ಕರ್ನಾಟಕದ 28 ಲೋಕಸಭಾ ಸ್ಥಾನಗಳ ಪೈಕಿ ಬಿಜೆಪಿ ಗೆಲುವಿನ ಕ್ಷೇತ್ರಗಳೆಷ್ಟು..?
ಬೆಂಗಳೂರು, ಮೇ 28: ಕರ್ನಾಟಕದಲ್ಲಿ ಎರಡು ಹಂತದ ಲೋಕಸಭಾ ಚುನಾವಣೆ ನಡೆದಿದ್ದು, ಜೂನ್ 4ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲು ಒಂದು ವಾರ ಬಾಕಿ ಉಳಿದಿದೆ. ಇತ್ತ ಲೋಕಸಭಾ ಚುನಾವಣಾ ಫಲಿತಾಂಶಕ್ಕಾಗಿ ರಾಜಕೀಯ ನಾಯಕರು ಕಾಯುತ್ತಿದ್ದಾರೆ.
ಕರ್ನಾಟಕದ ಆಡಳಿತರೂಢ ಕಾಂಗ್ರೆಸ್ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳನ್ನ ಗೆಲ್ಲುವ ಗುರಿಯನ್ನ ಇಟ್ಟುಕೊಂಡಿದ್ರೆ, ಇತ್ತ ಲೋಕಸಭಾ ಚುನಾವಣೆಗೆ ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ 28 ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುವ ವಿಶ್ವಾಸದಲ್ಲಿದೆ.

ಆಂತರಿಕ ಮೌಲ್ಯಮಾಪನ ಬಿಜೆಪಿ ನಾಯಕರ ಕೈ ಸೇರಿದ್ದು, 17 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಎಂದು ಆಂತರಿಕ ವರದಿ ತಿಳಿಸಿದೆ. ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ತಾಲ್ಲೂಕು, ಜಿಲ್ಲಾ ಮಟ್ಟದ ಮುಖಂಡರ ವರದಿಯನ್ನ ಆಧರಿಸಿ ಮೌಲ್ಯಮಾಪನ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಇನ್ನೂ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣವು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಲ್ಲೋಲ ಕಲ್ಲೋಲವನ್ನ ಸೃಷ್ಟಿಸಿತ್ತು. ಲೈಂಗಿಕ ಹಗರಣದಲ್ಲಿ ಭಾಗಿಯಾಗಿರುವ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಗೆಲುವು ಅಸಾಧ್ಯ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರು ಗೆಲುವು ಸಾಧಿಸುತ್ತಾರಾ ಎಂಬ ಬಗ್ಗೆ ಕುತೂಹಲ ಮೂಡಿದೆ.
ಜೆಡಿಎಸ್ ಅಭ್ಯರ್ಥಿಯಾಗಿ ಮಂಡ್ಯದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೋಲಾರದಿಂದ ಮಲ್ಲೇಶಬಾಬು ಹಾಗೂ ಬೆಂಗಳೂರು ಗ್ರಾಮಾಂತರದಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಳಿಯ ಡಾ.ಸಿ.ಎನ್.ಮಂಜುನಾಥ್ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಏಪ್ರಿಲ್ 26 ರಂದು ಎರಡನೇ ಹಂತದಲ್ಲಿ ಮತದಾನ ನಡೆದ ದಕ್ಷಿಣ ಕರ್ನಾಟಕದಿಂದ 14 ಸ್ಥಾನಗಳಲ್ಲಿ ಬಿಜೆಪಿ 11 ಸ್ಥಾನಗಳನ್ನು ಪಡೆಯಬಹುದು. ಮೇ 7 ರಂದು ಮೂರನೇ ಹಂತದಲ್ಲಿ ಮತದಾನ ನಡೆದ ಉತ್ತರ ಕರ್ನಾಟಕದ 14 ಸ್ಥಾನಗಳಲ್ಲಿ ಆರು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಆಂತರಿಕ ವರದಿ ಹೇಳಿದೆ.
ಕಲ್ಯಾಣ-ಕರ್ನಾಟಕ ವಲಯದಲ್ಲಿ ಪಕ್ಷಕ್ಕೆ ಸೋಲು ಎದುರಾಗಿರಬಹುದು ಎಂದು ಆಂತರಿಕ ವರದಿಯಿಂದ ತಿಳಿದು ಬಂದಿದ್ದು, ಬೆಂಗಳೂರಿನ ನಾಲ್ಕು ಸ್ಥಾನಗಳು ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯು ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದು, ಅದರಲ್ಲೂ ವಿಶೇಷವಾಗಿ ಒಕ್ಕಲಿಗ ಭದ್ರಕೋಟೆಯಾಗಿರುವ ಹಳೇ ಮೈಸೂರು ಭಾಗದಲ್ಲಿ ಗೆಲುವು ಸಾಧಿಸಲಿದೆ.
2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25, ಜೆಡಿಎಸ್ ಮತ್ತು ಕಾಂಗ್ರೆಸ್ ತಲಾ ಒಂದು ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಒಬ್ಬರು ಸ್ವತಂತ್ರರು ಕೂಡ ಆಯ್ಕೆಯಾದರು. ಇದೀಗ ಕಲ್ಯಾಣ-ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳು ಕೈ ಹಿಡಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಈ ಹಿಂದೆ ಬಿಜೆಪಿ ಗೆದ್ದ ಸ್ಥಾನಗಳನ್ನ ಈ ಬಾರಿ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮಲೆನಾಡು-ಕರಾವಳಿ ಕರ್ನಾಟಕ ಮತ್ತು ಮುಂಬೈ-ಕರ್ನಾಟಕ ಪ್ರದೇಶಗಳಲ್ಲಿ ಪಕ್ಷವು ತನ್ನ ಸ್ಥಾನಗಳನ್ನು ಉಳಿಸಿಕೊಂಡಿದೆ ಎಂದು ಬಿಜೆಪಿಯ ಆಂತರಿಕ ಮೌಲ್ಯಮಾಪನ ಹೇಳುತ್ತದೆ.












Click it and Unblock the Notifications