ಮಂಡ್ಯದಿಂದ ಆರ್ ಅಶೋಕ್, ಚಾ. ನಗರದಿಂದ ಶ್ರೀನಿವಾಸ್ ಪ್ರಸಾದ್!
ಬೆಂಗಳೂರು, ಜೂನ್ 27: ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ಸರ್ವರೀತಿಯಲ್ಲಿ ಪ್ರಯತ್ನ ಸಾಗಿದೆ. ಈ ನಿಟ್ಟಿನಲ್ಲಿ ಲೋಕಸಭೆ ಚುನಾವಣೆಗೆ ಕರ್ನಾಟಕ ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಕರ್ನಾಟಕದಿಂದ ಸ್ಪರ್ಧಿಸಬಲ್ಲ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಲಾಗಿದ್ದು, ಮಂಡ್ಯದಿಂದ ಆರ್ ಅಶೋಕ್ ಹಾಗೂ ಚಾಮರಾಜನಗರದಿಂದ ಶ್ರೀನಿವಾಸ್ ಪ್ರಸಾದ್ ಅವರ ಹೆಸರು ನಿಗದಿಯಾಗಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ, ಪ್ರಭಾವಿ ಒಕ್ಕಲಿಗ ನಾಯಕ ಆರ್.ಅಶೋಕ್ ಅವರ ಹೆಸರನ್ನುರಾಜ್ಯ ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಪ್ರಸ್ತಾಪ ಮಾಡಿದ್ದಾರೆ.
ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಯಡಿಯೂರಪ್ಪ ಅವರ ಮನವಿಗೆ ಪುರಸ್ಕರಿಸಿದ್ದಾರೆ ಎಂಬ ಸುದ್ದಿ ಬಂದಿದೆ.ಈ ಸುದ್ದಿ ಪ್ರತಿಕ್ರಿಯಿಸಿದ ಆರ್ ಅಶೋಕ್, ಪಕ್ಷದ ಹಿರಿಯರ ನಿರ್ಧಾರಕ್ಕೆ ಬೆಲೆ ಕೋಡುತ್ತೇನೆ. ಪಕ್ಷ ಹೇಳಿದಂತೆ ನಾನು ನಡೆದುಕೊಳ್ಳುತ್ತೇನೆ ಎಂದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆ 7 ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲವೂ ಜೆಡಿಎಸ್ ಪಾಲಾಗಿದ್ದನ್ನು ಸ್ಮರಿಸಬಹುದು. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಮುಂದುವರೆಯುವುದೇ ಇಲ್ಲವೇ ಗೊತ್ತಿಲ್ಲ. ಆದರೆ, ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ತನ್ನ ಅಸ್ತಿತ್ವ ಹುಡುಕಾಟದಲ್ಲಂತೂ ಇದೆ.
ಇನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ವಿ ಶ್ರೀನಿವಾಸ ಪ್ರಸಾದ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ. ವೀರಶೈವ, ದಲಿತ, ನಾಯಕ, ಉಪ್ಪಾರ ಸಮುದಾಯಗಳ ಮತಗಳು ಇಲ್ಲಿ ನಿರ್ಣಾಯಕ.
3 ಕ್ಷೇತ್ರಗಳಿಗೆ ಉಪ ಚುನಾವಣೆ: ಮಂಡ್ಯ ಕ್ಷೇತ್ರದ ಜೆಡಿಎಸ್ ಸಂಸದ ಸಿಎಸ್ ಪುಟ್ಟರಾಜು ಅವರು ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಬಳ್ಳಾರಿ ಸಂಸದ ಶ್ರೀರಾಮುಲು ಅವರು ಮೊಳಕಾಲ್ಮೂರು ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಸಂಸದ ಬಿಎಸ್ ಯಡಿಯೂರಪ್ಪ ಅವರು ಶಿಕಾರಿಪುರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದು, ಈ ಮೂರು ಕ್ಷೇತ್ರಗಳಿಗೆ ಕ್ರಮವಾಗಿ ಆರ್ ಅಶೋಕ್, ಜೆ ಶಾಂತಾ ಹಾಗೂ ಬಿವೈ ರಾಘವೇಂದ್ರ ಅವರ ಹೆಸರುಗಳು ಕೇಳಿ ಬಂದಿವೆ.












Click it and Unblock the Notifications