ಮೊದಲ ಹಂತದ ಚುನಾವಣೆ: ಕಣದಲ್ಲಿ 241 ಅಭ್ಯರ್ಥಿಗಳು
ಬೆಂಗಳೂರು, ಮಾರ್ಚ್ 30: ರಾಜ್ಯದಲ್ಲಿ ಏಪ್ರಿಲ್ 18ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಯಲ್ಲಿ ಒಟ್ಟು 241 ಅಭ್ಯರ್ಥಿಗಳು ಕಣದಲ್ಲಿ ಉಳಿದುಕೊಂಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಮಾರ್ಚ್ 19ರಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿತ್ತು. ಮಾರ್ಚ್ 26ಕ್ಕೆ ನಾಮಪತ್ರ ಸಲ್ಲಿಕೆಯ ಗಡುವು ಮುಕ್ತಾಯಗೊಂಡಿತ್ತು. ಮಾರ್ಚ್ 29 ನಾಮಪತ್ರ ಹಿಂದಕ್ಕೆ ಪಡೆಯಲು ಅಂತಿಮ ದಿನವಾಗಿತ್ತು.
ರಾಜ್ಯದಲ್ಲಿ ಮೊದಲ ಹಂತದಲ್ಲಿ ಏಪ್ರಿಲ್ 18ರಂದು 14 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತಕ್ಕಾಗಿ ಒಟ್ಟು 274 ಮಂದಿ ನಾಮಪತ್ರ ಸಲ್ಲಿಸಿದ್ದರು. ಇದರಲ್ಲಿ 33 ಮಂದಿ ನಾಮಪತ್ರ ವಾಪಸ್ ಪಡೆದಿದ್ದು, ಕಣದಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಇದರಿಂದ ಅಂತಿಮವಾಗಿ ಕಣದಲ್ಲಿ 241 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ. ನಾಮಪತ್ರ ಹಿಂದಕ್ಕೆ ಪಡೆದವರಲ್ಲಿ ಇಬ್ಬರು ಪ್ರಮುಖ ಆಕಾಂಕ್ಷಿಗಳಿದ್ದಾರೆ. ಇಬ್ಬರೂ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದವರು.
ಕಾಂಗ್ರೆಸ್ನಿಂದ ಬಂಡಾಯ ಅಭ್ಯರ್ಥಿಗಳಾಗಿ ಮುದ್ದಹನುಮೇಗೌಡ ಮತ್ತು ಕೆಎನ್ ರಾಜಣ್ಣ ನಾಮಪತ್ರ ಸಲ್ಲಿಸಿದ್ದರು. ಕೊನೆಯ ದಿನವಾದ ಶುಕ್ರವಾರ ಇಬ್ಬರೂ ನಾಮಪತ್ರ ವಾಪಸ್ ಪಡೆದಿದ್ದಾರೆ.
ಕೋಲಾರದಲ್ಲಿ ಆರು ಮಂದಿ, ಚಿತ್ರದುರ್ಗ, ಮಂಡ್ಯ, ತುಮಕೂರಿನಲ್ಲಿ ತಲಾ ನಾಲ್ಕು ಮಂದಿ ಕಣದಿಂದ ಹಿಂದೆ ಸರಿದಿದ್ದಾರೆ. ಬೆಂಗಳೂರು ಉತ್ತರ, ಮತ್ತು ಹಾಸನದಿಂದ ತಲಾ ಒಬ್ಬರು ಉಮೇದುವಾರಿಕೆ ಹಿಂಪಡೆದಿದ್ದಾರೆ. ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಗಳಲ್ಲಿ ತಲಾ ಇಬ್ಬರು ನಾಮಪತ್ರ ಮರಳಿ ಪಡೆದಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರ ಮತ್ತು ದಕ್ಷಿಣ ಕನ್ನಡ ಕ್ಷೇತ್ರದಿಂದ ಯಾವುದೇ ಅಭ್ಯರ್ಥಿ ನಾಮಪತ್ರ ಹಿಂದಕ್ಕೆ ಪಡೆದಿರುವುದು ವರದಿಯಾಗಿಲ್ಲ.












Click it and Unblock the Notifications