ಲೋಕಸಭೆ ಚುನಾವಣೆ : 9 ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿಗಳಿಲ್ಲ!
ಬೆಂಗಳೂರು, ಸೆಪ್ಟೆಂಬರ್ 09 : 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದೆ. ಆದರೆ, 9 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕೊರತೆಯನ್ನು ಬಿಜೆಪಿ ಎದುರಿಸುತ್ತಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಖಾಸಗಿ ಸಂಸ್ಥೆಯ ಮೂಲಕ ನಡೆಸಿದ ಸಮೀಕ್ಷೆಯಲ್ಲಿಯೇ ಅಭ್ಯರ್ಥಿಗಳ ಕೊರತೆ ಇದೆ ಎಂಬ ವರದಿ ಬಂದಿದೆ. ಕಾಂಗ್ರೆಸ್-ಜೆಡಿಎಸ್ ಒಂದಾಗಿ ಚುನಾವಣೆ ಎದುರಿಸಿದರೆ ಕೆಲವು ಕ್ಷೇತ್ರಗಳಲ್ಲಿ ಕಠಣ ಸವಾಲು ಎದುರಿಸಬೇಕು ಎಂದು ವರದಿ ಹೇಳಿದೆ.
ವಿಜಯಪುರ ಮತ್ತು ದಾವಣಗೆರೆ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿದರೆ ಮಾತ್ರ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದು ಎಂಬುದು ವರದಿಯ ಮುಖ್ಯಾಂಶ. 9 ಕ್ಷೇತ್ರಗಳಲ್ಲಿ ಅಭ್ಯರ್ಥಿಯನ್ನು ಆಯ್ಕೆ ಮಾಡುವಂತೆ ಅಮಿತ್ ಶಾ ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ.
ಕಲಬುರಗಿ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಕೊರತೆ ಎದುರಿಸುತ್ತಿದೆ. ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿನಿಧಿಸುವ ಕ್ಷೇತ್ರವಿದು. ಖರ್ಗೆ ಅವರನ್ನು ಎದುರಿಸುವ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ.

9 ಕ್ಷೇತ್ರಗಳಲ್ಲಿ ಅಭ್ಯರ್ಥಿ ಕೊರತೆ
ಕರ್ನಾಟಕ ಬಿಜೆಪಿ ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಮಂಡ್ಯ, ರಾಯಚೂರು, ಚಾಮರಾಜನಗರ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕೊರತೆಯನ್ನು ಎದುರಿಸುತ್ತಿದೆ. ಈ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಎದುರಿಸುವ ಸಮರ್ಥ ಅಭ್ಯರ್ಥಿಗಳು ಪಕ್ಷಕ್ಕೆ ಸಿಕ್ಕಿಲ್ಲ ಎನ್ನುತ್ತಿದೆ ವರದಿ.

ಮೈತ್ರಿ ಮಾಡಿಕೊಂಡರೆ ಕಷ್ಟ
ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ರಚನೆ ಮಾಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರೆಸುವುದಾಗಿ ಘೋಷಣೆ ಮಾಡಿವೆ. ಒಂದು ವೇಳೆ ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ಕೆಲವು ಕ್ಷೇತ್ರಗಳಲ್ಲಿ ಗೆಲುವು ಕಷ್ಟವಾಗಲಿದೆ.
ಪಕ್ಷದ ಆಂತರಿಕ ಸಮೀಕ್ಷೆ ಪ್ರಕಾರ ಎರಡೂ ಪಕ್ಷಗಳ ಮೈತ್ರಿ ಮಾಡಿಕೊಂಡರೆ ತುಮಕೂರು, ಶಿವಮೊಗ್ಗ, ಮೈಸೂರು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಗೆಲುವು ಕಠಿಣವಾಗಲಿದೆ.

ಮಂಡ್ಯ ಗೆಲುವಿಗೆ ತಂತ್ರ
ಮಂಡ್ಯ ಜಿಲ್ಲೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಕರೆತರಬಹುದೇ? ಎಂದು ಚಿಂತನೆ ನಡೆಸುತ್ತಿದೆ. ಅದರಲ್ಲೂ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ನಾಯಕರ ಮೇಲೆ ಪಕ್ಷ ಕಣ್ಣಿಟ್ಟಿದೆ.
ಎನ್.ಚೆಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಮಾಜಿ ಸಚಿವ ಎ.ಮಂಜು, ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರನ್ನು ಪಕ್ಷಕ್ಕೆ ಕರೆತಂದರೆ ಲಾಭವಾಗಬಹುದೇ? ಎಂಬ ಲೆಕ್ಕಾಚಾರದಲ್ಲಿ ಬಿಜೆಪಿ ನಾಯಕರು ಇದ್ದಾರೆ.

ಕೋಲಾರ, ಚಿಕ್ಕಬಳ್ಳಾಪುರ
ಕೋಲಾರ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾಜಿ ಶಾಸಕ ನಾರಾಯಣಸ್ವಾಮಿ ವಿಧಾನಸಭೆ ಟಿಕೆಟ್ ಸಿಗಲಿಲ್ಲ ಎಂದು ಪಕ್ಷದ ಚಟುವಟಿಕೆಯಿಂದ ದೂರವಾಗಿದ್ದಾರೆ. ಆದ್ದರಿಂದ, ಹೊಸ ಅಭ್ಯರ್ಥಿಗಾಗಿ ಹುಡುಕಾಟ ನಡೆದಿದೆ. ಡಿ.ಎಸ್. ವೀರಪ್ಪ ಅವರ ಹೆಸರು ಕೇಳಿಬರುತ್ತಿದೆ.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಎಂ.ವೀರಪ್ಪ ಮೊಯ್ಲಿ ವಿರುದ್ಧ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ. ಬಿ.ಎನ್.ಬಚ್ಚೇಗೌಡರು ಕಳೆದ ಬಾರಿ ಸ್ಪರ್ಧೆ ಮಾಡಿದ್ದರು. ಆದರೆ, ವಯಸ್ಸಿನ ಕಾರಣದಿಂದಾಗಿ ಈ ಬಾರಿ ಅವರಿಗೆ ಟಿಕೆಟ್ ಕೈ ತಪ್ಪಬಹುದು ಎಂಬುದು ಸದ್ಯದ ಸುದ್ದಿ.

ಖರ್ಗೆ ವಿರುದ್ಧ ಯಾರು ಅಭ್ಯರ್ಥಿ
ಕಲಬುರಗಿ ಕ್ಷೇತ್ರದ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎದುರಿಸುವ ಬಿಜೆಪಿ ಅಭ್ಯರ್ಥಿ ಇನ್ನೂ ಸಿಕ್ಕಿಲ್ಲ. ಸೋಲಿಲ್ಲದ ಸರದಾರ ಎಂದೇ ಪ್ರಸಿದ್ಧಿಯಾಗಿರುವ ಖರ್ಗೆ ವಿರುದ್ಧ ಕಳೆದ ಚುನಾವಣೆಯಲ್ಲಿ ರೇವೂನಾಯಕ ಬೆಳಮಗಿ ಕಣಕ್ಕಿಳಿದಿದ್ದರು. ಆದರೆ, ಅವರು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಸೇರಿದ್ದು, ಬಿಜೆಪಿಗೆ ಅಭ್ಯರ್ಥಿಗಳ ಕೊರತೆ ಎದುರಾಗಿದೆ.












Click it and Unblock the Notifications