ಡಿ.ಕೆ.ಶಿವಕುಮಾರ್ಗೆ ಹೊಸ ಟಾಸ್ಕ್ ನೀಡಲಿದೆ ಹೈಕಮಾಂಡ್!
Recommended Video

ಬೆಂಗಳೂರು, ನವೆಂಬರ್ 19 : ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ದಾಖಲೆಯ ಜಯ ಸಾಧಿಸುವಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ಪಾತ್ರ ದೊಡ್ಡದು. ಈಗ ಪಕ್ಷದ ಹೈಕಮಾಂಡ್ ಅವರಿಗೆ ಮತ್ತೊಂದು ಟಾಸ್ಕ್ ನೀಡಲು ಮುಂದಾಗಿದೆ.
2019ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸುತ್ತಿದೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿರುವ ಕರ್ನಾಟಕದಲ್ಲಿ 20 + ಸ್ಥಾನಗಳಲ್ಲಿ ಜಯಗಳಿಸಬೇಕು ಎಂಬುದು ಪಕ್ಷದ ಗುರಿ. ಅದಕ್ಕಾಗಿ ಜೆಡಿಎಸ್ ಜೊತೆ ಮೈತ್ರಿಯನ್ನು ಸಹ ಮಾಡಿಕೊಳ್ಳಲಾಗುತ್ತಿದೆ.
ಡಿ.ಕೆ.ಶಿವಕುಮಾರ್ ಅತ್ಯುತ್ತಮ ಸಂಘಟನಾ ಚತುರ ಎಂಬುದು ಹಲವು ಸಂದರ್ಭದಲ್ಲಿ ಸಾಬೀತಾಗಿದೆ. ಲೋಕಸಭಾ ಚುನಾವಣೆಯಲ್ಲಿಯೂ ಅವರಿಗೆ ಮಹತ್ವದ ಜವಾಬ್ದಾರಿಯನ್ನು ನೀಡಿ, ಪಕ್ಷ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸುವಂತೆ ಮಾಡಲು ತಂತ್ರ ರೂಪಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೂವರು ಲೋಕಸಭಾ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ. ಪ್ರತಿ ಕ್ಷೇತ್ರಕ್ಕೂ ಪ್ರತ್ಯೇಕ ಕಾರ್ಯತಂತ್ರವನ್ನು ಕಾಂಗ್ರೆಸ್ ಪಕ್ಷ ಸಿದ್ಧಪಡಿಸಲಿದೆ....

ಚುನಾವಣಾ ಪ್ರಚಾರದ ಹೊಣೆ
ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ 2019ರ ಲೋಕಸಭಾ ಚುನಾವಣೆಯ ಪ್ರಚಾರದ ಉಸ್ತುವಾರಿಯನ್ನು ಹೈಕಮಾಂಡ್ ನೀಡುವ ಸಾಧ್ಯತೆ ಇದೆ. 2018ರ ಲೋಕಸಭಾ ಚುನಾವಣೆಯಲ್ಲಿಯೂ ಡಿ.ಕೆ.ಶಿವಕುಮಾರ್ ಅವರು ಪ್ರಚಾರದ ಹೊಣೆ ಹೊತ್ತುಕೊಂಡಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇರೆ ರಾಜ್ಯಗಳಲ್ಲಿ ಪ್ರಚಾರ ನಡೆಸಬೇಕಾಗಿದೆ. ಆದ್ದರಿಂದ, ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯದ ಚುನಾವಣಾ ಉಸ್ತುವಾರಿಯ ಹೊಣೆ ನೀಡುವ ಬಗ್ಗೆ ಚಿಂತನೆ ನಡೆದಿದೆ.

