Lok Sabha Elections 2024: ಲೋಕಸಭಾ ಚುನಾವಣೆ ಮೇಲೆ ಸೋತ ಕಮಲ ಕಲಿಗಳ ಕಣ್ಣು; ಬಿಜೆಪಿಯಲ್ಲಿ ಟಿಕೆಟ್ ವಾರ್!?
ಬೆಂಗಳೂರು,ಜುಲೈ 15: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋತ ಹಲವು ಮಾಜಿ ಸಚಿವರು ಇದೀಗ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಫುಲ್ ಅಲರ್ಟ್ ಆಗಿದ್ದು, ಲೋಕಸಭಾ ಚುನಾವಣೆಗೆ ತೆರಮರೆಯಲ್ಲಿ ಕಸರತ್ತನ್ನ ಶುರು ಮಾಡಿದ್ದಾರೆ.
ಹೌದು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಬಳಿಕ, ಪಕ್ಷ ಸಂಘಟನೆ ಹಾಗೂ ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿದ್ದು, ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಹಾಕಿಕೊಂಡಿರುವ ಪ್ಲಾನ್ ಗೆ ಠಕ್ಕರ್ ಕೊಡಲು ಬಿಜೆಪಿ ಪಡೆ ಸಭೆಯ ಮೇಲೆ ಸಭೆಯನ್ನ ನಡೆಸುತ್ತಿದೆ.

ಈಗಾಗಲೇ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಸಂಪುಟದ ಹಲವು ಸಚಿವರು ಸೇರಿದಂತೆ ಪ್ರಭಾವಿ ನಾಯಕರು ಸೋಲು ಅನುಭವಿಸಿದ್ದು, ಇದೀಗ ಲೋಕಸಭಾ ಚುನಾವಣೆಯ ಕಾವು ಹೆಚ್ಚಾದಂತೆ ರಾಜ್ಯ ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಚರ್ಚೆ ಶುರುವಾಗಿದೆ.
ಕಾಂಗ್ರೆಸ್ ನಿಂದ ಬಂದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿದ್ದ ಹಲವು ಜನ ನಾಯಕರು ವಿಧಾನಸಭೆ ಚುನಾವಣೆಯಲ್ಲಿ ಸೋತ್ತಿದ್ದು, ಇದೀಗ ಲೋಕಸಮರದ ಕಣಕ್ಕಿಳಿಯಲು ಪ್ರಯತ್ನ ನಡೆಸುತ್ತಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಬಿ.ಸಿ ಪಾಟೀಲ್ ಹಾವೇರಿ ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದು, ಟಿಕೆಟ್ ಗಾಗಿ ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಸೋತ ವಿಧಾನಸಭಾ ಕ್ಷೇತ್ರವಾದ ಹಿರೇಕೆರೂರು ಕ್ಷೇತ್ರವನ್ನು ಮಗಳು ಸೃಷ್ಟಿ ಪಾಟೀಲ್ಗೆ ಬಿಡಲು ಬಿ ಸಿ ಪಾಟೀಲ್ ಪ್ಲ್ಯಾನ್ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇತ್ತ 2023 ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಈಶ್ವರಪ್ಪ ಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಟಿಕೆಟ್ ಕೈ ತಪ್ಪಿದ್ದು, ಪುತ್ರನಿಗೆ ಟಿಕೆಟ್ ನೀಡುವಂತೆ ಈಶ್ವರಪ್ಪ ಬೇಡಿಕೆ ಇಟ್ಟಿದ್ರು. ಆದರೆ, ಕೊನೆ ಕ್ಷಣದಲ್ಲಿ ಈಶ್ವರಪ್ಪ ಪುತ್ರ ಕಾಂತೇಶ್ ಗೂ ಸಹ ಟಿಕೆಟ್ ಕೈ ತಪ್ಪಿದ್ದು, ಇದೀಗ ಹಾವೇರಿ ಕ್ಷೇತ್ರದ ಮೇಲೆ ಈಶ್ವರಪ್ಪ ಪುತ್ರ ಕೆ.ಇ ಕಾಂತೇಶ್ ಕೂಡಾ ಕಣ್ಣಿಟ್ಟಿದ್ದಾರಂತೆ. ಮಗನಿಗೆ ಟಿಕೆಟ್ ಕೊಡಿಸಲು ಈಶ್ವರಪ್ಪ ಲಾಬಿ ನಡೆಸಿದ್ದಾರೆ ಎನ್ನಲಾಗಿದೆ.
ಇತ್ತ ಮಾಜಿ ಸಚಿವರಾಗಿದ್ದ ಡಾ ಕೆ ಸುಧಾಕರ್ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದು,ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸಲು ತೆರೆಮರೆಯಲ್ಲಿ ಕಸರತ್ತು ಆರಂಭಿಸಿದ್ದಾರೆ ಎನ್ನಲಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸಂಸದ ಬಿಎಸ್ ಬಚ್ಚೇಗೌಡ ಅವರ ಸ್ಥಾನದಲ್ಲಿ ಸ್ಪರ್ಧೆ ಮಾಡಲು ಮಾಜಿ ಸಚಿವ ಡಾ ಕೆ ಸುಧಾಕರ್ ಮುಂದಾಗಿದ್ದಾರೆ ಎನ್ನಲಾಗಿದೆ.
ಇನ್ನೂ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಮಾಜಿ ಸಚಿವ ಶ್ರೀರಾಮುಲು ಬಳ್ಳಾರಿ ಕ್ಷೇತ್ರದ ಮೇಲೆ ಕಣ್ಣೀಟ್ಟಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಕ್ಷೇತ್ರದಲ್ಲಿ ಸಂಸದ ವೈ ದೇವೀಂದ್ರಪ್ಪ ಅವರ ಬದಲು ಮಾಜಿ ಸಚಿವ ಶ್ರೀರಾಮುಲು ಟಿಕೆಟ್ ಆಕಾಂಕ್ಷಿಯಾಗಿದ್ದಾರಂತೆ ಎಂದು ತಿಳಿದು ಬಂದಿದೆ.

