ಲೋಕಸಭಾ ಚುನಾವಣೆ 2019 : ಜೆಡಿಎಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
ಬೆಂಗಳೂರು, ಮಾರ್ಚ್ 10 : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಸೀಟು ಹಂಚಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. 28 ಕ್ಷೇತ್ರಗಳ ಪೈಕಿ 7 ಸ್ಥಾನಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಲಾಗಿದೆ.
'ಸೀಟುಗಳ ಸಂಖ್ಯೆಗಿಂತ ಹೆಚ್ಚು ಸ್ಥಾನಗಳನ್ನುಗಳಿಸುವುದು ನಮ್ಮ ಗುರಿ' ಎಂದು ಕಾಂಗ್ರೆಸ್-ಜೆಡಿಎಸ್ ಕೈ ಜೋಡಿಸಿವೆ. ಮೈಸೂರು, ತುಮಕೂರು ಮತ್ತು ಬೆಂಗಳೂರು ಉತ್ತರ ಕ್ಷೇತ್ರಗಳನ್ನು ಬಿಟ್ಟುಕೊಡುವ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ನಡೆಯಲಿದೆ.
ಲೋಕಸಭಾ ಚುನಾವಣೆ : ಕರ್ನಾಟಕ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
2014ರ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಆದ್ದರಿಂದ, ಈ ಬಾರಿ ಕ್ಷೇತ್ರವನ್ನು ಬಿಟ್ಟುಕೊಡಲು ಕಾಂಗ್ರೆಸ್ ಒಪ್ಪಿಗೆ ನೀಡಿಲ್ಲ. ದೇವೇಗೌಡರು ಮೈಸೂರು ಅಥವ ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದಾರೆ. ಕ್ಷೇತ್ರ ಇನ್ನೂ ಅಂತಿಮಗೊಂಡಿಲ್ಲ.
ಲೋಕಸಭಾ ಚುನಾವಣೆ 2019 : ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ
ಸದ್ಯ ಜೆಡಿಎಸ್ ಪಕ್ಷಕ್ಕೆ ಹಾಸನ, ಮಂಡ್ಯ, ಶಿವಮೊಗ್ಗ, ವಿಜಯಪುರ, ಉತ್ತರ ಕನ್ನಡ, ಬೆಂಗಳೂರು ಉತ್ತರ, ತುಮಕೂರು ಅಥವ ಮೈಸೂರು ಕ್ಷೇತ್ರಗಳು ಸಿಗಲಿವೆ. ಜೆಡಿಎಸ್ ತನ್ನ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಹ ಸಿದ್ಧಪಡಿಸಿದೆ......
ಬಿಜೆಪಿಯ 6 ಹಾಲಿ ಸಂಸದರಿಗೆ ಟಿಕೆಟ್ ನೀಡಲು ವಿರೋಧ
ಹಾಸನ ಕ್ಷೇತ್ರ
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಈಗಾಗಲೇ ಘೋಷಣೆ ಮಾಡಿರುವಂತೆ ಹಾಸನ ಕ್ಷೇತ್ರದಿಂದ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರು ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಹಾಸನ ಕ್ಷೇತ್ರ ಪ್ರಸ್ತುತ ಜೆಡಿಎಸ್ ಪಕ್ಷದ ವಶದಲ್ಲಿಯೇ ಇದ್ದು ಎಚ್.ಡಿ.ದೇವೇಗೌಡರು ಸಂಸದರು.
ಶಿವಮೊಗ್ಗ ಕ್ಷೇತ್ರ
ಎಚ್.ಡಿ.ದೇವೇಗೌಡರು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮಧು ಬಂಗಾರಪ್ಪ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. 2018ರ ನವೆಂಬರ್ನಲ್ಲಿ ನಡೆದ ಉಪ ಚುನಾವಣೆಯಲ್ಲಿಯೂ ಮಧು ಬಂಗಾರಪ್ಪ ಅಭ್ಯರ್ಥಿಯಾಗಿದ್ದರು ಸುಮಾರು 50 ಸಾವಿರ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು.
