BJP-JDS ಮೈತ್ರಿ ಲೋಕಸಭಾ ಚುನಾವಣೆಗಷ್ಟೇ ಸೀಮಿತವೇ; ಮೋದಿ-ದೊಡ್ಡಗೌಡರ ಮಾತುಕತೆಯ ರಹಸ್ಯ ಬಿಚ್ಚಿಟ್ಟ ಯಡಿಯೂರಪ್ಪ
ದಾವಣಗೆರೆ, ಏಪ್ರಿಲ್ 16: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಆದರೆ ಈ ಮೈತ್ರಿ ಕೇವಲ ಚುನಾವಣೆಗಷ್ಟೇ ಸೀಮಿತವಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.
ಈ ಕುರಿತು ಮಂಗಳವಾರ ದಾವಣಗರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ಕೇವಲ ಲೋಕಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿಲ್ಲ, ಮುಂಬರುವ ಎಲ್ಲ ಚುನಾವಣೆಗಳಲ್ಲಿ ಮೈತ್ರಿ ಮುಂದುವರಿಯಲಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಡುವೆ ಮಾತುಕತೆಯಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಪಕ್ಷದ ಕೈ ಹಿಡಿಯಲಿವೆ ಎಂದು ಕಾಂಗ್ರೆಸ್ ನಾಯಕರ ಹೇಳಿಕೆ ಕುರಿತು ಯಡಿಯೂರಪ್ಪ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಅಲೆಯೆದರು ಎಲ್ಲ ಗ್ಯಾರಂಟಿ ಯೋಜನೆಗಳು ಸ್ತಬ್ಧಗೊಳ್ಳಲಿವೆ ಎಂದು ಹೇಳಿದರು.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತನಾಡಿ, ಹಣ, ಅಧಿಕಾರದ ಬಲದಿಂದ ಚುನಾವಣೆಯಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಜನತೆ ಈಗ ತಕ್ಕ ಉತ್ತರ ನೀಡಲು ಸಜ್ಜಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮಳವಳ್ಳಿಯಲ್ಲಿ ಇಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಎನ್ಡಿಎ ಅಭ್ಯರ್ಥಿ ಮಾನ್ಯ ಎಚ್.ಡಿ.ಕುಮಾರಸ್ವಾಮಿ ಅವರು ಜನಬಲದಿಂದ ಗೆಲ್ಲಲಿದ್ದಾರೆ. ಜನರ ಆಶೀರ್ವಾದ, ತಾಯಂದಿರ ಆಶೀರ್ವಾದದಿಂದ ಎನ್ಡಿಎ ಅಭ್ಯರ್ಥಿಗಳಿಗೆ ಗೆಲುವಾಗಲಿದೆ ಎಂದು ಇಲ್ಲಿ ಸೇರಿದ ಜನರು ಸಂದೇಶ ನೀಡಿದ್ದಾರೆ ಎಂದು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ದೇಶದ ಸುರಕ್ಷತೆ, ಅಭಿವೃದ್ಧಿ ಕಾರ್ಯಕ್ಕಾಗಿ ಮೋದಿಜೀ ಮತ್ತೊಮ್ಮೆ ಎಂದು ದೇಶ- ರಾಜ್ಯದ ಜನರು ತೀರ್ಮಾನ ಮಾಡಿದ್ದಾರೆ ಎಂದು ಅವರು ತಿಳಿಸಿದರು. ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮಣ್ಣು ಹಾಕುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿದೆ. ಪ್ರಧಾನಿ ಮೋದಿಜೀ ಅವರ ನೇತೃತ್ವದ ಎನ್ಡಿಎ ಕೂಟದಿಂದ ದೇಶದ ಸರ್ವಾಂಗೀಣ ಅಭಿವೃದ್ಧಿ ಆಗುತ್ತಿದೆ ಎಂದ ಅವರು, ಸಿದ್ದರಾಮಯ್ಯನವರು ಅಧಿಕಾರಕ್ಕೆ ಬರಲು 10 ಕೆಜಿ ಅಕ್ಕಿ ಕೊಡುವುದಾಗಿ ಆಶ್ವಾಸನೆ ಕೊಟ್ಟಿದ್ದರು. ಆದರೆ, ಕೊಟ್ಟ ಮಾತನ್ನು ಈಡೇರಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ನರೇಂದ್ರ ಮೋದಿಯವರು 5 ಕೆಜಿ ಅಕ್ಕಿಯನ್ನು ಬಡವರಿಗೆ ನೀಡುತ್ತಿದ್ದಾರೆ. ಕಾಂಗ್ರೆಸ್ ಸರಕಾರ ಅಕ್ಕಿ ಕೊಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಮದ್ಯ ಮೊದಲಾದವುಗಳ ಬೆಲೆ ಏರಿಸಿದ ಕಾಂಗ್ರೆಸ್ ಸರಕಾರವು ಅದನ್ನೇ ಮಹಿಳೆಯರ ಖಾತೆಗೆ 2 ಸಾವಿರದಂತೆ ಹಾಕುತ್ತಿದೆ ಎಂದು ರೈತರು ಮಾತನಾಡುತ್ತಿದ್ದಾರೆ ಎಂದು ಅವರು ವಿವರಿಸಿದರು. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಎಂದು ತಿಳಿಸಿದ್ದು, ಇನ್ನೊಂದೆಡೆ ಬಸ್ ಪ್ರಯಾಣ ದರವನ್ನು ಶೇ 30-40ರಷ್ಟು ಏರಿಸಿದ್ದಾರೆ ಎಂದು ಟೀಕಿಸಿದರು. ವಿದ್ಯುತ್ ದರ ದುಪ್ಪಟ್ಟಾಗಿದೆ. ಉಚಿತ ವಿದ್ಯುತ್ ಎನ್ನುತ್ತಾರೆ ಎಂದು ಆಕ್ಷೇಪಿಸಿದರು. ಒಂದು ಕೈಯಲ್ಲಿ ಕಿತ್ತುಕೊಂಡು ಮತ್ತೊಂದು ಕೈಯಲ್ಲಿ ಕೊಡುತ್ತಿದ್ದಾರೆ. ಒಟ್ಟಾರೆಯಾಗಿ ರಾಜ್ಯದ ಜನರಿಗೆ ಕಣ್ಣಿಗೆ ಮಣ್ಣೆರಚುವ ಕೆಲಸ ನಡೆದಿದೆ ಎಂದರು.
ರೈತರ, ಪರಿಶಿಷ್ಟ ಸಮುದಾಯದ ಕಾಳಜಿ ಇವರಿಗೆ ಇಲ್ಲ. ಮಕ್ಮಲ್ ಟೋಪಿ ಹಾಕಿ ಲೋಕಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್ ಮುಂದಾಗಿದೆ. ಇಂಥ ದುಷ್ಟ ಕಾಂಗ್ರೆಸ್ಸಿಗರಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ತಿಳಿಸಿದರು. ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಜನರಿಂದ, ಜನರಿಗಾಗಿ ಜನರಿಗೋಸ್ಕರ ಪ್ರಾಣ ಕೊಡಬಲ್ಲ ಕುಮಾರಸ್ವಾಮಿಯವರು ಗೆದ್ದು ಬರಬೇಕಾಗಿದೆ ಎಂದು ತಿಳಿಸಿದರು.












Click it and Unblock the Notifications