2013ರ ಚುನಾವಣೆ ಕಾರ್ಯತಂತ್ರ
ಕರ್ನಾಟಕ ಕಾಂಗ್ರೆಸ್ 2019ರ ಲೋಕಸಭಾ ಚುನಾವಣೆಗೆ 2013ರ ವಿಧಾನಸಭಾ ಚುನಾವಣೆ ಕಾರ್ಯತಂತ್ರವನ್ನು ಅನುಸರಿಸಲಿದೆ. ಸಾಮೂಹಿಕ ನಾಯಕತ್ವದಡಿ 2013ರ ಚುನಾವಣೆಯನ್ನು ಎದುರಿಸಲಾಗಿತ್ತು. ಪಕ್ಷ ಸ್ಪಷ್ಟ ಬಹುಮತವನ್ನು ಪಡೆದು ಅಧಿಕಾರ ಹಿಡಿದಿತ್ತು. 5 ವರ್ಷಗಳ ಕಾಲ ಸಿದ್ದರಾಮಯ್ಯ ಅವರು ಅಧಿಕಾರ ನಡೆಸಿದ್ದರು. ಎಲ್ಲರನ್ನೂ ಒಗ್ಗಟ್ಟಾಗಿ ತೆಗೆದುಕೊಂಡು ಹೋಗುವ ಶಕ್ತಿ ಡಿ.ಕೆ.ಶಿವಕುಮಾರ್ ಅವರಿಗೆ ಇದೆ. ಆದ್ದರಿಂದ, ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗುತ್ತದೆ.

ಸಿದ್ದರಾಮಯ್ಯಗೆ ಹೆಚ್ಚಿನ ಹೊಣೆ
2019ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಮಹತ್ವದ್ದಾಗಿರುತ್ತದೆ. ಈಗಾಗಲೇ ಅವರನ್ನು ಸಿಡಬ್ಲೂಸಿ ಸದಸ್ಯರನ್ನಾಗಿ ರಾಹುಲ್ ಗಾಂಧಿ ಅವರು ನೇಮಿಸಿದ್ದಾರೆ. ಕರ್ನಾಟಕದಲ್ಲಿ ಪಕ್ಷದ ಪರವಾಗಿ ಪ್ರಚಾರ ನಡೆಸುವ ಜೊತೆ ಬೇರೆ ರಾಜ್ಯದಲ್ಲೂ ಅವರು ಪ್ರಚಾರ ನಡೆಸಬೇಕಿದೆ. ಆದ್ದರಿಂದ, ರಾಜ್ಯದ ಮತ್ತೊಬ್ಬ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಹೆಚ್ಚಿನ ಹೊಣೆಗಾರಿಗೆ ನೀಡಲಾಗುತ್ತದೆ.

ಮೈತ್ರಿ ಮಾತುಕತೆ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲಿದೆ. ಡಿ.ಕೆ.ಶಿವಕುಮಾರ್ ಅವರು ಜೆಡಿಎಸ್ ನಾಯಕರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಆದ್ದರಿಂದ. ಮೈತ್ರಿ ಮಾತುಕತೆಯ ಮುಂಚೂಣಿಯಲ್ಲಿ ಡಿ.ಕೆ.ಶಿವಕುಮಾರ್ ಅವರು ಇರುವಂತೆ ಹೈಕಮಾಂಡ್ ನೋಡಿಕೊಳ್ಳಲಿದೆ.

ಎಲ್ಲಾ ಜವಾಬ್ದಾರಿಗಳು
ಗುಜರಾತ್ ಶಾಸಕರ ರೆಸಾರ್ಟ್ ವಾಸ್ತವ್ಯ, ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆ, ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಸೇರಿದಂತೆ ಎಲ್ಲಾ ಟಾಸ್ಕ್ಗಳನ್ನು ಡಿ.ಕೆ.ಶಿವಕುಮಾರ್ ಸಮರ್ಥವಾಗಿ ನಿಭಾಯಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಪ್ರಭಾವಿ ಒಕ್ಕಲಿಗ ಸಮುದಾಯದ ನಾಯಕರು. ಕೆಪಿಸಿಸಿ ಅಧ್ಯಕ್ಷ ಪಟ್ಟ ಬ್ರಾಹ್ಮಣ ನಾಯಕರ ಕೈಯಲ್ಲಿ ಇದೆ. ಆದ್ದರಿಂದ, ರಾಜ್ಯದ ಪ್ರಭಾವಿ ಸಮುದಾಯದ ನಾಯಕನಿಗೆ ಹೆಚ್ಚಿನ ಹೊಣೆಗಾರಿಕೆ ನೀಡುವುದು ಕಾಂಗ್ರೆಸ್ ಲೆಕ್ಕಾಚಾರವಾಗಿದೆ.












Click it and Unblock the Notifications