ಮಂಡ್ಯ ಕ್ಷೇತ್ರ
ಮಂಡ್ಯ ಕ್ಷೇತ್ರಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಲಿದ್ದಾರೆ. ಹಾಲಿ ಮಂಡ್ಯ ಕ್ಷೇತ್ರವೂ ಜೆಡಿಎಸ್ ವಶದಲ್ಲಿದ್ದು, ಎಲ್.ಆರ್.ಶಿವರಾಮೇಗೌಡ ಅವರು ಸಂಸದರಾಗಿದ್ದಾರೆ. ಹಾಲಿ ಸಂಸದರಿಗೆ ಟಿಕೆಟ್ ಈ ಬಾರಿ ಕೈ ತಪ್ಪಲಿದೆ. ನಿಖಿಲ್ ಕುಮಾರಸ್ವಾಮಿ ಅವರ ಸ್ಪರ್ಧೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.
ಬೆಂಗಳೂರು ಉತ್ತರ ಕ್ಷೇತ್ರ
ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಡಲಿರುವ ಎಚ್.ಡಿ.ದೇವೇಗೌಡ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಹಾಲಿ ಬಿಜೆಪಿ ವಶದಲ್ಲಿರುವ ಕ್ಷೇತ್ರದ ಸಂಸದರು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ. ದೇವೇಗೌಡ ಮತ್ತು ಸದಾನಂದ ಗೌಡರು ಮುಖಾಮುಖಿಯಾದರೆ ಕ್ಷೇತ್ರದ ಚುನಾವಣೆ ಕುತೂಹಲ ಮೂಡಿಸಲಿದೆ.
ತುಮಕೂರು ಕ್ಷೇತ್ರ
ಹಾಲಿ ಕಾಂಗ್ರೆಸ್ನ ಮುದ್ದ ಹನುಮೇಗೌಡ ಸಂಸದರಾಗಿರುವ ತುಮಕೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲು ಕಾಂಗ್ರೆಸ್ ಇನ್ನೂ ಒಪ್ಪಿಗೆ ನೀಡಿಲ್ಲ. ಜೆಡಿಎಸ್ಗೆ ಕ್ಷೇತ್ರ ಸಿಕ್ಕಿದರೆ ಎಂ.ಟಿ.ಕೃಷ್ಣಪ್ಪ, ರಮೇಶ್ ಬಾಬು ಅಥವ ಎಚ್.ನಿಂಗಪ್ಪ ಅವರು ಅಭ್ಯರ್ಥಿಯಾಗುವ ಸಾಧ್ಯತೆ ಇದೆ.
ಚಿಕ್ಕಮಗಳೂರು ಕ್ಷೇತ್ರ
ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ಗೆ ಸಿಗಲಿದೆ. ಭೋಜೇಗೌಡ ಅಥವ ಜಯಪ್ರಕಾಶ್ ಹೆಗ್ಡೆ ಅವರು ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಹಾಲಿ ಬಿಜೆಪಿವಶದಲ್ಲಿ ಕ್ಷೇತ್ರವಿದ್ದು, ಶೋಭಾ ಕರಂದ್ಲಾಜೆ ಅವರು ಸಂಸದರಾಗಿದ್ದಾರೆ.
ವಿಜಯಪುರ ಕ್ಷೇತ್ರ
ವಿಜಯಪುರ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲಾಗಿದೆ. ಜೆಡಿಎಸ್ನಿಂದ ಸಿದ್ದು ಬಂಡಿ ಅಥವ ರವಿ ಚವ್ಹಾಣ್ ಅವರು ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಪ್ರಸ್ತುತ ಕ್ಷೇತ್ರ ಬಿಜೆಪಿ ವಶದಲ್ಲಿದ್ದು, ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಸಂಸದರಾಗಿದ್ದಾರೆ.