ಕರ್ನಾಟಕ ಮೈತ್ರಿ ಸರ್ಕಾರಕ್ಕೆ ಈಗ ನಿಜವಾದ ಅಗ್ನಿ ಪರೀಕ್ಷೆ
Recommended Video
ಬೆಂಗಳೂರು, ಮೇ 24 : ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವದಲ್ಲಿದೆ. ಆದರೆ, ಲೋಕಸಭಾ ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ಭಾರಿ ಮುಖಭಂಗವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ 1 ಸ್ಥಾನದಲ್ಲಿ ಮಾತ್ರ ಜಯಗಳಿಸಿವೆ. ಮೈತ್ರಿ ಸರ್ಕಾರ ಮುಂದುವರೆಯಲಿದೆಯೇ?.
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸಿದ್ದವು. ಕಾಂಗ್ರೆಸ್ 21, ಜೆಡಿಎಸ್ 7 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದರು. ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್, ಹಾಸನದಲ್ಲಿ ಜೆಡಿಎಸ್ ಜಯಗಳಿಸಿದ್ದು ಬಿಟ್ಟರೆ ಮೈತ್ರಿಕೂಟದ ಸಾಧನೆ ಏನೂ ಇಲ್ಲ.
ಕರ್ನಾಟಕದ ಮೈತ್ರಿ ಸರ್ಕಾರ ಈಗ ನಿಜವಾದ ಪರೀಕ್ಷೆಯನ್ನು ಎದುರಿಸುತ್ತಿವೆ. ಜೆಡಿಎಸ್ ಮತ್ತು ಕಾಂಗ್ರೆಸ್ ವಲಯದಲ್ಲಿ ಮೈತ್ರಿಯನ್ನು ಮುಂದುವರೆಸಬೇಕೆ? ಅಥವ ಬೇಡವೇ? ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಶುಕ್ರವಾರ ಸಂಜೆ ಅಂತಿಮ ಚಿತ್ರಣ ಲಭ್ಯವಾಗುವ ನಿರೀಕ್ಷೆ ಇದೆ.
ಮೈತ್ರಿ ಸರ್ಕಾರದಿಂದ ಕಾಂಗ್ರೆಸ್ಗೆ ಯಾವುದೇ ಲಾಭವಿಲ್ಲ ಎಂದು ಸಿದ್ದರಾಮಯ್ಯ ಅವರು ಈಗಾಗಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಆದ್ದರಿಂದ, ಹೈಕಮಾಂಡ್ ನಾಯಕರು ಈ ಕುರಿತು ಶೀಘ್ರದಲ್ಲೇ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ....

ಬಿಜೆಪಿ ಸುಮ್ಮನೆ ಕೂರುವುದಿಲ್ಲ
ಲೋಕಸಭಾ ಚುನಾವಣೆ ಜೊತೆಗೆ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಚಿಂಚೋಳಿಯಲ್ಲಿ ಬಿಜೆಯ ಅವಿನಾಶ್ ಜಾಧವ್ ಜಯಗಳಿಸಿದ್ದಾರೆ. ಕರ್ನಾಟಕ ಬಿಜೆಪಿಯ ಸದಸ್ಯ ಬಲ ಸದ್ಯ 105. ಈಗ ಬಿಜೆಪಿ ಸುಮ್ಮನೆ ಕೂರುವುದಿಲ್ಲ ಎಂಬದು ಮೈತ್ರಿ ನಾಯಕರಿಗೂ ಗೊತ್ತು. ಲೋಕಸಭಾ ಚುನಾವಣೆ ಫಲಿತಾಂಶ ನೋಡಿದ ಶಾಸಕರು ಬಿಜೆಪಿಯತ್ತ ಹೆಜ್ಜೆ ಹಾಕುವ ಸಾಧ್ಯತೆ ಇದ್ದು, ಶಾಸಕರನ್ನು ಹಿಡಿದಿಟ್ಟುಕೊಳ್ಳುವುದು ಮೈತ್ರಿಕೂಟಕ್ಕೆ ಸವಾಲಾಗಿದೆ.