ಮಾಜಿ ಸಚಿವ ಆನಂದ್ ಸಿಂಗ್ ಕೂಡ ಕೊಪ್ಪಳ ಲೋಕಸಭಾ ಕ್ಷೇತ್ರ, ತುಮಕೂರು ಕ್ಷೇತ್ರದಿಂದ ಮಾಜಿ ಸಚಿವ ವಿ ಸೋಮಣ್ಣ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ಗಾಗಿ ಕೆಲ ನಾಯಕರು ಬಹಿರಂಗವಾಗಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಇನ್ನೂ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಮೇಲೆ ಮಾಜಿ ಸಚಿವ ಮುರುಗೇಶ್ ನಿರಾಣಿ ಕಣ್ಣೀಟ್ಟಿದ್ದಾರೆ ಎಂದು ಹೇಳಲಾಗಿದೆ.
ಇನ್ನೂ ಸ್ವಪಕ್ಷದ ನಾಯಕರ ವಿರುದ್ದವೇ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ ಅವರು ಕೂಡ ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅಲ್ಲದೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಸಹ ಶೋಭಾ ಕರಂದ್ಲಾಜೆ ಅವರ ಚಿಕ್ಕಮಗಳೂರು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಒಟ್ನಲಿ, ಕರ್ನಾಟಕ ಬಿಜೆಪಿಯಲ್ಲಿಯೇ ಲೋಕಸಭಾ ಚುನಾವಣೆಗಾಗಿ ಹಲವು ನಾಯಕರು ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಸೋತ ಮಾಜಿ ಸಚಿವರು ಟಿಕೆಟ್ ಗಾಗಿ ಕಸರತ್ತು ನಡೆಸಿದ್ದು, ಈ ಬಾರಿ ಬಿಜೆಪಿ ಪಾಳಯದಲ್ಲಿ ಲೋಕಸಭಾ ಟಿಕೆಟ್ ಗಾಗಿ ಹಲವು ಆಕಾಂಕ್ಷಿಗಳು ಬಹಿರಂಗವಾಗಿ ಬೇಡಿಕೆಯನ್ನ ಇಟ್ಟಿದ್ದು, ಎಲ್ಲಾ ಗೊಂದಲಗಳಿಗೂ ಶೀಘ್ರದಲ್ಲೇ ಉತ್ತರ ಸಿಗಲಿದೆ.












Click it and Unblock the Notifications