ಬೆಳಗಾವಿಯಿಂದ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನಿಗೆ ಟಿಕೆಟ್: ಮೃಣಾಲ್ ಹೆಬ್ಬಾಳ್ಕರ್ ಹೇಳಿದ್ದೇನು?
ಬೆಳಗಾವಿ, ಮಾರ್ಚ್ 20: ಲೋಕಸಭಾ ಚುನಾವಣೆ ಆಡಳಿತರೂಢ ಕಾಂಗ್ರೆಸ್ ಗೆ ಪ್ರತಿಷ್ಠೆಯಾಗಿದ್ದು, ಟಿಕೆಟ್ ಹಂಚಿಕೆಯ ಕಸರತ್ತು ಜೋರಾಗಿ ನಡೆಯುತ್ತಿದೆ. ಲೋಕಸಭಾ ಚುನಾವಣಾ ಟಿಕೆಟ್ ಗಾಗಿ ಕೈ ಪಾಳಯದಲ್ಲಿ ಜಟಾಪಟಿ ಏರ್ಪಟ್ಟಿದ್ದು, ಬೆಳಗಾವಿಯಿಂದ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಗೆ ಟಿಕೆಟ್ ಬಹುತೇಕ ಫೈನಲ್ ಆಗಿದೆ ಎಂದು ಹೇಳಲಾಗಿದೆ.
ಈ ಕುರಿತು ಬುಧವಾರ ಮಾಧ್ಯಮಗಳ ಜೊತೆಗೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಗೆ ದುಡಿಯುತ್ತಿರುವೆ. ಕಾರ್ಯಕರ್ತರ ಕಷ್ಟ ಸುಖಗಳಿಗೆ ಸ್ಪಂದಿಸಿರುವೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುವೆ ಎಂದು ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಹೇಳಿದ್ದಾರೆ.

ಹೈಕಮಾಂಡ್ ನನ್ನನ್ನು ಗುರುತಿಸಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದರೆ, ಜಿಲ್ಲಾ ಹಾಗೂ ರಾಜ್ಯ ಮಟ್ಟದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸ್ಪರ್ಧೆಗಿಳಿಯುವೆ ಎಂದರು. ಎದುರಾಳಿ ಯಾರೇ ಇದ್ದರೂ ತಲೆಕೆಡಿಸಿಕೊಂಡಿಲ್ಲ. ನಮ್ಮ ಮುಖಂಡರಾದ ಸತೀಶ್ ಜಾರಕಿಹೊಳಿ ಅವರು, ಅಪಾರ ಸಂಖ್ಯೆಯ ಕಾರ್ಯಕರ್ತರ ಆಶೀರ್ವಾದದೊಂದಿಗೆ ಕಣಕ್ಕಿಳಿಯುವೆ ಎಂದು ಹೇಳಿದರು.
ಬೆಳಗಾವಿ ದಕ್ಷಿಣ ಕ್ಷೇತ್ರದ ಕಾರ್ಯಕರ್ತರ ಲಕ್ಷ್ಮೀ ಹೆಬ್ಬಾಳ್ಕರ್ ಸಭೆ
ನಮ್ಮ ಸರ್ಕಾರ ಕೊಟ್ಟ ಭಾಷೆಯನ್ನು ಉಳಿಸಿಕೊಂಡಿದೆ. ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ತನ್ಮೂಲಕ ಕಾರ್ಯಕರ್ತರಿಗೆ ಶಕ್ತಿ ತುಂಬಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಮುಖಂಡರ ಸಭೆಯಲ್ಲಿ ಮಾತನಾಡಿದ ಸಚಿವರು, ಬೆಳಗಾವಿ ದಕ್ಷಿಣದಲ್ಲಿ ಕಾಂಗ್ರೆಸ್ ಶಾಸಕರು ಇಲ್ಲದಿದ್ದರೂ ಯಾವುದೇ ಸ್ವಾರ್ಥ ರಾಜಕಾರಣ ಮಾಡಿಲ್ಲ. ಕಾಂಗ್ರೆಸ್ ಪಕ್ಷ ಎಂದರೆ ಬದ್ಧತೆ, ಬದ್ಧತೆಗೆ ಮತ್ತೊಂದು ಹೆಸರೇ ಕಾಂಗ್ರೆಸ್ ಪಕ್ಷ. ಬಸವಣ್ಣನವರ ತತ್ವ, ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಿರುವ ಸಂವಿಧಾನದ ಆಶಯದಂತೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದರು.
ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ನಾವು ಕೊಟ್ಟ ಮಾತು, ಕೊಟ್ಟ ಭರವಸೆಗಳನ್ನು ಜಾರಿಗೆ ತಂದಿದ್ದೇವೆ. ಕರ್ನಾಟಕ ಸರ್ಕಾರ ಬಂದು ಒಂಭತ್ತು ತಿಂಗಳು ಕಳೀತು. ಇದೀಗ ಮತ್ತೆ ಲೋಕಸಭಾ ಚುನಾವಣೆ ಬಂದಿದೆ. ಈ ಚುನಾವಣೆಯಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಜವಾಬ್ದಾರಿ ಹೆಚ್ಚಿದೆ ಎಂದು ಹೇಳಿದರು. ಈ ಭಾಗದಲ್ಲಿ ಪಕ್ಷ ಸಂಘಟಿಸುವ ಸಲುವಾಗಿ ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ದಕ್ಷಿಣ ಕ್ಷೇತ್ರದ ಬಗ್ಗೆ ಸಾಕಷ್ಟು ಕಾಳಜಿ ತೆಗೆದುಕೊಂಡಿದ್ದಾರೆ ಎಂದರು.
ಅಂಗನವಾಡಿ ಕಾರ್ಯಕತೆರ್ಯರಿಗೆ ಇತ್ತೀಚೆಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಅವರ ಕೆಲಸದ ಒತ್ತಡವನ್ನು ನಿವಾರಿಸಬೇಕೆಂದು ಮನವಿ ಪತ್ರ ನೀಡಲು ಬಂದಿದ್ದರು. ಚುನಾವಣೆಗೆ ಸಂಬಂಧಪಟ್ಟಂತೆ ನಾನು ಸಭೆ ನಡೆಸಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ನೀತಿ ಸಂಹಿತೆ ಉಲ್ಲಂಘಿಸಿ ಸಚಿವರು ಅಂಗವಾಡಿ ಕಾರ್ಯಕರ್ತೆಯರ ಸಭೆ ನಡೆಸಿದ್ದಾರೆ ಎಂದು ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಇತ್ತೀಚೆಗೆ ಪಲ್ಸ್ ಪೊಲೀಯೋ, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸರ್ವೆ ಮಾಡಿದ್ದರು. ಈಗ ಬಿಎಲ್ಒ ಆಗಿ ಕೆಲಸ ಮಾಡ್ತಿದ್ದಾರೆ. ಬಿಎಲ್ಒ ಆಗಲು ನಮಗೆ ತೊಂದರೆ ಆಗುತ್ತಿದೆ ಎಂದು ನನಗೆ ಹೇಳಲು ಬಂದಿದ್ದಾರೆ. ಆದರೆ, ನಾನೇ ಅವರಿಗೆ ತಿಳಿ ಹೇಳಿ ಕೆಲಸ ಮಾಡಲು ಸೂಚಿಸಿದೆ ಎಂದರು.
ನಿಯಮ ಉಲ್ಲಂಘಿಸಿಲ್ಲ
ಚುನಾವಣೆ ವೇಳೆ ದೂರು ನೀಡುವುದು ಸರ್ವೆ ಸಾಮಾನ್ಯ. ದೂರು ಕೊಡಲಿ, ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ನಾನು ನಿಯಮ ಉಲ್ಲಂಘಿಸಿಲ್ಲ. ನಾನು ದೇಶದ ಕಾನೂನಿಗೆ ಗೌರವ ಕೊಡುತ್ತೇನೆ. ನನಗೆ ಇದು ಐದನೇ ಚುನಾವಣೆ. ನನಗೆ ಚುನಾವಣೆ ಎದುರಿಸುವುದು ಹೇಗೆ ಎಂಬುದು ಗೊತ್ತು ಎಂದು ಸಚಿವರು ಹೇಳಿದರು.












Click it and Unblock the Notifications