ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳುತ್ತಾರೆ: ಯತೀಂದ್ರ
ಮೈಸೂರು, ಏಪ್ರಿಲ್ 22: ಬಿಜೆಪಿ ಅಧಿಕಾರಕ್ಕೆ ಬಂದರೆ ಕೇವಲ ಹಿಂದೂಗಳು ಮಾತ್ರವಲ್ಲ ಎಲ್ಲಾ ಧರ್ಮದ ಮಹಿಳೆಯರು ದೇಶದಲ್ಲಿ ಕೋಮುಗಲಭೆ, ಗಲಾಟೆ, ದಳ್ಳುರಿಯಿಂದ ತಮ್ಮ ಗಂಡಂದಿರು, ಮಕ್ಕಳನ್ನು, ಮಂಗಳಸೂತ್ರವನ್ನು ಕಳೆದುಕೊಳ್ಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಹೇಳಿದ್ದಾರೆ.
ರಾಜಸ್ಥಾನದ ಬನ್ಸ್ವಾರಾದಲ್ಲಿ ಭಾನುವಾರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿ ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲ ಮಹಿಳೆಯರು ತಮ್ಮ ಗಂಡಂದಿರು, ಮಕ್ಕಳನ್ನು ಸಹ ಕಳೆದುಕೊಳ್ಳುತ್ತಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಕೋಮುಗಲಭೆ, ದೊಂಬಿ ಮಾಡುತ್ತಾರೆ. ಗಲಾಟೆ ಮಾಡಿ ಮಕ್ಕಳನ್ನು ಸಾಯುವಂತೆ ಮಾಡುತ್ತಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಒಬ್ಬರನ್ನೊಬ್ಬರು ಬಡಿದಾಡಿಕೊಳ್ಳುವಂತೆ ಮಾಡುತ್ತಾರೆ ಎಂದು ಟೀಕಿಸಿದರು.

70 ವರ್ಷಗಳಿಂದ ರಾಜ್ಯದಲ್ಲಿ ವಿವಿಧ ಪಕ್ಷ ಆಡಳಿತ ನಡೆಸಿವೆ ಹಿಂದುಗಳಿಗೆ ಅನ್ಯಾಯ ಆಗಿಲ್ಲ. ಸಮಾಜವನ್ನು ಪತನಕ್ಕೆ ಹೋಗುವಂತೆ ಮಾಡ್ತಾರೆ, ಮಕ್ಕಳನ್ನು ಕೋಮು ಗಲಭೆಯಲ್ಲಿ ತೊಡಗಿಸಿ ನಿರುದ್ಯೋಗಿಯಾಗಿ ಮಾಡುತ್ತಾರೆ.ಯಾವುದೇ ಪ್ರಜಾ ಪ್ರಭುತ್ವದಲ್ಲೂ ಈ ರೀತಿ ಮಾತನಾಡೋದಿಲ್ಲ, ಮೋದಿ ಅವರು ತುಚ್ಛವಾಗಿ ಮಾತನಾಡಿದ್ದಾರೆ. ಮತೀಯ ಭಾವನೆ ಕೆರಳಿಸುವ ರೀತಿ ಮೋದಿ ಮಾತನಾಡಿದ್ದಾರೆ. ಚುನಾವಣಾ ಆಯೋಗ ಯಾಕೆ ಕಣ್ಣು ಮುಚ್ಚಿ ಕುಳಿತಿಯೋ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಹೇಳಿದರು.
ರಾಜಸ್ಥಾನದ ಬನ್ಸ್ವಾರಾದಲ್ಲಿ ನಿನ್ನೆ ಲೋಕಸಭಾ ಚುನಾವಣಾ ಪ್ರಚಾರ ರ್ಯಾಲಿ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡಲಿದೆ ಎಂದಿದ್ದರು. ದೇಶದ ಸಂಪನ್ಮೂಲಗಳ ಮೇಲೆ ಅಲ್ಪಸಂಖ್ಯಾತರಿಗೆ ಮೊದಲ ಹಕ್ಕು ಇದೆ ಎಂಬ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ ಮೋದಿ, ಕಾಂಗ್ರೆಸ್ ಮಹಿಳೆಯರಿಂದ ಮಂಗಳಸೂತ್ರಗಳನ್ನು ಕಸಿದುಕೊಂಡು ನುಸುಳುಕೋರರಿಗೆ ನೀಡಲಿದೆ ಎಂದು ಟೀಕಿಸಿದ್ದರು.
ಪ್ರಧಾನಿ ಸ್ಥಾನಕ್ಕೆ ಅಗೌರವ ತರುವಂಥ ಮಾತುಗಳು: ಸಿಎಂ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾನ ಆಸ್ತಿ ಹಂಚಿಕೆ ಮಾಡುತ್ತಾರೆ, ಮಹಿಳೆಯರ ಮಾಂಗಲ್ಯವನ್ನು ಮುಸ್ಲಿಂ ಮರಿಗೆ ಕೊಡುತ್ತಾರೆ ಎಂದು ಪ್ರಧಾನಮಂತ್ರಿ ಆರೋಪ ಮಾಡಿದ್ದಾರೆ. ಪ್ರಧಾನಿಯಾಗಿ ಅವರು ಇಷ್ಟು ಕೆಳಮಟ್ಟದಲ್ಲಿ ಮಾತನಾಡ ಬಾರದಿತ್ತು. ಹಿಂದೂಗಳ ಮಂಗಳಸೂತ್ರವನ್ನು ತೆಗೆದು ಮುಸ್ಲಿಮರಿಗೆ ನೀಡುತ್ತಾರೆ ಎನ್ನುವುದು ಅವರ ಸ್ಥಾನಕ್ಕೆ ಅಗೌರವ ತರುವಂಥ ಮಾತುಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ದೇಶದ ಪ್ರಧಾನ ಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು. ಇಂಥ ಮಾತುಗಳು ಅವರಿಗೆ ಶೋಭೆ ತರುವುದಿಲ್ಲ. ಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣವಾಗಬೇಕಾದರೆ ಎಲ್ಲಾರೂ ಮುಖ್ಯವಾಹಿನಿಗೆ ಬರಬೇಕು. ಕೆಲವೇ ಜನರ ಕೈಯಲ್ಲಿ ಅಧಿಕಾರ, ಸಂಪತ್ತು ಇದ್ದರೆ ಇದು ಆಗುವುದಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ಅಸಮಾನತೆ ಹೋಗಬೇಕಾದರೆ ಅಧಿಕಾರ ಮತ್ತು ಸಂಪತ್ತು ಕೆಲವರ ಕೈಯಲ್ಲಿ ಇರಬಾರದು, ಹಂಚಿಕೆಯಾಗಬೇಕೆಂದು ಹೇಳಿದ್ದಾರೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಮಗೆ ನಂಬಿಕೆ ಇದೆ ಎಂದರು.












Click it and Unblock the Notifications