ಮತ್ತೊಂದು ಸುತ್ತಿನ ರಾಜ್ಯ ಪ್ರವಾಸಕ್ಕೆ ಸಿದ್ಧರಾದ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು, ಫೆಬ್ರವರಿ 18 : ಆಪರೇಷನ್ ಕಮಲದಿಂದ ಕರ್ನಾಟಕ ಬಿಜೆಪಿ ನಾಯಕರ ಗಮನ ಲೋಕಸಭಾ ಚುನಾವಣೆಯತ್ತ ಗಮನಹರಿಸಿದೆ. ಪಕ್ಷದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಫೆಬ್ರವರಿ ಅಂತ್ಯದಿಂದ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಶಾಸಕರ ರೆಸಾರ್ಟ್ ರಾಜಕಾರಣ, ಬಜೆಟ್ ಅಧಿವೇಶನ, ಆಪರೇಷನ್ ಕಮಲ, ಆಪರೇಷನ್ ಕಮಲದ ಆಡಿಯೋ ಎಂದು ಕರ್ನಾಟಕ ಬಿಜೆಪಿ ನಾಯಕರು ಬ್ಯುಸಿಯಾಗಿದ್ದರು. ಆದ್ದರಿಂದ, ಲೋಕಸಭಾ ಚುನಾವಣೆಯತ್ತ ಹೆಚ್ಚು ಗಮನ ಹರಿಸಿರಲಿಲ್ಲ.
ಫೆ.10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿಯಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡುವ ಮೂಲಕ ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಈಗ ಪಕ್ಷದ ರಾಜ್ಯ ನಾಯಕರು ಸಹ ಚುನಾವಣೆಯತ್ತ ಹೆಚ್ಚು ಗಮನ ಹರಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸುವ ಗುರಿಯನ್ನು ಬಿಜೆಪಿ ಹೊಂದಿದೆ. ಮತ್ತೊಂದು ಕಡೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸಲಿವೆ....

ಯಡಿಯೂರಪ್ಪ ರಾಜ್ಯ ಪ್ರವಾಸ
75 ವರ್ಷದ ಬಿ.ಎಸ್.ಯಡಿಯೂರಪ್ಪ ಅವರು ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರಕ್ಕೂ ಅವರು ಭೇಟಿ ನೀಡಲಿದ್ದು, ಸಭೆ, ಸಮಾವೇಶಗಳನ್ನು ನಡೆಸಲಿದ್ದಾರೆ. 2018ರ ವಿಧಾನಸಭೆ ಚುನಾವಣೆ ಸಮುಯದಲ್ಲಿಯೂ ಅವರು ನವ ಕರ್ನಾಟಕ ಪರಿವರ್ತನಾ ಯಾತ್ರೆ ಹೆಸರಿನಲ್ಲಿ ರಾಜ್ಯ ಪ್ರವಾಸ ಮಾಡಿದ್ದರು.

15 ದಿನಗಳ ಪ್ರವಾಸ
ಮಾರ್ಚ್ ತಿಂಗಳ ಮೊದಲ ವಾರದಲ್ಲಿ ಯಡಿಯೂರಪ್ಪ ಅವರು ರಾಜ್ಯ ಪ್ರವಾಸವನ್ನು ಆರಂಭಿಸಲಿದ್ದಾರೆ. ಒಟ್ಟು 15 ದಿನಗಳ ಕಾಲ ಅವರು ರಾಜ್ಯದಲ್ಲಿ ಸಂಚಾರ ನಡೆಸಲಿದ್ದು, ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲಿದ್ದಾರೆ. 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲು ಸಹಕಾರ ನೀಡುವಂತೆ ರಾಜ್ಯದ ಜನರಿಗೆ ಮನವಿ ಮಾಡಲಿದ್ದಾರೆ.

ಮೈತ್ರಿ ಸರ್ಕಾರದ ವೈಫಲ್ಯ
ವಿವಿಧ ಜಿಲ್ಲೆಗಳಲ್ಲಿ ಸಮಾವೇಶ ನಡೆಸಲಿರುವ ಯಡಿಯೂರಪ್ಪ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಲಿದ್ದಾರೆ. ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿರುವ ಎರಡೂ ಪಕ್ಷಗಳನ್ನು ಬೆಂಬಲಿಸಬಾರದು ಎಂದು ಜನರಲ್ಲಿ ಮನವಿ ಮಾಡಲಿದ್ದಾರೆ.

ಮಾರ್ಚ್ 1ಕ್ಕೆ ಮೋದಿ ಆಗಮನ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 1ರ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಕಲಬುರಗಿಯಲ್ಲಿ ಮಧ್ಯಾಹ್ನ 2ಕ್ಕೆ ಹೈದರಾಬಾದ್-ಕರ್ನಾಟಕ ಭಾಗದ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಮಾವೇಶದ ಮೂಲಕವೇ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡುವ ನಿರೀಕ್ಷೆ ಇದೆ.












Click it and Unblock the Notifications