ಮೈತ್ರಿ ಧರ್ಮ ಪಾಲನೆಯಾಗ್ತಿಲ್ಲ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಮೈತ್ರಿ ಧರ್ಮ ಪಾಲನೆಯಾಗಿಲ್ಲ. ಇದಕ್ಕೆ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳ ಸೋಲು ಸಾಕ್ಷಿಯಾಗಿದೆ. ಇದರಿಂದಾಗಿ ಎರಡೂ ಪಕ್ಷಗಳಲ್ಲಿ ಅಸಮಾಧಾನ ಹೆಚ್ಚಿದೆ. ಮೈತ್ರಿ ಸರ್ಕಾರವನ್ನು ಮುಂದುವರೆಸಬೇಕೆ?, ಬೇಡವೇ? ಎಂದು ಚರ್ಚೆಗಳು ನಡೆಯುತ್ತಿವೆ.

ಸಿದ್ದರಾಮಯ್ಯ ಮತ್ತೆ ಸಿಎಂ ಕೂಗು
ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬ ಕಾಂಗ್ರೆಸ್ ನಾಯಕರ ಕೂಗಿಗೆ ಜೆಡಿಎಸ್ ಅಸಮಾಧಾನಗೊಂಡಿದೆ. ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆಗೂ ಮೊದಲು ಕಾಂಗ್ರೆಸ್-ಜೆಡಿಎಸ್ ನಾಯಕರ ನಡುವೆ ನಡೆದ ಮಾತಿನ ಸಮರಗಳು ಇದಕ್ಕೆ ಸಾಕ್ಷಿಯಾಗಿವೆ. ಆದ್ದರಿಂದ, ರಾಜ್ಯದಲ್ಲಿನ ಮೈತ್ರಿ ಸರ್ಕಾರ ಈಗ ನಿಜವಾದ ಅಗ್ನಿ ಪರೀಕ್ಷೆ ಎದುರಿಸುತ್ತಿದೆ.

ಕಾಂಗ್ರೆಸ್ಗೆ ಲಾಭವಿಲ್ಲ
ಮೈತ್ರಿ ಸರ್ಕಾರವನ್ನು ಮುಂದುವರೆಸುವುದರಿಂದ ಕಾಂಗ್ರೆಸ್ಗೆ ಲಾಭವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ವರದಿ ನೀಡಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶಕ್ಕೂ ಮೊದಲು ಮೈತ್ರಿ ಸರ್ಕಾರಕ್ಕೆ ಧಕ್ಕೆ ಆಗಬಾರದು ಎಂದು ರಾಹುಲ್ ಗಾಂಧಿ ಹೇಳಿದ್ದರು. ಆದರೆ, ಈಗ ಕಾಂಗ್ರೆಸ್ ಹೈಕಮಾಂಡ್ ನಿಲುವಿನಲ್ಲಿಯೂ ಬದಲಾವಣೆಯಾಗುವ ನಿರೀಕ್ಷೆ ಇದೆ.

ಸಾಮಾನ್ಯ ಕನಿಷ್ಠ ಕಾರ್ಯಕ್ರಮ
ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ಸಮ್ಮಿಶ್ರ ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಸಿಎಂಪಿ)ಗಳ ಜಾರಿಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ, ಇದು ಪಾಲನೆಯಾಗುತ್ತಿಲ್ಲ. ಜೆಡಿಎಸ್ ಕಾಂಗ್ರೆಸ್ಗೆ ಹೆಚ್ಚಿನ ಮಹತ್ವ ಕೊಡುತ್ತಿಲ್ಲ ಎಂಬ ಆರೋಪಗಳಿವೆ. ಇದರಿಂದಾಗಿ ಸರ್ಕಾರ ಮುಂದುವರೆಸುವುದಲ್ಲಿ ಅರ್ಥವಿಲ್ಲ ಎಂಬ ತೀರ್ಮಾನಕ್ಕೆ ನಾಯಕರು ಬಂದಿದ್ದಾರೆ.












Click it and Unblock the Notifications