕಿದ್ದ ದೊಡ್ಡ ಮುಖಭಂಗ ತಡೆದಿದ್ದಾರೆ.
ಡಿಕೆಶಿ ಸಹೋದರರು
ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಕರ್ನಾಟಕ ಕಾಂಗ್ರೆಸ್ನ ನಿಷ್ಠಾವಂತ ಕಾರ್ಯಕರ್ತರು. ಪಕ್ಷ ಕೊಟ್ಟ ಕೆಲಸವನ್ನು ಅಚ್ಚು ಕಟ್ಟಾಗಿ ಮಾಡಿ ಮುಗಿಸುತ್ತಾರೆ. ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದಾಗ ಇಬ್ಬರೂ ಪಕ್ಷವನ್ನು ದೊಡ್ಡ ಮುಜುಗರದಿಂದ ಕಾಪಾಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಾಯಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಗೆಲುವು
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಹಾಲಿ ಸಂಸದ, ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಲೋಕಸಭಾ ಚುನಾವಣೆಯಲ್ಲಿ 8,78,285 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯ ಅಶ್ವಥ್ ನಾರಾಯಣ ಅವರನ್ನು ಸೋಲಿಸಿದ್ದಾರೆ. 206870 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ನಿಂದ ಗೆಲುವು ಸಾಧಿಸಿದ ಏಕೈಕ ಸಂಸದರು ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
ಕುಂದಗೋಳದ ಉಪ ಚುನಾವಣೆ ಗೆಲುವು
ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ದಿ.ಸಿ.ಎಸ್.ಶಿವಳ್ಳಿ ಪತ್ನಿ ಕುಸುಮಾ ಶಿವಳ್ಳಿ ಅವರು 1611 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಕುಂದಗೋಳ ವಿಧಾನಸಭೆ ಉಪ ಚುನಾವಣೆ ಉಸ್ತುವಾರಿಯಾಗಿದ್ದರು. ಪಕ್ಷ ನೀಡಿದ ಟಾಸ್ಕ್ನಂತೆ ಅವರು ತಂತ್ರ ರೂಪಿಸಿ ಅಭ್ಯರ್ಥಿ ಗೆಲ್ಲಿಸಿದ್ದಾರೆ.
ಡಿ.ಕೆ.ಶಿವಕುಮಾರ್ ವಿದೇಶದಲ್ಲಿ
ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಸದ್ಯ ಕರ್ನಾಟಕದಲ್ಲಿ ಇಲ್ಲ. ಕುಟುಂಬದ ಜೊತೆ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾರೆ. ಮೇ 27ರ ಬಳಿಕ ಅವರು ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ. ಬಳಿಕ ನಾಯಕರ ಜೊತೆ ಸಭೆ ನಡೆಸುವ ಸಾಧ್ಯತೆ ಇದೆ.