ಲೋಕಸಭಾ ಚುನಾವಣೆ : ಬಿಜೆಪಿಯ ಉಸ್ತುವಾರಿ, ಸಂಚಾಲಕರ ಬದಲಾವಣೆ
Recommended Video

ಬೆಂಗಳೂರು, ಜನವರಿ 30 : ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಎಲ್ಲಾ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಬಿಜೆಪಿ ಹೈಕಮಾಂಡ್ ಪಕ್ಷದ ಕರ್ನಾಟಕ ಘಟಕಕ್ಕೆ ಸೂಚನೆ ನೀಡಿದೆ. ಪಕ್ಷದ ಸಂಘಟನೆಯಲ್ಲಿಯೂ ಕೆಲವು ಬದಲಾವಣೆಗಳನ್ನು ಮಾಡಲಾಗುತ್ತಿದೆ.
ಚುನಾವಣಾ ಕಾರ್ಯಗಳನ್ನು ಚುರುಕುಗೊಳಿಸಲು ಪಕ್ಷ ಚುನಾವಣಾ ಉಸ್ತುವಾರಿ ಮತ್ತು ಸಂಚಾಲಕರನ್ನು ಬದಲಾವಣೆ ಮಾಡಲು ಮುಂದಾಗಿದೆ. ಈಗಾಗಲೇ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದ್ದು, ಅವರನ್ನು ಬದಲಾವಣೆ ಮಾಡಲಾಗುತ್ತದೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷ ಚುನಾವಣೆಯನ್ನು ಎದುರಿಸಲಿದೆ. ಅಭ್ಯರ್ಥಿಗಳ ಆಯ್ಕೆಯ ವಿಚಾರದಲ್ಲಿಯೂ ಯಡಿಯೂರಪ್ಪ ಅವರ ತೀರ್ಮಾನವೇ ಅಂತಿಮ. ಹೈಕಮಾಂಡ್ ನಾಯಕರು ಅವರಿಗೆ ಪೂರ್ಣ ಜವಾಬ್ದಾರಿ ನೀಡಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವರು ಲೋಕಸಭಾ ಚುನಾವಣೆಗಾಗಿ ವಿಷನ್ 20+ ಯೋಜನೆ ರೂಪಿಸಿದ್ದಾರೆ. 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು ಎಂದು ತಂತ್ರಗಳನ್ನು ಹಣೆಯುತ್ತಿದ್ದಾರೆ. ಮತ್ತೊಂದು ಕಡೆ ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ ಚುನಾವಣೆಯನ್ನು ಎದುರಿಸಲಿವೆ.

ಸಭೆ ಕರೆದ ಮುರಳೀಧರರಾವ್
ಕರ್ನಾಟಕ ಬಿಜೆಪಿ ಉಸ್ತುವಾರಿ ಕೆ.ಮುರಳೀಧರರಾವ್ ಅವರು ಜನವರಿ 31ರಂದು ಚುನಾವಣಾ ಸಿದ್ಧತೆ ಕುರಿತು ಚರ್ಚೆ ನಡೆಸಲು ಸಭೆ ಕರೆದಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಲೋಕಸಭಾ ಕ್ಷೇತ್ರದ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.

ಉಸ್ತುವಾರಿಗಳ ಬದಲಾವಣೆ
ಲೋಕಸಭಾ ಚುನಾವಣೆಗೆ ಸಂಚಾಲಕರು ಮತ್ತು ಉಸ್ತುವಾರಿಗಳನ್ನು ನೇಮಕ ಮಾಡಿದ ಬಗ್ಗೆ ಹಲವು ಆಕ್ಷೇಪಗಳಿದ್ದವು. ಆದ್ದರಿಂದ, ಸಭೆಯಲ್ಲಿ ಚರ್ಚೆ ನಡೆಸಿ ಇವರನ್ನು ಬದಲಾವಣೆ ಮಾಡಲಾಗುತ್ತದೆ. ತಕ್ಷಣದಿಂದಲೇ ಪ್ರಚಾರ ಕಾರ್ಯವನ್ನು ಆರಂಭಿಸುವಂತೆ ನಾಯಕರಿಗೆ ಸೂಚನೆ ನೀಡಲಾಗುತ್ತದೆ.

ಮನೆ-ಮನೆ ಪ್ರಚಾರ
ಬೂತ್ ಮಟ್ಟದ ಕಾರ್ಯಕರ್ತರನ್ನು ಪ್ರಚಾರಕ್ಕೆ ಸಕ್ರಿಯವಾಗಿ ಬಳಸಿಕೊಳ್ಳಲಾಗುತ್ತದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ-ಮನೆಗೆ ತಲುಪಿಸಲಾಗುತ್ತದೆ. ಮತ್ತೊಮ್ಮೆ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಲಾಗುತ್ತದೆ.

ಟಿಕೆಟ್ ಫೈನಲ್
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕಳುಹಿಸಿದ ತಂಡ ರಾಜ್ಯದ 28 ಕ್ಷೇತ್ರಗಳಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಿದೆ. ಈ ಸಮೀಕ್ಷೆಯ ವರದಿಯನ್ನು ಇಟ್ಟುಕೊಂಡು ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಅದರಲ್ಲೂ ಯಡಿಯೂರಪ್ಪ ಅವರು ಸೂಚಿಸಿದ ವ್ಯಕ್ತಿಯೇ ಅಭ್ಯರ್ಥಿಯಾಗಲಿದ್ದಾರೆ.











Click it and Unblock the Notifications