ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ 29 ಮಹಿಳಾ ಅಭ್ಯರ್ಥಿಗಳು ಕಣದಲ್ಲಿ
Recommended Video
ಬೆಂಗಳೂರು, ಏಪ್ರಿಲ್ 12 : ಕರ್ನಾಟಕದಲ್ಲಿ ಈ ಬಾರಿಯ ಲೋಕಸಭಾ ಚುನಾವಣಾ ಕಣದಲ್ಲಿ 29 ಮಹಿಳಾ ಅಭ್ಯರ್ಥಿಗಳಿದ್ದಾರೆ. 2014ರ ಚುನಾವಣೆಯಲ್ಲಿ 20 ಮಹಿಳೆಯರ ಪೈಕಿ ಒಬ್ಬರು ಮಾತ್ರ ಗೆದ್ದು ಸಂಸತ್ ಪ್ರವೇಶಿಸಿದ್ದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 18 ಮತ್ತು 23ರಂದು ಚುನಾವಣೆ ನಡೆಯಲಿದೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಪ್ರಾದೇಶಿಕ ಪಕ್ಷ ಜೆಡಿಎಸ್ ಹಾಗೂ ಪಕ್ಷೇತರರು ಸೇರಿ 29 ಮಹಿಳೆಯರು ಕಣದಲ್ಲಿದ್ದಾರೆ.
ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ್ ಪರಿಚಯ
2004ರ ಚುನಾವಣೆಯಲ್ಲಿ 10 ಮಹಿಳೆಯರು ಕಣದಲ್ಲಿದ್ದರು. 2014ರ ಚುನಾವಣೆಯಲ್ಲಿ 20 ಮಹಿಳೆಯರು ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಇವರಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದ್ದರು.
ಮಂಡ್ಯ : ಪಕ್ಷೇತರ ಅಭ್ಯರ್ಥಿ ಸುಮಲತಾ ನಾಮಪತ್ರ ವಾಪಸ್!
ಈ ಬಾರಿ ಮೊದಲ ಹಂತದ ಚುನಾವಣಾ ಕಣದಲ್ಲಿ 15, 2ನೇ ಹಂತದ ಚುನಾವಣಾ ಕಣದಲ್ಲಿ 14 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ತಲಾ ಒಬ್ಬರು ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡಿದೆ.
ಶೋಭಾ ಕರಂದ್ಲಾಜೆ
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ಅವರು ಕಣದಲ್ಲಿದ್ದಾರೆ. 2014ರ ಚುನಾವಣೆಯಲ್ಲಿಯೂ ಇದೇ ಕ್ಷೇತ್ರದಿಂದ ಅವರು ಗೆಲುವು ಸಾಧಿಸಿದ್ದರು. ಈ ಬಾರಿಯೂ ಪಕ್ಷ ಅವರಿಗೆ ಟಿಕೆಟ್ ನೀಡಿದೆ. ಎದುರಾಳಿ ಕಾಂಗ್ರೆಸ್-ಜೆಡಿಎಸ್ನ ಪ್ರಮೋದ್ ಮಧ್ವರಾಜ್.
ಸುಮಲತಾ ಅಂಬರೀಶ್
ಮಾಜಿ ಸಚಿವ ದಿ.ಅಂಬರೀಶ್ ಪತ್ನಿ ಸುಮಲತಾ ಅವರು ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಅವರು ಕಣಕ್ಕಿಳಿದಿದ್ದು, ಬಿಜೆಪಿ ಅವರಿಗೆ ಬೆಂಬಲವನ್ನು ನೀಡಿದೆ. ಎದುರಾಳಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ.
ವೀಣಾ ಕಾಶಪ್ಪನವರ್
ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ವೀಣಾ ಕಾಶಪ್ಪನವರ್ ಅವರು ಕಣದಲ್ಲಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಕೆಲಸ ಮಾಡಿರುವ ವೀಣಾ ಅವರು ಮೊದಲ ಬಾರಿಗೆ ಸಂಸತ್ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಎದುರಾಳಿ ಬಿಜೆಪಿಯ ಪಿ.ಸಿ.ಗದ್ದಿಗೌಡರ್.
ಡಾ. ಸುನಿತಾ ದೇವಾನಂದ ಚವ್ಹಾಣ್
ವಿಜಯಪುರ ಲೋಕಸಭಾ ಕ್ಷೇತ್ರದಿಂದ ಡಾ. ಸುನಿತಾ ದೇವಾನಂದ ಚವ್ಹಾಣ್ ಅವರು ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ. ವೈದ್ಯೆಯಾಗಿರುವ ಸುನಿತಾ ಅವರು ನಾಗಠಾಣಾ ಕ್ಷೇತ್ರದ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ್ ಅವರ ಪತ್ನಿ. ಮೊದಲ ಬಾರಿಗೆ ಅವರು ಚುನಾವಣಾ ಕಣಕ್ಕಿಳಿದಿದ್ದಾರೆ.
ಎಸ್.ವರಲಕ್ಷ್ಮೀ
ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸಿಪಿಎಂ ಪಕ್ಷದ ಅಭ್ಯರ್ಥಿಯಾಗಿ ಸಿಐಟಿಯು ರಾಜ್ಯ ಘಟಕದ ಅಧ್ಯಕ್ಷೆ ಎಸ್.ವರಲಕ್ಷ್ಮೀ ಅವರು ಕಣದಲ್ಲಿದ್ದಾರೆ. ಕ್ಷೇತ್ರದಿಂದ ಪ್ರಥಮ ಬಾರಿಗೆ ಮಹಿಳೆಯೊಬ್ಬರು ಕಣಕ್ಕಿಳಿದಿದ್ದಾರೆ. ಎದುರಾಳಿ ಕಾಂಗ್ರೆಸ್-ಜೆಡಿಎಸ್ನ ಎಂ.ವೀರಪ್ಪ ಮೊಯ್ಲಿ, ಬಿಜೆಪಿ ಬಿ.ಎನ್.ಬಚ್ಚೇಗೌಡ.
ಸುಮಲತಾ ಸಿದ್ದೇಗೌಡ
ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಎಂಬ ಹೆಸರಿನ ಮತ್ತೊಬ್ಬರು ಕಣದಲ್ಲಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಸುಮಲತಾ ಸಿದ್ದೇಗೌಡ ಎಂಬುವವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.